ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಇಲಾಖೆಯ ಅನುಮತಿ ಇಲ್ಲದೆಯೇ ಅನುಷ್ಠಾನವಾಗುತ್ತಿರುವ ಪರಿಸರ ಮಾರಕ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು #Sharavathi Pumped Storage Scheme ಸ್ಥಗಿತಗೊಳಿಸಿ ಎಂದು ಮಾಜಿ ಸಚಿವ, ಪರಿಸರಕ್ಕಾಗಿ ನಾವು ಸಂಘಟನೆಯ ರಾಜ್ಯಾಧ್ಯಕ್ಷ ಎ.ಟಿ. ರಾಮಸ್ವಾಮಿ ಸರ್ಕಾರವನ್ನು ಆಗ್ರಹಿಸಿದರು.
ಅವರು ಇಂದು ನಗರದಲ್ಲಿ ಶರಾವತಿ ಕಣಿವೆ ಉಳಿಸಿ-ಕರ್ನಾಟಕ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಗತ್ತಿನ 8 ಜೀವವೈವಿಧ್ಯ ತಾಣಗಳಲ್ಲಿ ಒಂದಾದ ಪಶ್ಚಿಮಘಟ್ಟದಲ್ಲಿ 40ಕ್ಕೂ ಹೆಚ್ಚು ನದಿಗಳು ಜನ್ಮತಾಳಿ ಈ ಭಾಗ ಹಸಿರಿನಿಂದ ಕಂಗೊಳಿಸುತ್ತಿದೆ. ಈ ಪ್ರದೇಶವನ್ನು ಮಳೆಯಕಾಡು ಎಂದೇ ಕರೆಯಲಾಗುತ್ತದೆ. ಪರಿಸರ ವಿರೋಧಿ ಯೋಜನೆಗಳಿಂದ ನೈಜಕಾಡು ಕಡಿಮೆಯಾಗುತ್ತದೆ ಅಲ್ಲದೆ, ಇಲ್ಲಿನ ನದಿನೀರಿನ ಹರಿವು ಕಡಿಮೆಯಾಗುತ್ತಿದೆ. ಇದಕ್ಕೆ ಪಂಪ್ಡ್ ಸ್ಟೋರೇಜ್ನಂತರ ಅರಣ್ಯನಾಶ ಯೋಜನೆಯೇ ಕಾರಣ ಎಂದು ಕಿಡಿಕಾರಿದರು.
ಪರಿಸರ ಅಸಮತೋಲನ, ಹವಾಮಾನ ವೈಪರಿತ್ಯ ಸಂಭವಿಸುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಸುಸ್ಥಿರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಇದನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯಬೇಕಾಗಿದೆ. ಆದರೆ ಸರ್ಕಾರ ಮತ್ತು ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್)ವು ವಾಸ್ತವ ಸಂಗತಿಯನ್ನು ಮರೆಮಾಚಿ ಸಾರ್ವಜನಿಕರ ದಿಕ್ಕುತಪ್ಪಿಸುತ್ತಿದೆ. ಕಾನೂನನ್ನು ಮಾಡಿ ಅದೇ ಕಾನೂನನ್ನು ಉಲ್ಲಂಘಿಸುವ ಸರ್ಕಾರ ಮತ್ತು ಇಲಾಖೆಗಳು ಕಾನೂನಿಗಿಂತ ಮಿಗಿಲೇ ಎಂದು ಪ್ರಶ್ನಿಸಿದ ಅವರು, ನಾವ್ಯಾರು ಅಭಿವೃದ್ಧಿ ವಿರೋಧಿಗಳಲ್ಲ, ಇನ್ನಷ್ಟು ಸಂಕಷ್ಟಕ್ಕೀಡುಮಾಡುವ ಯೋಜನೆಗಳು ನಮಗೆ ಬೇಡವೇ ಬೇಡ. ಆದರೆ ಸರ್ಕಾರಗಳಿಗೆ ಮೇಗಾ ಕಂಪನಿಗಳೇ ಬೇಕಾಗಿವೆ. ಇವರು ವನ್ಯಜೀವಿ ಕಾಯ್ದೆ, ಪುರಾತನ ಸ್ಮಾರಕ ಸಂರಕ್ಷಣಾ ಕಾಯ್ದೆ, ಜೀವ ವೈವಿಧ್ಯ ಕಾಯ್ದೆಗಳನ್ನು ಉಲ್ಲಂಘಿಸಿ ಸರ್ಕಾರದ ಅನುಮತಿ ಇಲ್ಲದೆ ಹೇಗೆ ಟೆಂಡರ್ ಕರೆದಿದ್ದಾರೆ ಎಂದು ಪ್ರಶ್ನಿಸಿದರು.
ಕಾರ್ಗಲ್, ಗೇರುಸೊಪ್ಪ ಮೊದಲಾದೆಡೆ ಯೋಜನೆಯ ಕುರಿತು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ, ಸಾರ್ವಜನಿಕರ ವಿರೋಧ ವ್ಯಕ್ತವಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಯೋಜನೆಯ ವಿರುದ್ಧ ಹೋರಾಟ ತೀವ್ರ ಸ್ವರೂಪ ಪಡೆಯುವುದರೊಳಗೆ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಯೋಜನೆಯನ್ನು ತಡೆಹಿಡಿಯಬೇಕೆಂದು ಆಗ್ರಹಿಸಿದರು.
ಮಾಜಿ ಲೋಕಾಯುಕ್ತ ನಿವೃತ್ತ ನ್ಯಾ.ಮೂ.ಎನ್.ಸಂತೋಷ್ ಹೆಗ್ಡೆ ಮಾತನಾಡಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯು ಸಾರ್ವಜನಿಕ ಹಿತಾಸಕ್ತಿಯಿಂದ ಮಾಡಿದ್ದು ಅಲ್ಲವೇ ಅಲ್ಲ, ಈ ಯೋಜನೆಯ ಜಾರಿಯಿಂದ ಅರಣ್ಯ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. 1600 ಅಡಿ ಆಳ ಭೂಮಿ ಕೊರೆಯುವುದರಿಂದ ಆಗುವ ಅನಾಹುತಗಳ ಬಗ್ಗೆ ಸರ್ಕಾರ, ಕೆಪಿಸಿಎಲ್ ಯಾವುದೇ ಸ್ಪಷ್ಟ ಮಾಹಿತಿಯನ್ನು ನೀಡುತ್ತಿಲ್ಲ. ಈ ಯೋಜನೆಯ ಬದಲಿಗೆ ಪರ್ಯಾಯ ಯೋಜನೆಗಳಾದ ಸೋಲಾರ್, ಪವನಶಕ್ತಿ, ವಿದ್ಯುತ್ ಮೊದಲಾದ ಮೂಲಗಳಿಂದ ವಿದ್ಯುತ್ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಮಾತನಾಡಿ, ಅಭಿವೃದ್ಧಿ ಹೆಸರಿನಲ್ಲಿ ಜಾರಿಯಾಗುತ್ತಿರುವ ಜನವಿರೋಧಿ ಯೋಜನೆಗಳಿಗೆ ನಮ್ಮ ವಿರೋಧವಿದೆ. ಯೋಜನೆಯಿಂದ ಆಗುವ ಅನಾಹುತಗಳ ಬಗ್ಗೆ ಕೆಪಿಸಿಎಲ್ ಸಾರ್ವಜನಿಕರಿಗೆ ಸುಳ್ಳು ಮಾಹಿತಿಯನ್ನು ನೀಡುತ್ತಿದೆ. ಕಾನೂನುಬಾಹಿರ ತಪ್ಪು ಮಾಹಿತಿನೀಡಿ, ಈ ಪ್ರದೇಶದ ಜನಜಾನುವಾರುಗಳಿಗೆ ಅಪಾಯ ತಂದೊಡ್ಡುತ್ತಿದೆ. ಜೀವವೈವಿಧ್ಯ, ವನ್ಯಜೀವಿಗಳಿಗೆ ಯಾವುದೇ ಹಾನಿ ಆಗುವುದಿಲ್ಲ ಎಂದು ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ಸುಳ್ಳು ಹೇಳಿಕೆ ನೀಡಿದ್ದಾರೆ. ಈ ಯೋಜನೆಯ ವಿವರಗಳನ್ನು ಸಾರ್ವಜನಿಕರಿಗೆ ಏಕೆ ನೀಡುತ್ತಿಲ್ಲ ಎಂದ ಖಾರವಾಗಿ ಪ್ರಶ್ನಿಸಿದರು.
ಕಪ್ಪದಗುಡ್ಡದ ನಂದಿವೇರಿ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಮಾತನಾಡಿ, ಪಶ್ಚಿಮಘಟ್ಟವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು. ಜನಹಿತಕ್ಕೆ ಮಾರಕವಾಗುವ ಈ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಬಂಗಾರಮಕ್ಕಿಯ ಶ್ರೀಗಳು, ಪಶ್ಚಿಮಘಟ್ಟ ವಿಶ್ವಮಾನ್ಯ ಪ್ರದೇಶವಾಗಿದೆ. ಇದನ್ನು ಉಳಿಸಿಕೊಂಡರೆ ಜಗತ್ತೇ ಉಳಿಯುತ್ತದೆ. ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ಬಂದು ಹೋರಾಟ ಆರಂಭವಾದ ನಂತರ 12 ಯೋಜನೆಗಳು ಹೊರಬಿದ್ದಿದ್ದು ಗಮನಕ್ಕೆ ಬಂದಿದೆ. ಈ ಯೋಜನೆಯಲ್ಲಿ ಸುಮಾರು 21 ಲಕ್ಷ ಮರ ಕಡಿಯುವ ಹುನ್ನಾರ ಅಡಗಿದೆ. ಈ ಯೋಜನೆಗೆ ತಡೆಹಿಡಿಯಲಾಗಿದೆ ಎಂಬ ವರದಿಗಳು ಕಣ್ಣೋರೆಸುವ ತಂತ್ರವಾಗಿದೆ. ಕೇಂದ್ರ ಅರಣ್ಯ ಸಚಿವ ಭೂಪೇಂದ್ರಯಾದವ್ ಅವರು ನವೆಂಬರ್ನಲ್ಲಿ ಈ ಯೋಜನಾ ಪ್ರದೇಶಕ್ಕೆ ಅಧ್ಯಯನ ತಂಡ ಕಳುಹಿಸಿಕೊಡುವುದಾಗಿ ತಿಳಿಸಿದ್ದಾರೆ. ಅದು ಬಂದು ವರದಿಕೊಟ್ಟ ನಂತರ ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲಿ ಯೋಜನೆಯ ಸ್ಥಗಿತದ ಬಗ್ಗೆ ಪ್ರಕಟವಾಗುವವರೆಗೆ ಹೋರಾಟ ಮುಂದುವರಿಯುವುದು ಎಂದು ಎಚ್ಚರಿಕೆ ನೀಡಿದರು.
ಬಸವ ಕೇಂದ್ರದ ಮರುಳಸಿದ್ಧಸ್ವಾಮೀಜಿ, ಬೆಳಗಾವಿಯ ನಿಡಸೋಸಿ ಮಠದ ಶ್ರೀ ನಿಜಲಿಂಗಾನಂದಸ್ವಾಮೀಜಿ, ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ಧರ್ಮಗುರು ರೋಷನ್ ಪಿಂಟೋ, ಪರ್ಯಾವರಣ ಟ್ರಸ್ಟಿನ ಅಧ್ಯಕ್ಷ ಪ್ರೊ.ಬಿ.ಎಂ.ಕುಮಾರಸ್ವಾಮಿ, ಪರಶುರಾಮೇಗೌಡ, ರಾಜ್ಯ ರೈತಸಂಘದ ವರಿಷ್ಟ ಕೆ.ಟಿ. ಗಂಗಾಧರ, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ಮಹಿಮಾ ಪಟೇಲ್, ಮುಸ್ಲಿಂ ಮುಖಂಡ ವಾಹಬ್ಸಾಬ್, ದಿನೇಶ್, ಅಖಿಲೇಶ್ ಚಿಪ್ಪಳಿ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















