ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಭಾರೀ ಮಳೆಯಿಂದ ಭೂಕುಸಿತಗೊಂಡ ಬಗ್ಗೆ ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ಮುಖ್ಯಮಂತ್ರಿಗಳಿಗೆ ಈಗಾಗಲೇ ಸಲ್ಲಿಸಿರುವ ವರದಿಯನ್ನಾಧರಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಕರ್ನಾಟಕ ಜೀವವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಹೇಳಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಅವರು ಇಂದು ಜಿಲ್ಲಾಧಿಕಾರಿಗಳೊಂದಿಗೆ ಕಂದಾಯ ಅರಣ್ಯ ನಾಶ, ಅರಣ್ಯೀಕರಣ, ಕೆರೆಗಳ ಒತ್ತುವರಿ ತೆರವು, ಭೂಕುಸಿತ ಮುಂತಾದ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು. ಕುಂಚೇನಹಳ್ಳಿ ಅರಣ್ಯ ರಕ್ಷಣೆ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ವಿಶೇಷ ಯೋಜನೆಯನ್ನು ರೂಪಿಸಿ ಅನುಷ್ಠಾನಕ್ಕೆ ತರುವಂತೆ ಜಿಲ್ಲಾ ಅರಣ್ಯಾಧಿಕಾರಿಗಳಿಗೆ ಸೂಚಿಸಿದ ಅವರು, ರಾಗೀಗುಡ್ಡದಲ್ಲಿನ 15 ಎಕರೆ ಭೂಪ್ರದೇಶದಲ್ಲಿ ಉದ್ದೇಶಿತ ವನೀಕರಣ ಯೋಜನೆ ವ್ಯವಸ್ಥಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.


ರಾಜ್ಯದಾದ್ಯಂತ ಈಗಾಗಲೇ ಕೈಗೊಂಡಿರುವ ಜೀವವೈವಿದ್ಯ ಜಾಗೃತಿ ಅಭಿಯಾನಕ್ಕೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ಉಂಟಾಗಿರುವುದು ಸಮಾಧಾನ ತಂದಿದೆ. ಜಿಲ್ಲೆಯ ಸೊರಬ ತಾಲೂಕಿನಲ್ಲಿ ಸೆ.16ರಂದು ವಿಶೇಷ ಸಭೆ ಮತ್ತು ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು.


ಸಾಗರ ತಾಲೂಕಿನ ಬೊಮ್ಮತ್ತಿ, ಮಲ್ಲ ಮತ್ತು ನಾಡಕಲಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಕಂದಾಯ ಅರಣ್ಯ ಭೂಮಿ ನಾಶಗೊಳ್ಳುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅವುಗಳ ರಕ್ಷಣೆಗೆ ಮುಂದಾಗುವಂತೆ ಹಾಗೂ ಒತ್ತುವರಿ ತೆರವುಗೊಳಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕೆರೆ, ಗೋಮಾಳ, ಗ್ರಾಮಠಾಣ ಮತ್ತು ತುಂಡು ಜಮೀನುಗಳನ್ನು ರಕ್ಷಿಸುವ ಕಾರ್ಯ ತುರ್ತಾಗಿ ಆಗಬೇಕಾಗಿದೆ. ಅಮೂಲ್ಯವಾಗಿರುವ ಅರಣ್ಯ ಸಂಪತ್ತಿನ ರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯವೂ ಆಗಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ತೆರವು ಮತ್ತು ಕೆರೆಗಳ ಸಮೀಕ್ಷೆ ನಡೆಸುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಸೂಚಿಸಲಾಗಿದ್ದು, ಗುರಿ ನಿಗಧಿಪಡಿಸಲಾಗಿದೆ. ಅಗತ್ಯವಿದ್ದಲ್ಲಿ ಭೂಮಿ ಒತ್ತುವರಿ ಪ್ರದೇಶಗಳಿಗೆ ಖುದ್ದಾಗಿ ತೆರಳಿ ವೀಕ್ಷಿಸಿ ಹಂತಹಂತವಾಗಿ ಕ್ರಮ ಜರುಗಿಸಲಾಗುವುದಲ್ಲದೆ ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸಲಾಗುವುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















