ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ದಿನೇದಿನೇ ಹೆಚ್ಚುತ್ತಿರುವ ಕೊರೋನ ಸೋಂಕನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲು ಉದ್ದೇಶಿಸಿದ್ದು, ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಅವರು ಇಂದು ಡಿಎಆರ್ ಸಭಾಂಗಣದಲ್ಲಿ ಕೋವಿಡ್ ಸೋಂಕನ್ನು ನಿಯಂತ್ರಿಸುವಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಜಿಲ್ಲೆಯ ಪೊಲೀಸ್ ಹಿರಿಯ ಅಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮುಂದಿನ ಆದೇಶದವರೆಗೆ ಪ್ರತಿದಿನ ಬೆಳಿಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ಮಾತ್ರ ಜಿಲ್ಲೆಯಾದ್ಯಂತ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಆಸ್ಪತ್ರೆ, ಔಷಧಾಲಯ ಸೇರಿದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಮಧ್ಯಾಹ್ನ 2ರಿಂದ ಬೆಳಿಗ್ಗೆ 5 ಗಂಟೆಯವೆರೆಗೆ ತೆರೆಯದಿರುವಂತೆ ಆದೇಶ ಹೊರಡಿಸುವ ಬಗ್ಗೆಯೂ ಸಮಾಲೋಚಿಸಿ ಕ್ರಮವಹಿಸಲಾಗುವುದು ಎಂದರು.
ಈ ಸಂಬಂಧ ಈಗಾಗಲೇ ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಉದ್ಯಮಿಗಳು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಣಾಮಕಾರಿ ಲಾಕ್ಡೌನ್ ಕುರಿತು ಕ್ರಮ ಕೈಗೊಳ್ಳಲು ಸಮಾಲೋಚನೆ ನಡೆಸಲಾಗಿದ್ದು, ಅವರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಅವುಗಳಲ್ಲಿ ಕೆಲವು ಸಲಹೆಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಸೋಂಕನ್ನು ನಿಯಂತ್ರಿಸುವಲ್ಲಿ ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿ – ಸಿಬ್ಬಂಧಿಗಳು ಶಕ್ತಿ ಮೀರಿ ಶ್ರಮಿಸುತ್ತಿದ್ದು, ಅವರೆಲ್ಲರೂ ಅಭಿನಂದನಾರ್ಹರು. ಮುಂದಿನ ದಿನಗಳಲ್ಲಿಯೂ ತಮ್ಮಿಂದ ಇನ್ನಷ್ಟು ಪರಿಣಾಮಕಾರಿ ಸೇವೆಯನ್ನು ನಿರೀಕ್ಷಿಸುವುದು ಅನಿವಾರ್ಯವಾಗಿದೆ. ಕರ್ತವ್ಯದ ಸಂದರ್ಭದಲ್ಲಿ ಕೆಲವರಿಗೆ ಸೌಜನ್ಯಯುತವಾಗಿ, ಒಪ್ಪಿತವಾಗುವಂತೆ ತಿಳಿ ಹೇಳಬೇಕು. ಅನಾವಶ್ಯಕವಾಗಿ ಓಡಾಡುವವರು, ಎಲ್ಲೆಂದರಲ್ಲಿ ಗುಂಪು ಸೇರಿ ಹರಟೆ ಹೊಡೆಯುವವರು ಹಾಗೂ ಇನ್ನೂ ಕೆಲವು ಸಂದರ್ಭಗಳಲ್ಲಿ ಸಾಂದರ್ಭಿಕವಾಗಿ ನಿರ್ಣಯ ಕೈಗೊಳ್ಳುವಂತೆಯೂ ಸೂಚಿಸಿದ ಅವರು, ಪೊಲೀಸರು ತಮ್ಮ ಸೇವಾವಧಿಯಲ್ಲಿ ಎದುರಿಸುತ್ತಿರುವ ಸಮಸ್ಯೆ-ಸವಾಲುಗಳನ್ನು ಇತ್ಯರ್ಥಪಡಿಸಲಾಗುವುದು. ಅನಾರೋಗ್ಯಪೀಡಿತ ಪೊಲೀಸ್ ಸಿಬ್ಬಂಧಿಗಳ ಆರೋಗ್ಯ ತಪಾಸಣೆ ನಡೆಸಲು ಖಾಸಗಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.
ಈಗಾಗಲೇ ಸರ್ಕಾರಿ ಕಚೇರಿಗಳನ್ನು ಶನಿವಾರದಂದು ತೆರೆಯದಿರುವಂತೆ ಹಾಗೂ ರಾಜ್ಯದ ಎಲ್ಲಾ ಭಾನುವಾರಗಳಂದು ಲಾಕ್ಡೌನ್ ಘೋಷಿಸಿ ಆದೇಶ ಹೊರಡಿಸಲಾಗಿದೆ. ಈ ಎರಡು ದಿನಗಳಲ್ಲದೆ ಉಳಿದ ದಿನಗಳಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲೂ ಸರ್ಕಾರ ಸೂಚಿಸಿದೆ. ಜಿಲ್ಲಾಡಳಿತ ರೂಪಿಸಿ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ ಎಂದರು.
ಇಂದಿನ ಸಂದಿಗ್ಧ ಸಂದರ್ಭಕ್ಕೆ ಅನ್ವಯವಾಗುವಂತೆ ಜನರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಗೌರವ ಹಾಗೂ ಭಯ ಹುಟ್ಟುವಂತಹ ವಾತಾವರಣ ನಿರ್ಮಾಣವಾಗಬೇಕಾಗಿದೆ. ಬೈಕ್ ಸವಾರಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ದಾಖಲೆ ಪರಿಶೀಲಿಸಿ ದಂಡ, ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಮಾತನಾಡಿ, ಸಾರ್ವಜನಿಕರಿಗೆ ಈ ಸೋಂಕಿನ ಅರ್ಥವಾದಂತಿಲ್ಲ. ಮಾಸ್ಕ್ ಹಾಕದವರಿಗೆ, ಸಾರ್ವಜನಿಕ ಅಂತರ ಕಾಯ್ದುಕೊಳ್ಳದವರಿಗೆ ದಂಡ ವಿಧಿಸಲಾಗುತ್ತಿದೆ. ದುಡಿದು ತಿನ್ನುವ ಶ್ರಮಿಕ ವರ್ಗದವರಿಗೆ ತೊಂದರೆಯಾಗದಂತೆ ಪೊಲೀಸರು ಕ್ರಮವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು, ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿ ಡಾ. ಶೇಖರ್ ಎಚ್.ಟಿ. ಅವರು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093
Discussion about this post