ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿ ಸಿದ್ಧರಾಮಯ್ಯ #Siddaramaiah ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂವಿಧಾನಬದ್ಧವಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಂಡಿದ್ದು, ಇದನ್ನು ವಿರೋಧಿಸುತ್ತಿರುವ ಬಿಜೆಪಿ ಪಕ್ಷದ ವಿರುದ್ಧ ಸುಪ್ರೀಂಕೋರ್ಟ್ ಸುಮೊಟೋ ಕೇಸ್ ದಾಖಲಿಸಬೇಕು ಎಂದು ಶಾಲಾ ಶಿಕ್ಷಣ ಸಾಕ್ಷರತಾ ಸಚಿವ ಎಸ್. ಮಧುಬಂಗಾರಪ್ಪ #Minister Madhu Bangarappa ಸರ್ವೋಚ್ಛ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು.
ಅವರು ಇಂದು ತಮ್ಮ ಅಧಿಕೃತ ಕಾರ್ಯಾಲಯದಲ್ಲಿ ಸಮೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಸುಮಾರು 25ಕ್ಕೂ ಹೆಚ್ಚು ಶಿಕ್ಷಕರನ್ನು ಸನ್ಮಾನಿಸಿ, ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೆಳವರ್ಗದವರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಸರ್ಕಾರದ ಸೌಲಭ್ಯಗಳನ್ನು ನೀಡಲು ಈ ಸಮೀಕ್ಷೆ ಅತ್ಯಂತ ಮಹತ್ವಪೂರ್ಣದ್ಧಾಗಿದೆ. ಶಾಲಾ ಶಿಕ್ಷಕರು ಇಡೀ ರಾಜ್ಯದಲ್ಲಿ ಬಹಳ ಒಳ್ಳೆಯ ರೀತಿಯಿಂದ ಸಮೀಕ್ಷೆ ನಡೆಸುತ್ತಿದ್ದಾರೆ. ಸಮೀಕ್ಷೆಯ ಯಶಸ್ಸಿಗೆ ಕಾರಣೀಕರ್ತರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಶಿಕ್ಷಕರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.
ಮಾಜಿ ಪ್ರಧಾನಿ ನೆಹರೂ ಅವರು ಸಮಾಜದಲ್ಲಿ ಆರ್ಥಿಕ ಸಮಾನತೆ ತರುವ ಹಿನ್ನಲೆಯಲ್ಲಿ ಸಂವಿಧಾನ ತಿದ್ದುಪಡಿ ಮಾಡಿದ್ದರು. ಪ್ರತೀ 10 ವರ್ಷಕ್ಕೊಮ್ಮೆ ಜಾತಿಗಣತಿ ಆಗಬೇಕೆಂದು ನಿಯಮವಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸಲು ಈಗ ಆರಂಭಿಸಿದ ಸಮೀಕ್ಷೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ತಾಕೀತು ಮಾಡಿದ ಅವರು, ಪ್ರಜಾಪ್ರಭುತ್ವದ ಬಗ್ಗೆ ಭಾಷಣ ಮಾಡುವುದು ಮುಖ್ಯವಲ್ಲ, ಆದರೆ ಅದನ್ನು ಅನುಷ್ಠಾನಕ್ಕೆ ತರುವುದು ಬಹಳ ಮುಖ್ಯ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಪ್ರಗತಿನೋಟವನ್ನು ಬಿಚ್ಚಿಟ್ಟ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟಾರೆ ಶೇ.63.46ರಷ್ಟು ಸಾಧನೆ ಗೈಯಲಾಗಿದೆ. ಶಿವಮೊಗ್ಗ ನಗರ ಶೇ.56, ಶಿಕಾರಿಪುರ ಶೇ.70, ಭದ್ರಾವತಿ ಶೇ.54, ಸೊರಬ ಶೇ.77, ತೀರ್ಥಹಳ್ಳಿ ಶೇ.57ರಷ್ಟು ಸಾಗರ ಶೇ.62, ಪ್ರಗತಿ ಸಾಧಿಸಲಾಗಿದೆ.
ಸಚಿವ ಮಧುಬಂಗಾರಪ್ಪ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್. ಅಶೋಕ್, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯ ಇನ್ನಿತರ ನಾಯಕರು ರಾಜ್ಯ ಸರ್ಕಾರ ಕೈಗೊಂಡಿರುವ ಸಮೀಕ್ಷೆಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಗೂಬೆಕೂರಿಸಲು ಪ್ರಯತ್ನಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅಂತಹವರೇ ಈ ಸಮೀಕ್ಷೆಯ ಬಗ್ಗೆ ಏನನ್ನೂ ಮಾತನಾಡಿಲ್ಲ. ಹೀಗಿದ್ದಾಗ ಬಿಜೆಪಿಯ ಉಳಿದ ನಾಯಕರು ಏಕೆ ಏನೂ ತಿಳುವಳಿಕೆ ಇಲ್ಲದೆ ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಬಿ.ವೈ. ವಿಜಯೇಂದ್ರ ಅವರಿಗೆ ಬಡವರ ಬಗ್ಗೆ, ಕೆಳವರ್ಗದವರ ಬಗ್ಗೆ ಕಿಂಚಿತ್ತೂ ತಿಳುವಳಿಕೆ ಇಲ್ಲ. `ಅವರಿನ್ನೂ ಬಚ್ಚಾ…’ ಎಂದು ವ್ಯಂಗ್ಯವಾಡಿದರು.
ಸಮೀಕ್ಷೆಗೆ ತಾವು ಯಾವ ಮಾಹಿತಿಯನ್ನು ಕೊಡುವುದಿಲ್ಲ ಎಂದು ಹೇಳಿರುವ ಕೇಂದ್ರ ಸಚಿವ ಪ್ರಲ್ಹಾದ್ಜೋಶಿ ಅವರು ತಮ್ಮ ಹೇಳಿಕೆಯನ್ನು ವಾಪಸ್ಸು ಪಡೆಯಬೇಕೆಂದು ಒತ್ತಾಯಿಸಿದ ಅವರು, ಸಮೀಕ್ಷೆಗೆ ವಿರೋಧಿಸುತ್ತಿರುವ ಬಿಜೆಪಿಯವರ ದೇಶದ್ರೋಹಿ ನಡವಳಿಕೆಯನ್ನು ತಾವು ತೀವ್ರವಾಗಿ ಖಂಡಿಸುತ್ತೇನೆ. ಈ ಸಮೀಕ್ಷೆಯ ಯಶಸ್ಸು ಬಿಜೆಪಿಯ ಸೋಲು ಎಂದು ಅರ್ಥೈಸಿದರು.
ಸಮೀಕ್ಷೆಗಳ ದತ್ತಾಂಶಗಳ ಸೋರಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಸಚಿವರು, ಈ ವಿಷಯದಲ್ಲಿ ರಾಜ್ಯದ ಮಾನ ಹರಾಜು ಹಾಕಿದ್ದೇ ಬಿಜೆಪಿ ಸರ್ಕಾರ. ಕಾಂಗ್ರೆಸ್ ಸರಕಾರ ಎಂದಿಗೂ ಸಂಗ್ರಹಿಸಿದ ದತ್ತಾಂಶಗಳು ಸೂರಿಕೆಯಾಗಲು ಬಿಡುವುದಿಲ್ಲ ಎಂದರಲ್ಲದೆ, ಸಮೀಕ್ಷೆಗೆ ಧರ್ಮ, ಜಾತಿಪಟ್ಟ ಕಟ್ಟುತ್ತಿರುವ ಬಿಜೆಪಿ ನಡೆಯನ್ನು ಕಟುವಾಗಿ ಟೀಕಿಸಿದ ಅವರು, ಸಂವಿಧಾನ ಎತ್ತಿಹಿಡಿಯುವ ಕೆಲಸ, ಸಮಾಜದಲ್ಲಿ ಸಮಾನತೆ ಸಾಧಿಸುವ ಕೆಲಸ ಮಾಡುವ ಮೂಲಕ ಕಾಂಗ್ರೆಸ್ ಸರ್ವಜನಾಂಗದ ಶಾಂತಿಯ ತೋಟ ಎಂಬ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಆಯನೂರು ಮಂಜುನಾಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್, ಗ್ಯಾರೆಂಟಿ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ್, ಪ್ರಮುಖರಾದ ರಮೇಶ್ ಶಂಕರಘಟ್ಟ, ಖಲಿಂಪಾಷಾ, ವೈ.ಹೆಚ್. ನಾಗರಾಜ್, ಎಸ್.ಟಿ. ಹಾಲಪ್ಪ, ಕಲಗೋಡು ರತ್ನಾಕರ್, ದೇವಿಕುಮಾರ್, ಜಿ.ಡಿ. ಮಂಜುನಾಥ್, ರಾಘವೇಂದ್ರ ಮುಡುಬ, ಆದರ್ಶ್, ಸಮಾಜ ಕಲ್ಯಾಣ, ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















