ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕ್ಯಾನ್ಸರ್ ಒಂದು ಮಾರಣಾಂತಿಕ ಕಾಯಿಲೆಯಾಗಿದ್ದು, ಪ್ರಾರಂಭದಲ್ಲೇ ಸ್ಕ್ರೀನಿಂಗ್ ಮೂಲಕ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದು ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ಕುಮಾರ್ ಹೇಳಿದ್ದಾರೆ.
ಅವರು ಇಂದು ನಗರದ ಸೆಕ್ರೆಡ್ಹಾರ್ಟ್ ಚರ್ಚ್ ಆವರಣದಲ್ಲಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿ, ಕಾರಿತಾಸ್ ಇಂಡಿಯಾ ದೆಹಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿಮ್ಸ್, ಮೆಗ್ಗಾನ್ ಆಸ್ಪತ್ರೆ, ಅನುಗ್ರಹ ಸೋಶಿಯಲ್ ವೆಲ್ಫೆರ್ ಸೊಸೈಟಿ, ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ, ಸರ್ಜಿ ಆಸ್ಪತ್ರೆಗಳ ಸಮೂಹ ಸಂಸ್ಥೆ, ಸಹ್ಯಾದ್ರಿ ಕಲಾ ಕಾಲೇಜು, ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜು ಶಿವಮೊಗ್ಗ. ಇವರ ಸಹಯೋಗದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಮನುಷ್ಯನ ಜೀವನ ಕ್ರಮ, ಆಹಾರ ಪದ್ಧತಿ, ಆಲಸ್ಯದ ಮನೋಭಾವ, ಅತಿಯಾದ ಅನಿಯಮಿತ ರಾಸಾಯನಿಕಗಳಿರುವ ಆಹಾರ ಸೇವನೆಯಿಂದ ಕ್ಯಾನ್ಸರ್ ರೋಗ ಬರುವ ಸಾಧ್ಯತೆಯಿದ್ದು, ಹೆದರುವ ಅವಶ್ಯಕತೆಯಿಲ್ಲ. ಆದರೆ ಪ್ರಾರಂಭದಲ್ಲೇ ಚಿಕಿತ್ಸೆ ಮಾಡಬೇಕು. ಸಣ್ಣ-ಪುಟ್ಟ ರೋಗ ಲಕ್ಷಣ ಕಂಡಾಗ ತಡಮಾಡದೆ ಚಿಕಿತ್ಸೆ ಪಡೆದರೆ ಗುಣಪಡಿಸಲು ಸಾಧ್ಯ ಎಂದರು.
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಈ ಜಾಥ ಹಮ್ಮಿಕೊಳ್ಳಲಾಗಿದೆ. ಆರೋಗ್ಯದ ಬಗ್ಗೆ ಎಚ್ಚರವಿರಲಿ ಎಂದರು.
ಈ ಸಂದರ್ಭದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ್, ಫಾದರ್ ಕ್ಲಿಫರ್ಡ್ ರೋಷನ್ ಪಿಂಟೊ, ಫಾದರ್ ಡಾ.ಅಬ್ರಾಹಂ ಅರೀಪರಂಬಿಲ್, ಡಾ.ನಮ್ರತಾ ಉಡುಪ, ಜಗದೀಶ್, ಪರಶುರಾಮ್ ಮತ್ತಿತರರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















