ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ‘ಚೆಲುವೆ ಚಿತ್ರಾವತಿ’ ಯಕ್ಷಗಾನ ಪ್ರಸಂಗವು ಸಾವಿರಾರು ಯಕ್ಷಗಾನ ಕಲಾಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು.
ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ 2026ನೇ ಸಾಲಿನ ಅಧ್ಯಕ್ಷೆ ಜೆಸಿ ವಿಜಯಲಕ್ಷ್ಮಿ ಯು. ಕದಂಬ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವು ಯಕ್ಷಗಾನ ಪ್ರೇಮಿಗಳಿಗೆ ಸಾಂಸ್ಕೃತಿಕ ಹಬ್ಬದ ವಾತಾವರಣವನ್ನು ಮೂಡಿಸಿತು. ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಬಾಲರಾಜ್, ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಸಂಘಟಿತ ಪ್ರಯತ್ನದಿಂದ ಕಾರ್ಯಕ್ರಮ ಯಶಸ್ಸಿನ ಮೆಟ್ಟಿಲೇರಿತು.
ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಯಕ್ಷಗಾನ ಅಭಿಮಾನಿಗಳು ಹಾಗೂ ಕಲಾಪೋಷಕರು ‘ಚೆಲುವೆ ಚಿತ್ರಾವತಿ’ ಯಕ್ಷಗಾನ ಪ್ರದರ್ಶನವನ್ನು ಆಸ್ವಾದಿಸಿದರು. ಕಾರ್ಯಕ್ರಮಕ್ಕೆ ದೊರೆತ ಅಭೂತಪೂರ್ವ ಸ್ಪಂದನೆ ಶಿವಮೊಗ್ಗದಲ್ಲಿ ಯಕ್ಷಗಾನ ಸೇರಿದಂತೆ ಸಾಂಪ್ರದಾಯಿಕ ಕಲಾಪ್ರಕಾರಗಳ ಬಗ್ಗೆ ಇರುವ ಅಭಿಮಾನಕ್ಕೆ ಸಾಕ್ಷಿಯಾಯಿತು.
ಆಧುನಿಕ ರಂಗಮಂದಿರದ ಅಗತ್ಯವಿದೆ: ಉದಯ ಕದಂಬ
ಕಾರ್ಯಕ್ರಮದ ಸಭಾ ಭಾಗದಲ್ಲಿ ಮಾತನಾಡಿದ ಸಂಸ್ಥೆಯ ಪೂರ್ವಾಧ್ಯಕ್ಷ ಉದಯ ಕದಂಬ, ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಿರಂತರವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಮಲೆನಾಡಿನ ಕಲಾಭಿಮಾನಿಗಳು, ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ಹವಾ ನಿಯಂತ್ರಿತ ವ್ಯವಸ್ಥೆ ಸೇರಿದಂತೆ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಸುಸಜ್ಜಿತ ಹಾಗೂ ಭವ್ಯ ರಂಗಮಂದಿರ ನಿರ್ಮಾಣವಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ಶಿವಮೊಗ್ಗವು ಸಾಂಸ್ಕೃತಿಕವಾಗಿ ಶ್ರೀಮಂತವಾದ ನಗರವಾಗಿದ್ದು, ಯಕ್ಷಗಾನ, ನಾಟಕ, ಸಂಗೀತ ಸೇರಿದಂತೆ ವಿವಿಧ ಕಲಾ ಕಾರ್ಯಕ್ರಮಗಳಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.
ಯುವಜನರ ವ್ಯಕ್ತಿತ್ವ ವಿಕಸನದಲ್ಲಿ ಜೆಸಿಐ ಪಾತ್ರ ಶ್ಲಾಘನೀಯ
ಜೆಸಿಐ ವಲಯ-24ರ ವಲಯಾಧ್ಯಕ್ಷ ಮಧುಸೂದನ ನಾವಡ ಮಾತನಾಡಿ, ಯುವಜನರಲ್ಲಿ ನಾಯಕತ್ವ ಗುಣ, ವ್ಯಕ್ತಿತ್ವ ವಿಕಸನ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಜೆಸಿಐ ಸಂಸ್ಥೆಯ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಜೆಸಿಐ ಮೂಲಕ ಯುವಜನರಿಗೆ ಕೇವಲ ವ್ಯಕ್ತಿತ್ವ ವಿಕಸನವಷ್ಟೇ ಅಲ್ಲದೆ, ಸಮಾಜದ ಅಭಿವೃದ್ಧಿಗೆ ಕೈಜೋಡಿಸುವ ಮನೋಭಾವವನ್ನು ಬೆಳೆಸಲಾಗುತ್ತಿದೆ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜದಲ್ಲಿ ಕಲಾ ಪ್ರಜ್ಞೆ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಸಹಕಾರಿಯಾಗುತ್ತವೆ ಎಂದರು.
ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೇವರಾಜ್ಗೆ ಸನ್ಮಾನ
ಇದೇ ಸಂದರ್ಭದಲ್ಲಿ ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ದೇವರಾಜ್ ಟಿ.ವಿ. ಅವರನ್ನು ಸಮಾಜಮುಖಿ ಸೇವೆ ಹಾಗೂ ಕರ್ತವ್ಯನಿಷ್ಠೆಗಾಗಿ ಜೆಸಿಐ ಶಿವಮೊಗ್ಗ ವಿವೇಕ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
Also read>> ಮಹಿಳೆಯರು ಎಲ್ಲಾ ಯೋಗ ಪ್ರಕ್ರಿಯೆಗಳನ್ನು ಮಾಡಬಾರದು ಏಕೆ? ರಾಘವೇಶ್ವರ ಶ್ರೀಗಳು ಹೇಳಿದ್ದೇನು?
ಕಾರ್ಯಕ್ರಮದಲ್ಲಿ ಜೆಸಿಐ ವಲಯ ಉಪಾಧ್ಯಕ್ಷ ಗಣೇಶ್ ಪೈ, ವೀರಶೈವ ಸಮಾಜದ ಅಧ್ಯಕ್ಷ ಜ್ಯೋತಿಪ್ರಕಾಶ್, ಕೆ.ವಿ. ವಸಂತ್ ಕುಮಾರ್, ನ್ಯಾಯಾಂಗ ಕ್ಷೇತ್ರದ ಗಣ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
‘ಕಾಟನ್ ಜಾವಾ ವರ್ಲ್ಡ್’ ಸಂಸ್ಥೆಯ ಕಾಟನ್ ಜಗದೀಶ್ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿ ಸಭಿಕರ ಮೆಚ್ಚುಗೆಗೆ ಪಾತ್ರರಾದರು.
ಕಲೆ, ಸಂಸ್ಕೃತಿ ಹಾಗೂ ಯುವಜನರ ವ್ಯಕ್ತಿತ್ವ ವಿಕಸನಕ್ಕೆ ನಿರಂತರವಾಗಿ ಬದ್ಧವಾಗಿರುವ ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ಈ ಪ್ರಯತ್ನವು ಶಿವಮೊಗ್ಗದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮತ್ತೊಂದು ಸ್ಮರಣೀಯ ಅಧ್ಯಾಯವಾಗಿ ದಾಖಲಾಗಿದೆ.
2,000ಕ್ಕೂ ಹೆಚ್ಚು ಆಸನ ಸಾಮರ್ಥ್ಯದ ಆಧುನಿಕ ರಂಗಮಂದಿರಕ್ಕೆ ಈಶ್ವರಪ್ಪ ಭರವಸೆ
ಶಿವಮೊಗ್ಗದ ಸಾಂಸ್ಕೃತಿಕ ಬೆಳವಣಿಗೆಗೆ ಪೂರಕವಾಗುವಂತೆ 2,000ಕ್ಕೂ ಹೆಚ್ಚು ಆಸನ ಸಾಮರ್ಥ್ಯ ಹೊಂದಿರುವ ಸುಸಜ್ಜಿತ ಹಾಗೂ ಆಧುನಿಕ ರಂಗಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದ್ದಾರೆ.
ಸುಸಜ್ಜಿತ ಹಾಗೂ ಆಧುನಿಕ ರಂಗಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಮನವಿಗೆ ಸ್ಪಂದಿಸಿದ ಅವರು, ಮುಂದಿನ ದಿನಗಳಲ್ಲಿ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ಘೋಷಣೆಯು ಮಲೆನಾಡಿನ ಕಲಾಭಿಮಾನಿಗಳು ಮತ್ತು ಸಾಂಸ್ಕೃತಿಕ ಸಂಘಟನೆಗಳಲ್ಲಿ ಹೊಸ ನಿರೀಕ್ಷೆಯನ್ನು ಮೂಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







