ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಶಿವಮೊಗ್ಗದ ಅಧಿಕಾರಿ ಚಂದ್ರಶೇಖರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಅತ್ಯಂತ ಖಂಡನೀಯ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚಂದ್ರಶೇಖರ್ ಅವರ ಆತ್ಮಹತ್ಯೆ ಕೊಲೆಗಡುಕ ಸರ್ಕಾರ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳು ಕೆಲಸ ಮಾಡುವುದೇ ಕಷ್ಟವಾಗಿದೆ. ಹೀಗೆ ಮುಂದುವರೆದರೆ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಕಾಲ ದೂರವಿಲ್ಲ. ಇದು ಸಾವಿನ ಸರ್ಕಾರ ಎಂದರು.
ಚಂದ್ರಶೇಖರ್ ಅವರು ವಾಲ್ಮೀಕಿ ನಿಗಮದಲ್ಲಿ ಅಧೀಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ನಿಗಮದಲ್ಲಿದ್ದ ಸುಮಾರು 187.33 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಲು ಹಿರಿಯ ಅಧಿಕಾರಿಗಳಿಂದ ಆದೇಶ ಬಂದಿತ್ತು. ಈ ಹಿನ್ನಲೆಯಲ್ಲಿ ಅವರು ಬೇರೆ ಬೇರೆ ದಿನಾಂಕಗಳಲ್ಲಿ ಬೇರೆ ಬೇರೆ ಇಲಾಖೆಗಳಿಗೆ ಸುಮಾರು 177.35 ಕೋಟಿ ರೂ. ವರ್ಗಾವಣೆ ಮಾಡಬೇಕಾಯಿತು. ಈ ವರ್ಗಾವಣೆ ಮಾಡಲು ಸಚಿವರೊಬ್ಬರಿಂದ ಮೌಖಿಕ ಆದೇಶ ಬಂದಿತ್ತು ಎಂದು ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ತಮ್ಮ ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದರು.
ಸಚಿವರು ಎಂದರೆ ಮಹಾದೇವಪ್ಪನವರೇ ಎಂದು ಸ್ಪಷ್ಟವಾಗುತ್ತದೆ. ಅವರ ಹೆಸರನ್ನು ನೇರವಾಗಿ ಬರೆಯದಿದ್ದರೂ ಇಲಾಖೆಗೆ ಸಂಬಂಧಪಟ್ಟ ಸಚಿವರು ಅವರೇ ಆಗಿರುವುದರಿಂದ ರಾಜ್ಯ ಸರ್ಕಾರ ಅವರನ್ನು ತಕ್ಷಣವೇ ಸಂಪುಟದಿಂದ ವಜಾ ಮಾಡಬೇಕು ಎಂದರು.
ಚಂದ್ರಶೇಖರ್ ಅವರು ತಮ್ಮ ಡೆತ್ ನೋಟ್ ನಲ್ಲಿ ಎಲ್ಲಾ ವಿವರಗಳನ್ನು ಬರೆದಿಟ್ಟಿದ್ದಾರೆ. ಸುಮಾರು 87 ಕೋಟಿ ಅವ್ಯವಹಾರ ಆಗಿದೆ ಎಂದು ಅವರೇ ಹೇಳಿದ್ದಾರೆ. ಆದರೆ ಇಡೀ ಘಟನೆಯನ್ನು ಮತ್ತು ಹಣದ ವರ್ಗಾವಣೆಗಳನ್ನು ನೋಡಿದರೆ 187 ಕೋಟಿಯೂ ಅವ್ಯವಹಾರವಾಗಿದೆ ಎಂಬ ಸಂಶಯ ಉಂಟಾಗುತ್ತದೆ. ಆದ್ದರಿಂದ ಈ ಘಟನೆಯನ್ನು ಉನ್ನತ ತನಿಖೆಗೆ ಒಳಪಡಿಸಬೇಕು. ಮತ್ತು ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.
Also read: Banks grow only if there is faith: Former Chief Justice P. S. Dinesh Kumar
ಪರಿಶಿಷ್ಟರ ಕಲ್ಯಾಣಕ್ಕಾಗಿ ಈ ನಿಗಮ ಸ್ಥಾಪನೆಯಾಗಿದೆ. ಆದರೆ, ಇಲ್ಲಿನ ಹಣವನ್ನು ಸಮರ್ಥವಾಗಿ ಬಳಸಿಕೊಳ್ಳದೇ ಹೀಗೆ ಭ್ರಷ್ಟಾಚಾರ ನಡೆಸಲಾಗಿದೆ. ವಾಲ್ಮೀಕಿ ಕವಿಗೆ ಅವಮಾನ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಧಿಕಾರಿಗಳ ಮೇಲೆ ತೀವ್ರ ಒತ್ತಡವಾಗುತ್ತಿದೆ. ಚಂದ್ರಶೇಖರ್ ಅವರು ಈ ಹಣವನ್ನು ಯಾರು ಯಾರಿಗೆ ಕೊಡಲಾಗಿದೆ ಎಂಬ ಅಧಿಕಾರಿಗಳ ಪಟ್ಟಿಯನ್ನೇ ಬರೆದಿಟ್ಟಿದ್ದಾರೆ. ಎಂಡಿ ಜೆ.ಜೆ. ಪದ್ಮನಾಭ್ ಮತ್ತು ಸಂಗಡಿಗರು, ಲೆಕ್ಕಾಧಿಕಾರಿ ಪರಶುರಾಮ್, ಬ್ಯಾಂಕ್ ನ ಅಧಿಕಾರಿ ಸುಚಿತ್ ಸ್ಮಿತಾ ಮುಂತಾದವರ ಹೆಸರನ್ನು ಡೆತ್ ನೋಟ್ ನಲ್ಲಿ ದಾಖಲಿಸಲಾಗಿದೆ ಎಂದರು.
ಆದ್ದರಿಂದ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಉನ್ನತಮಟ್ಟದ ತನಿಖೆಯಾಗಬೇಕು. ಸಚಿವ ಮಹಾದೇವಪ್ಪ ಅವರನ್ನು ವಜಾ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದ ಅವರು, ಈ ಬಗ್ಗೆ ರಾಜ್ಯಪಾಲರಿಗೂ ಪತ್ರ ಬರೆಯುತ್ತೇವೆ. ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳದಿದ್ದರೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಶಿವರಾಜ್, ಎನ್.ಜೆ. ರಾಜಶೇಖರ್, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ, ಜಗದೀಶ್, ಶ್ರೀನಾಗ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post