ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಥವಾ ಮುಂದುವರಿಸುವ ವಿಚಾರ ಪಕ್ಷದ ಹೈಕಮಾಂಡ್ಗೆ ಬಿಟ್ಟ ವಿಷಯ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ರಾಜ್ಯಾಧ್ಯಕ್ಷರಾದ ನಂತರ ಅವರ ನೇತೃತ್ವದಲ್ಲಿ ಹಲವು ಹೋರಾಟಗಳು ಹಾಗೂ ಪಾದಯಾತ್ರೆಗಳು ನಡೆದಿದ್ದು, ಪಕ್ಷ ಸಂಘಟನೆ ಬಲಪಡಿಸಲಾಗಿದೆ ಎಂದು ಹೇಳಿದರು. “ಅವರನ್ನೇ ಮುಂದುವರಿಸಿದರೂ ತಪ್ಪೇನಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಕುರಿತು ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ ಅವರು, ಪಕ್ಷದಿಂದ ಉಚ್ಚಾಟಿತರಾದ ನಾಯಕರನ್ನು ಮರು ಸೇರ್ಪಡೆ ಮಾಡುವ ವಿಚಾರದಲ್ಲಿ ಅವರ ನಡವಳಿಕೆಯನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ಇದೇ ವೇಳೆ, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಯನ್ನು ಉಲ್ಲೇಖಿಸಿದ ರಾಘವೇಂದ್ರ, ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಕೆಲವು ನ್ಯೂನತೆಗಳು ಕಂಡುಬಂದಿದ್ದು, ಮರು ಅರ್ಜಿ ಆಹ್ವಾನಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು.
Also read: ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್
ಕಳೆದ ಮೂರುವರೆ ವರ್ಷಗಳಲ್ಲಿ ದಾಖಲೆಗಳಿಲ್ಲದೆ ಮೃತಪಟ್ಟ ಸುಮಾರು 1.25 ಲಕ್ಷ ಮಹಿಳೆಯರ ಹೆಸರಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗವಾಗಿರುವ ಸಾಧ್ಯತೆಗಳಿದ್ದು, ಇದರ ಬಗ್ಗೆ ತನಿಖೆ ನಡೆಸುವ ಅಗತ್ಯವಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಬೇಕೆಂಬ ಉದ್ದೇಶ ಇದ್ದರೂ, ಪ್ರಸ್ತುತ ಶೇ. 20ರಿಂದ 25ರಷ್ಟು ಜನರಿಗೆ ಮಾತ್ರ ಇದರ ಪ್ರಯೋಜನ ಸಿಗುತ್ತಿದೆ. ಯುವನಿಧಿ ಯೋಜನೆಯೂ ಕೇವಲ ಶೇ. 20ರಿಂದ 22ರಷ್ಟು ಪದವೀಧರರಿಗೆ ಮಾತ್ರ ತಲುಪಿದೆ ಎಂದು ಅವರು ಹೇಳಿದರು. ಈ ಹಿನ್ನೆಲೆಯಲ್ಲಿ ಯೋಜನೆಗಳ ಮರುಪರಿಶೀಲನೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಭ್ರಷ್ಟಾಚಾರದ ವಿರುದ್ಧ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಬೇಕಿದ್ದು, ಕೇವಲ ಹೇಳಿಕೆಗಳಲ್ಲದೆ ಕಟ್ಟುನಿಟ್ಟಿನ ಕ್ರಮ ಜಾರಿಗೆ ಬರಬೇಕು ಎಂದು ಒತ್ತಾಯಿಸಿದರು. ಶಿವಮೊಗ್ಗದ ಎಸ್ಡಿಎ ಅಧಿಕಾರಿಯ ಆತ್ಮಹತ್ಯೆ ಘಟನೆಗೂ ಅವರು ಉಲ್ಲೇಖ ಮಾಡಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿ ರಾಜ್ಯದ ಆರ್ಥಿಕ ಕೊರತೆ ರಾಜ್ಯದ ಸ್ವಂತ ಯೋಜನೆಗಳಿಂದ ಉಂಟಾಗಿದೆ ಎಂದು ಹೇಳಿರುವುದನ್ನೂ ಅವರು ಪ್ರಸ್ತಾಪಿಸಿದರು.
ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ರಿಸಾರ್ಟ್ ರಾಜಕೀಯ ಮತ್ತು ಕ್ರಾಸ್ ವೋಟಿಂಗ್ ಭೀತಿ ಎದುರಾಗಿರುವುದರಿಂದ ಶಾಸಕರಲ್ಲಿ ವಿಶ್ವಾಸ ನಿರ್ಮಾಣ ಅಗತ್ಯವಿದೆ ಎಂದು ಹೇಳಿದರು.
ಇನ್ನೊಂದೆಡೆ, ರಾಜ್ಯದಲ್ಲಿ ಯೂರಿಯಾ ಗೊಬ್ಬರದ ಕೊರತೆ ಉಂಟಾಗಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕೇಂದ್ರ ಸರ್ಕಾರವು ಪ್ರತಿವರ್ಷ 3 ಲಕ್ಷ ಕೋಟಿ ರೂ. ಸಬ್ಸಿಡಿ ನೀಡುತ್ತಿದ್ದರೂ, ಕೃತಕ ಅಭಾವ ಸೃಷ್ಟಿಯಾಗುತ್ತಿರುವ ಬಗ್ಗೆ ಅನುಮಾನವಿದೆ. ಯೂರಿಯಾವನ್ನು ಕೈಗಾರಿಕೆಗಳಿಗೆ ಬಳಸುತ್ತಿರುವುದರಿಂದ ಕಾಳಸಂತೆಯಲ್ಲಿ ದುರುಪಯೋಗವಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರಾಘವೇಂದ್ರ ಆಗ್ರಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Comments 1