ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ #B S Yadiyurappa ಎಲ್ಲ ಜಾತಿಯವರಿಗೂ ಸಮಾನವಾಗಿ ಆರ್ಥಿಕ ಸೌಲಭ್ಯ ನೀಡಿದ್ದರು. ಅವರ ಬಗ್ಗೆ ಮಾತನಾಡುವ ಯೋಗ್ಯತೆ ಸಚಿವ ಮಧುಗೆ ಇಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಅವರು ಸಚಿವ ಮಧು ಬಂಗಾರಪ್ಪ ವಿರುದ್ಧ ಚಾಟಿ ಬೀಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಮಡಿವಾಳ ಮಾಚೀದೇವ, ಉಪ್ಪಾರ, ಆರ್ಯವೈಶ್ಯ, ವಿಶ್ವಕರ್ಮ, ಅಂಬಿಗರ ಚೌಡಯ್ಯ, ಈಡಿಗ, ಸವಿತಾ ಸಮಾಜ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿ ಅನುದಾನ ನೀಡಿದ ಬಿಎಸ್’ವೈ, ಸಂಗೊಳ್ಳಿ ರಾಯಣ್ಣ, ಕನಕದಾಸರ ಜನ್ಮಸ್ಥಳ ಬಾಡಾದ ಅಭಿವೃದ್ಧಿಗೆ ಅನುದಾನ ನೀಡಿದರೂ ಕಾಂಗ್ರೆಸ್ ಅದನ್ನು ಏಕೆ ಮಾಡಿರಲಿಲ್ಲ. ಬಿ.ಎಸ್. ಯಡಿಯೂರಪ್ಪನವರೇ ಬರಬೇಕಿತ್ತಾ ಎಂದು ತಿರುಗೇಟು ನೀಡಿದರು.
ಸರ್ವಸ್ಪರ್ಶಿ ಸರ್ವರಿಗೆ ಸಮಪಾಲ-ಸಮಬಾಳು ಆಡಳಿತ ನೀಡಿದ ಯಡಿಯೂರಪ್ಪನವರು ಎಂದಿಗೂ ಜಾತಿ ರಾಜಕಾರಣ ಮಾಡಿಲ್ಲ ಎಂದರು.
ಸಚಿವ ಮಧು ಬಂಗಾರಪ್ಪ ಜೆಡಿಎಸ್’ನಿಂದ ಕಾಂಗ್ರೆಸ್ಸಿಗೆ ಹೋಗಿ ಹೇಗೋ ಮಂತ್ರಿಯಾದರು. ಅಹಿಂದ, ಗರಿಬಿ ಹಠಾವೊ ಕೇವಲ ಭಾಷಣಕ್ಕೆ ಸೀಮಿತವಾಗಬಾರದು. ಜನರ ತೆರಿಗೆ ದುಡ್ಡಿನ ಜೊತೆ ಚೆಲ್ಲಾಟವಾಡುವುದನ್ನು ಬಿಡಿ. ಪ್ರಜ್ಞಾವಂತ ಮತದಾರರಿಗೆ ಮುಜುಗುರವಾಗುವ ರೀತಿಯಲ್ಲಿ ಹಗುರವಾಗಿ ಮಾತನಾಡಬೇಡಿ ಎಂದು ಸಚಿವ ಮಧು ಬಂಗಾರಪ್ಪ ಅವರಿಗೆ ಕಿವಿಮಾತು ಹೇಳಿದರು.
ಜಾತಿಗಣತಿ ಬಗ್ಗೆ ಬಿಜೆಪಿಯವರ ಮೇಲೆ ಸುಮೊಟೋ ಕೇಸ್ ದಾಖಲು ಮಾಡಲು ಮಧುಬಂಗಾರಪ್ಪ ಹೇಳಿದ್ದಾರೆ. ಆದರೆ ವಾಲ್ಮೀಕಿ ನಿಗಮ ಹಗರಣ ಮತ್ತಿತರ ಭ್ರಷ್ಟಾಚಾರ ಮಾಡಿದ ಕಾಂಗ್ರೆಸ್ ಪಕ್ಷದ ಮೇಲೆ ಸುಮೊಟೋ ಕೇಸ್ ದಾಖಲಿಸಬೇಕು ಎಂದರು.
ಇನ್ನು, ಶಿಕಾರಿಪುರ ಮತ್ತು ಸವಳಂಗದ ಸಮೀಪ ರಾಜ್ಯ ಸರ್ಕಾರ ಸ್ಥಾಪಿಸಿರುವ ಟೋಲ್ ಗೇಟ್ ವಿರುದ್ಧ ಅ.9ರಂದು ಸ್ಥಳೀಯರು ಹಮ್ಮಿಕೊಂಡಿರುವ ಹೋರಾಟಕ್ಕೆ ತಮ್ಮ ಬೆಂಬಲವಿದೆ. ಜನರ ವಿರೋಧವಿದ್ದರೂ ಮತ್ತೆ ರಿಟೆಂಡರ್ ನೀಡಲಾಗಿದೆ. ಈ ಎರಡೂ ಟೋಲ್ಗಳನ್ನು ಕಿತ್ತೊಗೆಯಬೇಕು ಎಂದು ಆಗ್ರಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















