ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸಚಿವ ಸಂಪುಟದಲ್ಲಿ ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಸೊರಬ ಶಾಸಕ ಮಧು ಬಂಗಾರಪ್ಪ ಅವರು ಆಗಸ್ಟ್ 7ರಿಂದ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡು ನೆರೆ, ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡನೇ ಬಾರಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಮಧು ಬಂಗಾರಪ್ಪ ಅವರಿಗೆ ಕಾಂಗ್ರೆಸ್ ವತಿಯಿಂದ ಅದ್ದೂರಿ ಸ್ವಾಗತ ಕೋರಲು ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರವು ಜಿಲ್ಲಾವಾರು ಜವಾಬ್ದಾರಿಗಳನ್ನು ಸಚಿವರಿಗೆ ವಹಿಸಿದ್ದು, ಆಗಸ್ಟ್ 7ರಿಂದ 11ರವರೆಗೆ ಮಧು ಬಂಗಾರಪ್ಪ ಅವರು ಶಿವಮೊಗ್ಗ, ಸೊರಬ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ನೆರೆ ಹಾಗೂ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಹಾನಿಯ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಸಿ ಅಗತ್ಯ ಪರಿಹಾರ ಕ್ರಮಗಳಿಗೆ ಮುಂದಾಗಲಿದ್ದಾರೆ ಎಂದು ತಿಳಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ಹಲವು ಸುಧಾರಣೆಗಳು
ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ವಿದ್ಯಾರ್ಥಿ ಕೇಂದ್ರಿತ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದರು ಎಂದು ಪ್ರಸನ್ನಕುಮಾರ್ ಹೇಳಿದರು.
ಸಾವಿರಕ್ಕೂ ಹೆಚ್ಚು ಕೆಪಿಎಸ್ ಶಾಲೆಗಳಿಗೆ ಅನುಮೋದನೆ, ‘ನಮ್ಮೂರು-ನಮ್ಮ ಶಾಲೆ’ ಅಭಿಯಾನದ ಮೂಲಕ ಹಳೆ ವಿದ್ಯಾರ್ಥಿಗಳು ಮತ್ತು ದಾನಿಗಳ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ, ಸಿಎಸ್ಆರ್ ನಿಧಿ ಹಾಗೂ ವಿವಿಧ ಮೂಲಗಳಿಂದ ಸಾವಿರಾರು ಕೋಟಿ ರೂಪಾಯಿ ಅನುದಾನ ತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದರು.
Also read>> Railway Board | 5 Goup ‘A’ ಅಧಿಕಾರಿಗಳಿಗೆ ರೈಲ್ವೆ ಕಠಿಣ ಕ್ರಮ | ಕಾರಣವೇನು?
ಶಿವಮೊಗ್ಗದಿಂದಲೇ ಶಿಕ್ಷಣ ಇಲಾಖೆಯ ಮಹತ್ವದ ಯೋಜನೆ ಆರಂಭಿಸುವ ಉದ್ದೇಶವಿದ್ದರೂ ನಾಯಕತ್ವ ಬದಲಾವಣೆಯಿಂದ ಅದು ಸಾಧ್ಯವಾಗಿರಲಿಲ್ಲ. ಮುಂದಿನ ದಿನಗಳಲ್ಲಿ ಆ ಯೋಜನೆ ಶಿವಮೊಗ್ಗದಲ್ಲೇ ಆರಂಭವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಸಮಾಧಾನ ಇಲ್ಲ
2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಮರ್ಥ ನಾಯಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಹೈಕಮಾಂಡ್, ಎಐಸಿಸಿ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಹಿರಿಯ ನಾಯಕರಿಗೆ ಜಿಲ್ಲಾ ಕಾಂಗ್ರೆಸ್ ಪರವಾಗಿ ಕೃತಜ್ಞತೆ ಸಲ್ಲಿಸಿದರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ಜಿಲ್ಲೆಯಲ್ಲಿ ಯಾವುದೇ ಅಸಮಾಧಾನ ಇಲ್ಲ. ಬೇಳೂರು ಗೋಪಾಲಕೃಷ್ಣ ಹಾಗೂ ಶಾಸಕ ಬಿ.ಕೆ. ಸಂಗಮೇಶ್ವರ್ ಕೂಡ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಮತದಾರರ ಪಟ್ಟಿಯಲ್ಲಿ ದೋಷ ಸರಿಪಡಿಸುವ ಕಾರ್ಯ ನಡೆಯುತ್ತಿದೆ
ಎಸ್ಐಆರ್ ಪ್ರಕ್ರಿಯೆ ಸಂಬಂಧ ಜಿಲ್ಲೆಯಲ್ಲಿ ಎನ್ಯೂಮರೇಷನ್ ಫಾರಂಗಳನ್ನು ವಾಪಸ್ ಪಡೆಯುವ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ ಸುಮಾರು 46 ಸಾವಿರ ಮೃತರ ಹೆಸರುಗಳು ಮತದಾರರ ಪಟ್ಟಿಯಲ್ಲಿವೆ ಎಂದು ತಿಳಿದುಬಂದಿದ್ದು, ಜೀವಂತ ಮತದಾರರ ಹೆಸರುಗಳು ಕೈ ತಪ್ಪದಂತೆ ಕಾಂಗ್ರೆಸ್ನ ಬಿಎಲ್ಎಗಳು ಮತ್ತು ಬಿಎಲ್ಒಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರಸನ್ನಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕಲ್ಲಗೋಡು ರತ್ನಾಕರ್, ಎಂ.ಎಸ್. ಶಿವಕುಮಾರ್, ಶಿವಣ್ಣ, ಕಲಿಂಪಾಷಾ, ಎಸ್.ಟಿ. ಹಾಲಪ್ಪ, ಜಿ.ಡಿ. ಮಂಜುನಾಥ್, ಶ್ವೇತಾ ಬಂಡಿ, ಸ್ಟೇಲಾ ಮಾರ್ಟಿನ್, ವಿಜಯಲಕ್ಷ್ಮಿ ಪಾಟೀಲ್, ಅರ್ಚನಾ ನಿರಂಜನ್ ಹಾಗೂ ಗಿತೇಂದ್ರಗೌಡ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







