ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಆಯನೂರು, ಹೊಳಲೂರು ಮತ್ತು ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ತಜ್ಞವೈದ್ಯರನ್ನು ಮರು ವರ್ಗಾವಣೆ ಆದೇಶ ಮಾಡಲು ಕೂಡಲೇ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಜನತಾದಳ ವತಿಯಿಂದ ಶಾಸಕಿ ಶಾರದಾ ಪೂರ್ಯಾನಾಯ್ಕ್ ನೇತೃತ್ವದಲ್ಲಿ ಇಂದು ಡಿಸಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವಿಸ್ತೀರ್ಣದಲ್ಲಿ ದೊಡ್ಡ ಮತಕ್ಷೇತ್ರವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಅತೀ ಹಿಂದುಳಿದ ವರ್ಗದ ಜನಾಂಗ ಹಾಗೂ ಅಲ್ಪಸಂಖ್ಯಾತರು ಹೆಚ್ಚಾಗಿರುವುದರಿಂದ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಯಾವುದೇ ತಾಲ್ಲೂಕು ಆಸ್ಪತ್ರೆ ಇಲ್ಲದೇ ಇರುವುದರಿಂದ ಗರ್ಭೀಣಿಯರು, ಮಕ್ಕಳು, ವಯೋವೃದ್ಧರು ಮತ್ತು ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆಯಾದಾಗ ಬಹಳ ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಹಾಲಿ ಟ್ರೈಯಾಡ್ ಯೋಜನೆ ಆದೇಶದಂತೆ ತಜ್ಞವೈದ್ಯರುಗಳನ್ನು ಸಮುದಾಯ ಆರೋಗ್ಯ ಕೇಂದ್ರದ ಶಿವಮೊಗ್ಗ ತಾಲ್ಲೂಕಿನ ಆಯನೂರು ಮತ್ತು ಹೊಳಲೂರು ಹಾಗೂ ಭದ್ರಾವತಿದ ತಾಲ್ಲೂಕಿನ ಹೊಳೆಹೊನ್ನೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಜ್ಞ ವೈದ್ಯರುಗಳನ್ನು ವರ್ಗಾವಣೆ ಮಾಡಲಾಗಿದ್ದು, ಸದನದಲ್ಲಿ ಮಾ.12ರಂದು ಈ ಬಗ್ಗೆ ಚರ್ಚಿಸಲಾಗಿದೆ. ಚುಕ್ಕೆ ಪ್ರಶ್ನೆಗೆ ಉತ್ತರ ನೀಡಿದ ಮಂತ್ರಿಗಳು ತಾಲ್ಲೂಕು ಆಸ್ಪತ್ರೆಗಳು ಇಲ್ಲದಿರುವ ತಾಲ್ಲೂಕುಗಳಲ್ಲಿ ತಜ್ಞವೈದ್ಯರನ್ನು ವರ್ಗಾವಣೆ ಮಾಡುವುದಿಲ್ಲವೆಂದು ಉತ್ತರ ನೀಡಿದ್ದರು. ಆದರೆ ಈಗ ವರ್ಗಾವಣೆ ಮಾಡಲಾಗಿದ್ದು ಇದು ಜನತೆಗೆ ಬಗೆದ ದ್ರೋಹವೆಂದು ಶಾಸಕಿ ಶಾರದಾ ಪೂರ್ಯಾನಾಯ್ಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ವರ್ಗಾವಣೆ ಮಾಡಲಾದ ತಜ್ಞ ವೈದ್ಯರುಗಳನ್ನು ಮರು ನೇಮಕ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ. ಈ ಮೇಲ್ಕಂಡ ಈ ಮೂರೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞರು, ಅರವಳಿಕೆ ತಜ್ಞರು ಮತ್ತು ಸಾಮಾನ್ಯ ವೈದ್ಯಾಧಿಕಾರಿಗಳನ್ನು ಕೂಡಲೇ ಮರು ವರ್ಗಾವಣೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ಇದು ಬಡವರ ಪರವಾದ ಕೆಲಸ. ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಸರ್ಕಾರಗಳು ಕೂಡಲೇ ಸ್ಪಂದಿಸಬೇಕು. ಆದರೆ ಈ ಸರ್ಕಾರ ಪ್ರಮುಖ ವಿಚಾರಗಳಿಗೆ ಕವಡೆಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಮಂತ್ರಿಗಳು ಹೇಳಿದರೂ ಈ ಬೇಜವಾಬ್ದಾರಿ ಏಕೆ? ಪ್ರಜಾಪ್ರಭುತ್ವದ ಕೊಲೆ ಮಾಡುವ ಕೆಲಸವಾಗುತ್ತಿದೆ. ಮೂಲಭೂತ ಸೌಲಭ್ಯಗಳಾದ ಆರೋಗ್ಯ ಸಮಸ್ಯೆಗೆ ಸರ್ಕಾರದ ಈ ನಿಲುವು ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಪರಮಾವಧಿಯಾಗಿದೆ ಎಂದರು.
ಕೂಡಲೇ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಜೆಡಿಎಸ್ ಗ್ರಾಮಾಂತರ ಕಾರ್ಯಕರ್ತರಿಂದ ಸಾರ್ವಜನಿಕರೊಂದಿಗೆ ಕ್ಷೇತ್ರದ ಪ್ರಮುಖ ಹೈವೇಗಳನ್ನು ಅನಿವಾರ್ಯವಾಗಿ ಬಂದ್ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎನ್. ರಾಮಕೃಷ್ಣ, ಗ್ರಾಮಾಂತರ ಅಧ್ಯಕ್ಷ ಕಸೆಟ್ಟಿ ಸತೀಶ್, ಕಾರ್ಯದರ್ಶಿಗಳಾದ ತ್ಯಾಗರಾಜ್, ಹೆಚ್.ಎಂ. ಸಂಗಯ್ಯ, ಕೆ.ಎಂ. ನಾಗೇಶ್, ಕಾರ್ಯಾಧ್ಯಕ್ಷ ದಾದಾಪೀರ್, ನಗರಾಧ್ಯಕ್ಷ ದೀಪಕ್ಸಿಂಗ್, ಪ್ರಮುಖರಾದ ಕಶ್ಯಪ್, ಶಿವಾನಾಯ್ಕ, ಗ್ರಾಮಾಂತರ ಕಾರ್ಯಾಧ್ಯಕ್ಷ ಸೋಮಿನಕೊಪ್ಪ ಕಾಂತರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಮಹೇಶ್, ಪ್ರಮುಖರಾದ ಗಂಧದಮನೆ ನರಸಿಂಹ, ಹನುಮಂತಪ್ಪ, ಬಸಪ್ಪಗೌಡ್ರು, ಮಧು, ರಮೇಶ್, ಲಿಂಗಪ್ಪ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















