ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ವೃತ್ತಿಪರ ಶಿಕ್ಷಣ ಮತ್ತು ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಜೊತೆಗೆ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಂತೆ ನಗರದ ಪ್ರಮುಖ ಸ್ಥಳದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಹಾಗೂ ಪ್ರಸ್ತಾಪಿಸಲಾಗಿರುವ ಆಯುಷ್ ವಿಶ್ವವಿದ್ಯಾಲಯ ಆರಂಭಿಸಲು ವಿಶೇಷ ಗಮನ ಹರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ Minister Madhu Bangarappa ಹೇಳಿದರು.
ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಜನತೆಗೆ ಅವರು ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.
ಜಿಲ್ಲೆಯಲ್ಲಿ ಹಲವು ದಶಕಗಳಿಂದ ಕಗ್ಗಂಟಾಗಿರುವ ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ಬಗರ್ಹುಕುಂ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲಿ ಸದರಿ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮವಹಿಸಲಾಗುವುದು ಎಂದರು.
ಅರಣ್ಯ ಮತ್ತು ಕಂದಾಯ ಇಲಾಖೆಯ ನಡುವಿನ ಭೂಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಉದ್ದೇಶಿಸಲಾಗಿದೆ. ಜಿಲ್ಲೆಯಲ್ಲಿ ಪ್ರಧಾನ ಹಾಗೂ ವಾಣಿಜ್ಯ ಬೆಳೆ, ಅಡಿಕೆಗೆ ಎಲೆಚುಕ್ಕೆ ರೋಗ, ಕೃಷಿಕರಿಗೆ ಆತಂಕ ತಂದೊಡ್ಡಿದೆ. ಅಲ್ಲದೇ ಮಾರುಕಟ್ಟೆ ಅಸ್ತಿರತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರವು ರೈತರ ಹಿತರಕ್ಷಣೆಗೆ ಬದ್ದವಾಗಿದೆ. ಜಿಲ್ಲೆಯಲ್ಲಿ ಭತ್ತದ ಬೆಳೆ ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಭತ್ತದ ಬೆಳೆ ಪ್ರೋತ್ಸಾಹಿಸಲು ಚಿಂತನೆ ನಡೆದಿದೆ ಎಂದು ಹೇಳಿದರು.
ಶಿಕ್ಷಣ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಶಿಕ್ಷಣ ಇಲಾಖೆಯ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಉದ್ದೇಶ ಹೊಂದಿದ್ದೇನೆ. ಶಾಲೆಗಳ ಆರಂಭದ ದಿನಗಳಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ, ಶೂಗಳನ್ನು ಪೂರೈಸಲಾಗಿದೆ ಎಂದರು.
ಈ ಹಿಂದೆ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರಕ್ಕೆ 1 ಮೊಟ್ಟೆಯನ್ನು ನೀಡುತ್ತಿದ್ದು, ಈಗ ವಾರಕ್ಕೆ 2 ಮೊಟ್ಟೆ ನೀಡುವುದರರೊಂದಿಗೆ 10ನೇ ತರಗತಿವರೆಗೆ ಈ ಯೋಜನೆಯನ್ನು ವಿಸ್ತರಿಸಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 2 ಬಾರಿ ಪೂರಕ ಪರೀಕ್ಷೆಗೆ ಹೊಸದಾಗಿ ಅವಕಾಶ ನೀಡಲಾಗಿದೆ. ಇದರಿಂದ ಉನ್ನತ ಶಿಕ್ಷಣಕ್ಕೆ ಸೇರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಶಿಕ್ಷಕರ ನೇಮಕಾತಿ, ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ ಎಂದರು.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿರುವ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಿ, ಅತ್ಯಾಧುನಿಕ ಹಾಗೂ ಸುಸಜ್ಜಿತ ಇ-ಲೈಬ್ರರಿಗಳನ್ನಾಗಿ ಪರಿವರ್ತಿಸುವ ಕಾರ್ಯ ಪ್ರಗತಿಯಲ್ಲಿದೆ. ಇದರಿಂದಾಗಿ ಗ್ರಾಮೀಣ ಜನರ ಬೌದ್ಧಿಕ ವಿಕಾಸಗೊಳಿಸಲು ಹಾಗೂ ಸಮಾಜದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ ಎಂದರು.
ಗಾಂಧೀಜಿಯವರು ಮಹಿಳಾ ಸ್ವಾತಂತ್ರ್ಯಕ್ಕೆ ಹೆಚ್ಚು ಒತ್ತು ನೀಡಿದ್ದರು. ಅವರ ಗ್ರಾಮಸ್ವರಾಜ್ಯ, ಮಹಿಳಾ ಸ್ವಾತಂತ್ರ್ಯದ ಕನಸು ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಮಹಿಳೆಯರು ಆತ್ಮವಿಶ್ವಾಸದ ಹೆಜ್ಜೆ ಇಡುವಲ್ಲಿ, ಅವರ ಹಲವು ಕನಸುಗಳಿಗೆ ಶಕ್ತಿ ತುಂಬುವಲ್ಲಿ ರಾಜ್ಯ ಸರ್ಕಾರ ಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಸ್ವಾತಂತ್ರ್ಯ ನಂತರ ಯಾವುದೇ ಯೋಜನೆಗಳಿಗೆ ದೊರೆಯದಷ್ಟು ಉತ್ತಮ ಪ್ರತಿಕ್ರಿಯೆ, ಸಕಾರಾತ್ಮಕ ಸ್ಪಂದನೆ ಶಕ್ತಿ ಯೋಜನೆಗೆ ಲಭಿಸಿದೆ ಎಂದು ಹೇಳಿದರು.
ದೇಶವು ಸ್ವಾತಂತ್ರ್ಯದ ಶತಮಾನೋತ್ಸವದತ್ತ ಸಾಗುತ್ತಿರುವಾಗ ಮಹಿಳೆಯರ ಸಹಭಾಗಿತ್ವಕ್ಕೆ ಈ ಯೋಜನೆ ಹೊಸ ಮುನ್ನಡಿ ಬರೆದಿದೆ. ಮಹಿಳೆಯರಲ್ಲಿ ಇಂತಹ ಮಹತ್ವದ ಸುಧಾರಣೆ, ಬದಲಾವಣೆಗೆ ಸರ್ಕಾರ ಶಕ್ತಿ ಯೋಜನೆ ಮೂಲಕ ವೇದಿಕೆ ಒದಗಿಸಿದೆ. ಸರ್ಕಾರವು ಸರ್ವರನ್ನು ಒಳಗೊಂಡ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಪರ ಅಭಿವೃದ್ಧಿಯನ್ನೇ ಧ್ಯೇಯವಾಗಿಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ ಎಂದರು.
ಪ್ರತಿ ಮನೆಯಲ್ಲಿ ಬೆಳಕು ಸೂಸುವ ಗೃಹಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯುನಿಟ್ ವರೆಗಿನ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ರಾಜ್ಯದಲ್ಲಿ 1.45ಕೋಟಿಗೂ ಅಧಿಕ ಕುಟುಂಬಗಳು ಹೆಸರು ನೋಂದಾಯಿಸಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯಡಿ ಸೌಲಭ್ಯ ಪಡೆಯಲು ರಾಜ್ಯದ ಅಸಂಖ್ಯಾತ ಮಹಿಳೆಯರು ಆನ್ಲೈನ್ ಮೂಲಕ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದರು.
ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕವಾಗಿ 2,000 ರೂ. ಆರ್ಥಿಕ ನೆರವು ನೀಡಲಾಗುವುದು. ಯೋಜನೆಯ ಅನುಷ್ಠಾನದಿಂದಾಗಿ ಮಹಿಳೆಯರ ಸಬಲೀಕರಣ ಮತ್ತು ಅವರ ಜೀವನೋಪಾಯ ಸುಧಾರಣೆಗೆ ಸಹಕಾರಿಯಾಗಲಿದೆ.
ಸುಮಾರು 1.28 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ರಾಜ್ಯದ ಪ್ರಮುಖ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳಲ್ಲಿ ಸ್ಥಾನ ಪಡೆದಿರುವ ಅನ್ನಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಐದು ಕೆ.ಜಿ. ಅಕ್ಕಿ ಪಡೆಯುವ ಪ್ರತಿ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿ. ಉಚಿತ ಅಕ್ಕಿ ನೀಡುವ ಕಾರ್ಯಕ್ರಮ ರಾಜ್ಯದಾದ್ಯಂತ ಈಗಾಗಲೇ ಅನುಷ್ಠಾನಕ್ಕೆ ಬಂದಿದೆ. ರಾಜ್ಯವು ಅನ್ನಭಾಗ್ಯ ಯೋಜನೆಯಡಿ ಖರೀದಿಸಲು ಸಾಧ್ಯವಾಗದ 5 ಕೆ.ಜಿ. ಅಕ್ಕಿಗೆ ಬದಲಾಗಿ ಫಲಾನುಭವಿಯ ಖಾತೆಗೆ ನೇರವಾಗಿ 170 ರೂ.ಗಳನ್ನು ಜಮಾ ಮಾಡುತ್ತಿದೆ.
2022-23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದ, ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರಿಗೆ ಪ್ರತಿ ತಿಂಗಳು 3,000 ರೂ.ಹಾಗೂ ಡಿಪ್ಲೋಮಾ ಪದವೀಧರರಿಗೆ ಮಾಸಿಕವಾಗಿ 1,500 ರೂ. ನಿರುದ್ಯೋಗ ಭತ್ಯೆ ನೀಡಲು ಉದ್ದೇಶಿಸಲಾಗಿದೆ. ಈ ಭತ್ಯೆಯು ಫಲಾನುಭವಿಗೆ ಉದ್ಯೋಗ ದೊರೆಯುವವರೆಗೆ ಅಥವಾ ಗರಿಷ್ಟ 2ವರ್ಷಗಳ ಕಾಲ ನಿರುದ್ಯೋಗ ಭತ್ಯೆ ನೀಡಲಾಗುವುದು. ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.
ಸರ್ಕಾರ ರಚನೆ ಆಗಿ ಅಲ್ಪ ಸಮಯವಾಗಿದ್ದರೂ, ಸಾಧಿಸಿದ ಸಾಧನೆ ಅನೇಕ ಮೈಲುಗಲ್ಲುಗಳನ್ನು ನಿರ್ಮಿಸಿ ದೇಶಕ್ಕೆ ಮಾದರಿಯಾಗಿದೆ. ರಾಜ್ಯದಲ್ಲಿ ಅನುಷ್ಠಾನಗೊಂಡ ಈ ಎಲ್ಲಾ ಯೋಜನೆಗಳು ದೇಶದಲ್ಲಿಯೇ ವಿಶೇಷ ಯೋಜನೆಗಳಾಗಿ ಗುರುತಿಸಲಾಗುತ್ತಿದೆ ಎಂದರು.
ಸಂವಿಧಾನದ ಮಹತ್ವ ಅರಿಯಲು ಸಂವಿಧಾನದ ಆಶಯವನ್ನು ಪ್ರತಿದಿನ ಶಾಲೆಗಳಲ್ಲಿ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಂದ ಓದಿಸುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಉಪಯುಕ್ತ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಮೂಲಕ ಜನಸಾಮಾನ್ಯರ ಜೀವನ ಮಟ್ಟವನ್ನು ಸುಧಾರಿಸುವ, ದೇಶ, ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ತಮ್ಮೆಲ್ಲರ ಅಮೂಲ್ಯ ಸಲಹೆ-ಸಹಕಾರ ಪಡೆದು ಮುಂದೆ ಸಾಗುವ ಆಶಯ ಹೊಂದಿರುವುದಾಗಿ ತಿಳಿಸಿದರು.
ತುಕುಡಿಗಳ ಶಿಸ್ತುಬದ್ಧ ಪಥಸಂಚಲನಕ್ಕೆ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುರಾಣಿ ಅವರು ಕನ್ನಡದಲ್ಲಿ ಆದೇಶ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಕಟಿಸಲಾದ ಗ್ಯಾರಂಟಿ ಯೋಜನೆಯ ಪುಸ್ತಕವನ್ನು ಸಚಿವರು ಹಾಗೂ ಗಣ್ಯರು ಬಿಡುಗಡೆಗೊಳಿಸಿದರು.
ವಿವಿಧ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿಎಆರ್, ಕೆಎಸ್ ಆರ್ ಪಿ ಸೇರಿದಂತೆ ವಿವಿಧ ಪೊಲೀಸ್ ತುಕಡಿಗಳು, ಗೃಹ ರಕ್ಷಕದಳ, ಎನ್ ಸಿಸಿ ಪಥಸಂಚಲನ ನೆರೆದಿದ್ದವರ ಮನಸೋರೆಗೊಂಡಿತು.
ಸಮಾರಂಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಪಾಲಿಕೆ ಮೇಯರ್ ಶಿವಕುಮಾರ್, ಪ್ರಮುಖರಾದ ಹೆಚ್.ಸಿ. ಯೋಗೇಶ್, ಜ್ಞಾನೇಶ್ವರ್, ಎನ್. ರಮೇಶ್, ಜಿಲ್ಲಾಧಿಕಾರಿ ಸೆಲ್ವಮಣಿ, ಜಿಪಂ ಸಿಇಓ ಸುಧಾಕರ ಲೋಖಂಡೆ ಸೇರಿದಂತೆ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ದೇಶವು ಎದುರಿಸುತ್ತಿದ್ದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ನಾವು ಸಫಲರಾಗಿದ್ದೇವೆ. ಇಲ್ಲಿನ ಜನರ ಹಸಿವು, ಬಡತನ, ದಾರಿದ್ರ್ಯ, ಅನಕ್ಷರತೆ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಪ್ರಸ್ತುತ ಸಂದರ್ಭದಲ್ಲಿ ಮುಂಗಾರು ಮಳೆ ವಿಳಂಬವಾದರೂ ಜಿಲ್ಲೆಯಲ್ಲಿ ಬಿದ್ದಿರುವ ಮಳೆಯ ಪ್ರಮಾಣ ಪೂರ್ಣ ಅಲ್ಲದಿದ್ದರೂ ಸ್ವಲ್ಪ ಮಟ್ಟಿಗೆ ಸಮಾಧಾನ ತಂದಿದೆ. ಹಿಂಗಾರು ಮಳೆ ರೈತರ ನಿರೀಕ್ಷೆಯಂತೆ ಬರುವ ಆಶಾ ಭಾವನೆ ಹೊಂದಲಾಗಿದೆ. ಈಗಾಗಲೇ ಬಿದ್ದಿರುವ ಮಳೆಯಿಂದಾಗಿ ಆಗಿರುವ ಜನ-ಜಾನುವಾರುಗಳ ಜೀವಹಾನಿ, ಬೆಳೆಹಾನಿಗಳ ಮಾಹಿತಿ ಸಂಗ್ರಹಿಸಿ, ಸಂತ್ರಸ್ಥರಿಗೆ ಕೂಡಲೆ ಪರಿಹಾರಧನ ಬಿಡುಗಡೆಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ದೇಶವನ್ನು ವಿದೇಶಿಯರ ಆಡಳಿತದಿಂದ ಮುಕ್ತಿಗೊಳಿಸುವಲ್ಲಿ ನಾಡಿನ ಲಕ್ಷಾಂತರ ಜನ ಜಾತಿ, ಮತ, ಪಂತ ತೊರೆದು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಭಗತ್ ಸಿಂಗ್, ಸುಭಾಸ್ಚಂದ್ರ ಬೋಸ್, ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕ ಹೋರಾಟಗಾರರ ತ್ಯಾಗದ ಫಲವಾಗಿ ಇಂದು ನಾವುಗಳು ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡುತ್ತಿದ್ದೇವೆ ಎಂದರು.
ಜಿಲ್ಲೆಯ ಅನೇಕರು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದರು. ವಿಶೇಷವಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈಸೂರಿನ ಐವರು ಹೋರಾಟಗಾರರು ನೇಣಿಗೆ ಕೊರಳೊಡ್ಡಿ ಹುತಾತ್ಮರಾಗಿದ್ದು ನಿಜಕ್ಕೂ ನೋವಿನ ಸಂಗತಿ. ಆ ಎಲ್ಲಾ ಹೋರಾಟಗಾರರಿಗೆ ಕೋಟಿ ಕೋಟಿ ನಮನ ಸಲ್ಲಿಸುವುದಾಗಿ ಸಚಿವರು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post