ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯುತ್ ಲೈನ್ ಹಾಗೂ ಟ್ರಾನ್ಸ್ ಫಾರ್ಮರ್ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಮೆಸ್ಕಾಂ ಲೈನ್ ಮ್ಯಾನ್ ಒಬ್ಬರು ವಿದ್ಯುತ್ ಶಾಕ್’ಗೆ (Electric shock) ಒಳಗಾಗಿ ಮೃತಪಟ್ಟಿರುವ ದಾರುಣ ಘಟನೆ (Shivamogga) ಶಿವಮೊಗ್ಗ ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮೆಸ್ಕಾಂ ಆನವೇರಿ ಘಟಕದಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್.ಜೆ. ಸಂಜಯ್ ದತ್ (33) ಎಂದು ಗುರುತಿಸಲಾಗಿದೆ. ಹೊನ್ನಾಳಿ ತಾಲೂಕಿನ ಚಿಕ್ಕಬಾಸೂರು ತಾಂಡಾ ಮೂಲದವರಾದ ಸಂಜಯ್ ದತ್, ವಿದ್ಯುತ್ ನಿರ್ವಹಣಾ ಕಾರ್ಯದ ವೇಳೆ ದುರ್ಘಟನೆಗೆ ಬಲಿಯಾಗಿದ್ದಾರೆ.
ಲೈನ್ ಮ್ಯಾನ್ ದುರಸ್ತಿ ವೇಳೆ ದುರಂತ
ಮಲ್ಲಿಗೇನಹಳ್ಳಿ ಗಡಿ ಪ್ರದೇಶದಲ್ಲಿ ಲೈನ್ ಮ್ಯಾನ್ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವಿದ್ಯುತ್ ಲೈನ್ ಆಫ್ ಮಾಡಲಾಗಿದೆ ಎಂದು ಖಚಿತಪಡಿಸಿಕೊಂಡ ಬಳಿಕ ಸಂಜಯ್ ದತ್ ಅವರು ಕಂಬ ಹತ್ತಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು ಎನ್ನಲಾಗಿದೆ. ಆದರೆ, ದುರಸ್ತಿ ಕಾರ್ಯದ ಮಧ್ಯೆ ದಿಢೀರ್ ವಿದ್ಯುತ್ ಪ್ರವಹಿಸಿದ ಪರಿಣಾಮ ಸಂಜಯ್ ದತ್ ಅವರಿಗೆ ತೀವ್ರ ವಿದ್ಯುತ್ ಶಾಕ್ ತಗುಲಿದೆ. ಇದರಿಂದ ಅವರು ಕಂಬದಿAದ ಕೆಳಗೆ ಬಿದ್ದು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ತಕ್ಷಣ ಸಹೋದ್ಯೋಗಿಗಳು ಹಾಗೂ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಸಿದ್ದು, ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
Shivamogga : ಸುರಕ್ಷತಾ ಕ್ರಮಗಳ ಬಗ್ಗೆ ಕುಟುಂಬಸ್ಥರ ಆಕ್ರೋಶ
ಘಟನೆ ಹಿನ್ನೆಲೆಯಲ್ಲಿ ವಿದ್ಯುತ್ ಇಲಾಖೆಯ ಸಿಬ್ಬಂದಿಯ ಸುರಕ್ಷತೆ ಕುರಿತು ಹಲವು ಪ್ರಶ್ನೆಗಳು ಎದ್ದಿವೆ. ಲೈನ್ ದುರಸ್ತಿ ಕಾರ್ಯಕ್ಕೆ ತೆರಳುವ ಸಿಬ್ಬಂದಿಗೆ ಅಗತ್ಯ ಸುರಕ್ಷತಾ ಸಾಮಗ್ರಿಗಳನ್ನು ಸಮರ್ಪಕವಾಗಿ ಒದಗಿಸಲಾಗಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
Also Read>> ಕನ್ನಡಕ್ಕೆ ಮತ್ತೊಂದು ಗೌರವ | ಹಿರಿಯ ನಟ ಅನಂತನಾಗ್’ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಅಧಿಕಾರಿಗಳಿಂದ ಸಿಬ್ಬಂದಿಯ ಮೇಲೆ ಅಧಿಕ ಕೆಲಸದ ಒತ್ತಡವಿದ್ದು, ದುರಸ್ತಿ ಕಾರ್ಯದ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದೇ ದುರ್ಘಟನೆಗೆ ಕಾರಣವಾಗಿರಬಹುದು ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.
ವಿದ್ಯುತ್ ಲೈನ್ ದುರಸ್ತಿ ವೇಳೆ ವಿದ್ಯುತ್ ಸಂಪೂರ್ಣವಾಗಿ ಸ್ಥಗಿತಗೊಳಿಸಿರುವುದನ್ನು ಖಚಿತಪಡಿಸಿಕೊಳ್ಳುವುದು, ಸುರಕ್ಷತಾ ಉಪಕರಣಗಳನ್ನು ಬಳಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಒತ್ತಾಯವೂ ಕೇಳಿಬಂದಿದೆ.
ಕುಟುಂಬಸ್ಥರ ರೋಧನ
ಸಂಜಯ್ ದತ್ ಅವರ ಅಕಾಲಿಕ ಸಾವಿನಿಂದ ಕುಟುಂಬದಲ್ಲಿ ಆಘಾತದ ವಾತಾವರಣ ನಿರ್ಮಾಣವಾಗಿದೆ. ಮೃತರಿಗೆ ಪತ್ನಿ, ಮೂರು ವರ್ಷದ ಮಗಳು ಹಾಗೂ ಕೇವಲ ಒಂದು ತಿಂಗಳ ಹೆಣ್ಣು ಮಗು ಇದ್ದು, ಕುಟುಂಬದ ಆಧಾರವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡಿರುವುದು ಕುಟುಂಬಸ್ಥರ ದುಃಖವನ್ನು ಮತ್ತಷ್ಟು ಹೆಚ್ಚಿಸಿದೆ.
ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಮೃತದೇಹ ಕಂಡು ಕುಟುಂಬಸ್ಥರು ಹಾಗೂ ಸಂಬಂಧಿಕರು ಕಣ್ಣೀರಿಟ್ಟ ದೃಶ್ಯ ಮನಕಲಕುವಂತಿತ್ತು.
ಘಟನೆ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.
ವಿದ್ಯುತ್ ಇಲಾಖೆಯ ಸಿಬ್ಬಂದಿಯ ಸುರಕ್ಷತೆ, ದುರಸ್ತಿ ಕಾರ್ಯದ ವೇಳೆ ಅನುಸರಿಸಲಾಗುವ ನಿಯಮಗಳು ಹಾಗೂ ಘಟನೆಗೆ ಕಾರಣವಾದ ಪರಿಸ್ಥಿತಿಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









