ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸೌಲಭ್ಯವು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸರಿಯಾದ ಸಮಯಕ್ಕೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ಲೋಪದೋಷಗಳು ಕಂಡುಬರದಂತೆ ನಿರಂತರ ಪರಿಶೀಲನೆ ನಡೆಸಬೇಕು ಎಂದು (Shivamogga) ಶಿವಮೊಗ್ಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ (Guarantee Scheme) ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ಮಧು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಶಿವಮೊಗ್ಗ ತಾಲೂಕು ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆ: ಅರ್ಹರಿಗೆ ಸಕಾಲದಲ್ಲಿ ಹಣ ಜಮೆಯಾಗಲಿ
ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನಿಯಮಿತವಾಗಿ ಹಾಗೂ ಸಮರ್ಪಕವಾಗಿ ಹಣ ಜಮೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಎಚ್.ಎಂ. ಮಧು ತಿಳಿಸಿದರು.
ಅದೇ ರೀತಿ ಯೋಜನೆಯ ಸೌಲಭ್ಯಕ್ಕೆ ಅನರ್ಹರಾಗಿರುವ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಪಿಎಲ್–ಎಪಿಎಲ್ ಕಾರ್ಡ್ಗಳ ಮರುಪರಿಶೀಲನೆಗೆ ಸೂಚನೆ
ಬಿಪಿಎಲ್ ಕಾರ್ಡ್ನಿಂದ ಎಪಿಎಲ್ ಕಾರ್ಡ್ಗೆ ಪರಿವರ್ತನೆಯಾಗಿರುವ ಬಡ ಹಾಗೂ ಅರ್ಹ ಫಲಾನುಭವಿಗಳ ವಿವರಗಳನ್ನು ಮರುಪರಿಶೀಲಿಸಬೇಕು. ವಾಸ್ತವವಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಅವರು ಹೇಳಿದರು.
ಅರ್ಹ ಬಡ ಕುಟುಂಬಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಮರ್ಪಕ ಪರಿಶೀಲನೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಗೃಹಜ್ಯೋತಿ ಯೋಜನೆಗೆ ಶೇ.91 ಪರಿಶೀಲನಾ ಪ್ರಗತಿ
ಗೃಹಜ್ಯೋತಿ ಯೋಜನೆಯಡಿ ಶಿವಮೊಗ್ಗ ತಾಲೂಕಿನಲ್ಲಿ ಶೇ.91ರಷ್ಟು ಪರಿಶೀಲನಾ ಪ್ರಗತಿ ಸಾಧಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಇನ್ನೂ ಹೊಸದಾಗಿ ನೋಂದಾಯಿಸಿಕೊಂಡಿರುವ ಅರ್ಹ ಫಲಾನುಭವಿಗಳಿಗೂ ಯೋಜನೆಯ ಸೌಲಭ್ಯ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಎಚ್.ಎಂ. ಮಧು ಅಧಿಕಾರಿಗಳಿಗೆ ಸೂಚಿಸಿದರು.
Also read>> ಶಿವಮೊಗ್ಗದ 3 ಇಎಸ್ಐಸಿ ಡಿಸ್ಪೆನ್ಸರಿಗೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ; ಖಡಕ್ ಎಚ್ಚರಿಕೆ
ಶಕ್ತಿ ಯೋಜನೆ: ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ಸಂಚಾರಕ್ಕೆ ಸೂಚನೆ
ಶಕ್ತಿ ಯೋಜನೆಯಡಿ ವಿದ್ಯಾರ್ಥಿಗಳಿಗೆ 70 ಕಿಲೋಮೀಟರ್ ಪ್ರಯಾಣ ಮಿತಿಯೊಳಗೆ ಸಂಚರಿಸಲು ಬಸ್ ಪಾಸ್ಗಳನ್ನು ವಿತರಿಸಲಾಗಿದೆ. ಮುಂಬರುವ ವಾರ್ಷಿಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಪ್ರಯಾಣದ ತೊಂದರೆಯಾಗದಂತೆ ನಿಗದಿತ ವೇಳಾಪಟ್ಟಿಯಂತೆ ಸರ್ಕಾರಿ ಬಸ್ಗಳ ಸಂಚಾರವನ್ನು ಖಚಿತಪಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಯಿತು.
ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಗ್ರಾಮಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚಿನ ಸಂಖ್ಯೆಯ ಸರ್ಕಾರಿ ಬಸ್ಗಳ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಾರ್ಡ್, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ
ಸರ್ಕಾರದ ಆದೇಶದಂತೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಲಾ ಆರು ಸದಸ್ಯರನ್ನೊಳಗೊಂಡ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ತಕ್ಷಣವೇ ರಚಿಸಬೇಕು ಎಂದು ಎಚ್.ಎಂ. ಮಧು ಸೂಚಿಸಿದರು.
ಈ ಸಮಿತಿಗಳಲ್ಲಿ ಎಸ್ಸಿ/ಎಸ್ಟಿ ವರ್ಗದಿಂದ ಒಬ್ಬರು, ಅಲ್ಪಸಂಖ್ಯಾತ ವರ್ಗದಿಂದ ಒಬ್ಬರು, ಮಹಿಳಾ ಮೀಸಲು ವಿಭಾಗದಿಂದ ಇಬ್ಬರು, ಇತರೆ ಹಿಂದುಳಿದ ವರ್ಗದಿಂದ ಒಬ್ಬರು ಹಾಗೂ ಸಾಮಾನ್ಯ ವರ್ಗದಿಂದ ಒಬ್ಬರು ಇರಬೇಕು ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ತಲುಪಿಸುವುದು ಹಾಗೂ ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಸಮಿತಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಶಿವಣ್ಣ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







