ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಮತ್ತೆ ಕರೋನಾದ ಎರಡನೆಯ ಅಲೆಯು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ರವರು ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ ಕೊವಿಡ್ ಲಸಿಕಾ ಜಾಗೃತಿ ಅಭಿಯಾನದ ಆಂಬ್ಯುಲೆನ್ಸ್ಗಳಿಗೆ ಹಸಿರು ಧ್ವಜವನ್ನು ತೋರಿಸುವ ಮೂಲಕ ಚಾಲನೆ ನೀಡಿದರು.
ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಿವಮೊಗ್ಗ ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಕೋವಿಡ್ ಲಸಿಕೆಯ ಮಹತ್ವ ಮತ್ತು ನಾವು ತೆಗೆದುಕೊಳ್ಳುತ್ತಿರುವ ಮುಂಜಾಗೃತ ಕ್ರಮಗಳನ್ನು ಮುಂದುವರೆಸಿಕೊಂಡು ಹೋಗುವಂತೆ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದರು.
ಶಿವಮೊಗ್ಗ ಜಿಲ್ಲೆಯಲ್ಲಿ 112 ಸರ್ಕಾರಿ ಹಾಗೂ 11 ಖಾಸಗಿ ಆಸ್ಪತ್ರೆಗಳಲ್ಲಿಯೂ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದ್ದು 60 ವರ್ಷ ಮೇಲ್ಪಟ್ಟ ಹಾಗೂ 45-59 ವರ್ಷದ ಆರೋಗ್ಯ ತೊಂದರೆ ಇರುವ ಫಲಾನುಭವಿಗಳು ತಮ್ಮ ಹತ್ತಿರದ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ತೆರಳಿ ಲಸಿಕೆ ಪಡೆಯಬಹುದು. 45-59 ವರ್ಷದವರು ತಮಗೆ ಇರುವ ಕಾಯಿಲೆ ಬಗ್ಗೆ ವೈದ್ಯರಿಂದ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ತರುವುದು.
ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಸಹ ಈ ಕೋವಿಡ್ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಲ್ಲಾ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ ಅಥವಾ ಇತರೆ ಯಾವುದೇ ಗುರುತಿನ ಚೀಟಿ ಮತ್ತು ಮೊಬೈಲ್ ತರಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಎಲ್ಲರಿಗೂ ಉಚಿತವಾಗಿ ನೀಡಲಾಗುತ್ತದೆ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತೀ ಡೋಸ್ಗೆ 250ರೂ. ಪಾವತಿಸಿ ಲಸಿಕೆ ಪಡೆಯಬಹುದಾಗಿದೆ. ಶಿವಮೊಗ್ಗ ಜಿಲ್ಲೆಯ 121 ಕೋವಿಡ್ ಲಸಿಕಾ ಕೇಂದ್ರಗಳು ಆನ್ಲೈನ್ನಲ್ಲಿ ಪ್ರಚಾರಪಡಿಸಿದ್ದು ಕೋವಿನ್ ಆಪ್ ಅಥವಾ ಆರೋಗ್ಯಸೇತು ಆಪ್ ಮೂಲಕ ದಾಖಲಿಸಿಕೊಂಡು ಅಥವಾ ನಿಮ್ಮ ಹತ್ತಿರದ ಆಸ್ಪತ್ರೆಗೆ ತೆರಳಿ ದಾಖಲಾತಿ ಮಾಡಿಸಿಕೊಂಡು ಲಸಿಕೆ ಪಡೆಯಬಹುದು.
ಕೋವಿಡ್ ಲಸಿಕೆಯು ತುಂಬಾ ಸುರಕ್ಷಿತವಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಂಡು ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿಗಳು ಕೋರಿರುತ್ತಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿಯವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೋವಿಡ್ ಎರಡನೆಯ ಅಲೆಯು ಹೆಚ್ಚಾಗಿದ್ದು, ಸರ್ಕಾರವು ಸಾರ್ವಜನಿಕರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಕೇವಲ ಸರ್ಕಾರಿ ಆಸ್ಪತ್ರೆಗಳಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಲಸಿಕಾ ಕೇಂದ್ರವನ್ನು ಪ್ರಾರಂಭಿಸಿ ಸಾರ್ವಜನಿಕರಿಗೆ ಸೇವೆಯನ್ನು ಪಡೆಯಲು ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿಯ ಹಿಂಜರಿಕೆಯಿಲ್ಲದೇ ಲಸಿಕಾ ಕೇಂದ್ರಗಳಿಗೆ ತೆರಳಿ ಲಸಿಕೆಯನ್ನು ಪಡೆದು, ಕಡ್ಡಾಯವಾಗಿ ಮಾಸ್ಕ್ ಮತ್ತು ವ್ಯಕ್ತಿಗತ ಅಂತರವನ್ನು ಕಾಪಾಡಿಕೊಂಡು ನಿಮ್ಮ ಆರೋಗ್ಯವನ್ನು ಕಾಪಾಡಿಕೊಂಡು, ಕರೋನಾ ವಿರುದ್ದ ಹೋರಾಡಬೇಕೆಂದು ಮನವಿ ಮಾಡಿಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ವೈದ್ಯಾಧಿಕಾರಿಗಳು ಹಾಗೂ ನಗರದ ಎಲ್ಲಾ ಆಸ್ಪತ್ರೆಯ ವೈದ್ಯರುಗಳು ಹಾಗೂ ಇತರೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post