ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ (Shivamogga) ನಗರದ ಕಾರ್ಮಿಕ ವರ್ಗಕ್ಕೆ ಗುಣಮಟ್ಟದ ವೈದ್ಯಕೀಯ ಸೇವೆ (Medical Service) ಹಾಗೂ ಸಕಾಲಕ್ಕೆ ಅಗತ್ಯ ಔಷಧಿಗಳು ಲಭ್ಯವಾಗುವಂತೆ ನೋಡಿಕೊಳ್ಳುವುದು ಆರೋಗ್ಯ ಇಲಾಖೆಯ ಆದ್ಯ ಕರ್ತವ್ಯವಾಗಿದೆ. ಈ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಎಚ್ಚರಿಕೆ ನೀಡಿದರು.
ಶಿವಮೊಗ್ಗ ನಗರ ವ್ಯಾಪ್ತಿಯ ಕಾರ್ಮಿಕರಿಂದ ಇಎಸ್ಐಸಿ ಡಿಸ್ಪೆನ್ಸರಿಗಳ ನಿರ್ವಹಣೆ, ಚಿಕಿತ್ಸಾ ಸೌಲಭ್ಯಗಳ ಕೊರತೆ ಹಾಗೂ ಔಷಧಿ ಲಭ್ಯತೆಯ ಕುರಿತು ಹಲವು ಅಹವಾಲುಗಳು ಬಂದ ಹಿನ್ನೆಲೆಯಲ್ಲಿ, ಶಾಸಕ ಚನ್ನಬಸಪ್ಪ ಅವರು ಬುಧವಾರ ಬೆಳಿಗ್ಗೆ ನಗರದ ಮೂರು ಇಎಸ್ಐಸಿ ಡಿಸ್ಪೆನ್ಸರಿಗಳಿಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.
ಔಷಧ ವಿತರಣಾ ಕೇಂದ್ರ, ಪ್ರಯೋಗಾಲಯಗಳ ಪರಿಶೀಲನೆ
ದಿಢೀರ್ ಭೇಟಿ ಸಂದರ್ಭದಲ್ಲಿ ಡಿಸ್ಪೆನ್ಸರಿಗಳಲ್ಲಿನ ಔಷಧ ವಿತರಣಾ ಕೇಂದ್ರಗಳು, ಪ್ರಯೋಗಾಲಯಗಳು ಸೇರಿದಂತೆ ವಿವಿಧ ವಿಭಾಗಗಳನ್ನು ಶಾಸಕರು ಖುದ್ದಾಗಿ ವೀಕ್ಷಿಸಿದರು. ಚಿಕಿತ್ಸೆಗೆ ಆಗಮಿಸಿದ್ದ ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿ, ಆಸ್ಪತ್ರೆಯಲ್ಲಿನ ವೈದ್ಯಕೀಯ ಸೇವೆ, ಔಷಧಿಗಳ ಲಭ್ಯತೆ ಹಾಗೂ ಸಿಬ್ಬಂದಿಯ ಸ್ಪಂದನೆ ಕುರಿತು ಮಾಹಿತಿ ಪಡೆದುಕೊಂಡರು.
ಕಾರ್ಮಿಕರಿಗೆ ಅಗತ್ಯವಿರುವ ಚಿಕಿತ್ಸೆ ಮತ್ತು ಔಷಧಿಗಳನ್ನು ಸಕಾಲಕ್ಕೆ ಒದಗಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದ ಶಾಸಕರು, ಸಾರ್ವಜನಿಕರಿಂದ ಬಂದಿರುವ ದೂರುಗಳ ಬಗ್ಗೆ ಅಧಿಕಾರಿಗಳಿಂದ ವಿವರ ಕೇಳಿದರು.
Also read>> ಶಿವಮೊಗ್ಗದಲ್ಲಿ ದುರಂತ | ತುಂಗಾ ಚಾನಲ್ನಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು | ತೀವ್ರ ಶೋಧ
ಅಗತ್ಯ ಔಷಧಿಗಳಿಗೆ ಕೊರತೆಯಾಗದಂತೆ ಸೂಚನೆ
ಇಎಸ್ಐಸಿ ಫಲಾನುಭವಿಗಳಿಗೆ ಅಗತ್ಯವಿರುವ ಪ್ರಮುಖ ಔಷಧಿಗಳ ಕೊರತೆಯಾಗದಂತೆ ಮುಂಚಿತವಾಗಿಯೇ ಅಗತ್ಯ ಪ್ರಮಾಣದ ದಾಸ್ತಾನು ಇರಿಸಿಕೊಳ್ಳಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ಯಾವುದೇ ರೋಗಿಗಳನ್ನು ಅಗತ್ಯ ಔಷಧಿಗಳಿಗಾಗಿ ಹೊರಗಿನ ಮೆಡಿಕಲ್ ಮಳಿಗೆಗಳಿಗೆ ಕಳುಹಿಸಬಾರದು. ಆಸ್ಪತ್ರೆಯಲ್ಲಿಯೇ ನಿಯಮಾನುಸಾರ ಉಚಿತವಾಗಿ ಅಗತ್ಯ ಔಷಧಿಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಔಷಧಿಗಳ ಕೊರತೆಯಿಂದ ಬಡ ಹಾಗೂ ಕಾರ್ಮಿಕ ವರ್ಗದ ಜನರು ತೊಂದರೆ ಅನುಭವಿಸುವಂತಾಗಬಾರದು ಎಂದು ಅವರು ಸ್ಪಷ್ಟಪಡಿಸಿದರು.
ವೈದ್ಯರು, ಸಿಬ್ಬಂದಿಗೆ ಸಮಯಪಾಲನೆ ಸೂಚನೆ
ವೈದ್ಯಾಧಿಕಾರಿಗಳು ಮತ್ತು ಆಸ್ಪತ್ರೆ ಸಿಬ್ಬಂದಿ ಕರ್ತವ್ಯದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು. ಎಲ್ಲರೂ ಕಡ್ಡಾಯವಾಗಿ ಸಮಯಪಾಲನೆ ಮಾಡಬೇಕು. ಚಿಕಿತ್ಸೆಗೆ ಆಗಮಿಸುವ ಸಾರ್ವಜನಿಕರು ಮತ್ತು ಕಾರ್ಮಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಶಾಸಕ ಚನ್ನಬಸಪ್ಪ ಸೂಚಿಸಿದರು.
ರೋಗಿಗಳಿಗೆ ಸೂಕ್ತ ಸಮಯದಲ್ಲಿ ಪ್ರಾಥಮಿಕ ಚಿಕಿತ್ಸೆ ಹಾಗೂ ಅಗತ್ಯವಿದ್ದಲ್ಲಿ ತುರ್ತು ಚಿಕಿತ್ಸೆಯನ್ನು ಒದಗಿಸಬೇಕು. ವೈದ್ಯಕೀಯ ಸೇವೆಯಲ್ಲಿ ಯಾವುದೇ ಲೋಪ ಕಂಡುಬಂದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಸಿದರು.
ನೈರ್ಮಲ್ಯ, ಕುಡಿಯುವ ನೀರು ಸೇರಿ ಮೂಲಸೌಕರ್ಯಕ್ಕೆ ಒತ್ತು
ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡಲು ವಿಶೇಷ ಆದ್ಯತೆ ನೀಡಬೇಕು. ರೋಗಿಗಳು ಮತ್ತು ಅವರೊಂದಿಗೆ ಬರುವ ಕುಟುಂಬ ಸದಸ್ಯರಿಗೆ ಸಮರ್ಪಕ ಕುಡಿಯುವ ನೀರು ಹಾಗೂ ಇತರೆ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಶಾಸಕರು ತಿಳಿಸಿದರು.
ಇಎಸ್ಐಸಿ ಡಿಸ್ಪೆನ್ಸರಿಗಳು ಕಾರ್ಮಿಕ ವರ್ಗದ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಅಲ್ಲಿಗೆ ಆಗಮಿಸುವ ಪ್ರತಿಯೊಬ್ಬ ಫಲಾನುಭವಿಗೂ ಉತ್ತಮ ಮತ್ತು ಮಾನವೀಯ ವೈದ್ಯಕೀಯ ಸೇವೆ ದೊರೆಯುವಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ನಗರದ ಮೂರು ಡಿಸ್ಪೆನ್ಸರಿಗಳ ಪರಿಶೀಲನೆ ವೇಳೆ ಕಂಡುಬಂದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಇದೇ ಸಂದರ್ಭದಲ್ಲಿ ಖಡಕ್ ಸೂಚನೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







