ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಭದ್ರಾವತಿಯ ಕನಕ ಮಂಟಪದಲ್ಲಿ ನಿನ್ನೆ ಹೊನಲು ಪ್ರೊ ಕಬಡ್ಡಿ ಪಂದ್ಯಾವಳಿ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಕೆಎಸ್ಎಸ್ಐಡಿಸಿ ಉಪಾಧ್ಯಕ್ಷ ಎಸ್. ದತ್ತಾತ್ರಿ ಖಂಡಿಸಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಸೇರಿ ನಡೆಸಿದಂತಹ ಪಂದ್ಯಾವಳಿ ಇದಾಗಿದ್ದು, ಪಂದ್ಯ ಮುಗಿದ ನಂತರ ಬಿಜೆಪಿ ಕಾರ್ಯಕರ್ತನೊಬ್ಬ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಮಾತ್ರಕ್ಕೆ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಪುತ್ರ ಗಣೇಶ್ ಹಾಗೂ ಸಹಚರರು ಸೇರಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ನಕುಲ್ ಎಂಬಾತನು ಗಂಭೀರ ಗಾಯಗೊಂಡಿದ್ದು, ಬಿಜೆಪಿಯ ಮುಖಂಡರಾದ ಧರ್ಮ ಪ್ರಸಾದ್ ಹಾಗೂ ಬಜರಂಗದಳದ ಸುನಿಲ್ ಸೇರಿದಂತೆ ಒಟ್ಟು 5-6 ಜನರನ್ನು ಆಸ್ಪತ್ರೆಗೆ ದಾಖಲಾಗಿದೆ ಎಂದು ತಿಳಿದುಬಂದಿದೆ.

ಶಾಸಕ ಸಂಗಮೇಶ್ವರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿಯೂ ಕೂಡ ಪರ-ವಿರೋಧದ ವಾಗ್ವಾದ ನಡೆಸಿ ಪುನಃ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಎಸಗಿದ್ದಾರೆ. ಇದು ಅತ್ಯಂತ ಕೀಳು ಮಟ್ಟದ ವರ್ತನೆಯಾಗಿದೆ. ಮತ್ತು ಇದನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಎಸ್. ದತ್ತಾತ್ರಿ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















