ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ನಾಯಕರು ನಗರದಲ್ಲಿ ಸಮಾವೇಶ ನಡೆಸಿದ್ದು, ಜಿಲ್ಲೆಯ ಜನತೆ ಇದಕ್ಕೆ ಬೆಂಬಲಿಸುವುದಿಲ್ಲವೆಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ವಿರೋಧ ಪಕ್ಷದಲ್ಲಿ ಕೂರಲು ಆಗುತ್ತಿಲ್ಲ. ಅಧಿಕಾರವಿಲ್ಲದೆ ಚಡಪಡಿಸುತ್ತಿರುವ ಕಾಂಗ್ರೆಸ್ ನಾಯಕರು ಸಣ್ಣ ವಿಷಯವನ್ನು ದೊಡ್ಡದು ಮಾಡಲು ಹೊರಟಿದ್ದಾರೆ ಎಂದರು.
ಕಾಂಗ್ರೆಸ್ ನಾಯಕರು ಗೂಂಡಾಗಿರಿ ಬಿಟ್ಟು ಅಭಿವೃದ್ಧಿ ವಿಷಯದಲ್ಲಿ ಜನರ ಮುಂದೆ ಬರಲಿ. ಅದನ್ನು ಬಿಟ್ಟು ಕ್ಷುಲ್ಲಕ ವಿಷಯವನ್ನು ಹಿಡಿದು ಜನರ ಮುಂದೆ ಹೋಗುತ್ತಿದ್ದಾರೆ. ಜಿಲ್ಲೆ ಜನತೆ ಅವರ ವರ್ತನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.
ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಜಿಲ್ಲೆಗೆ 1192 ಕೋಟಿ ರೂ. ವೆಚ್ಚದ 10 ಕಾಮಗಾರಿಗಳಿಗೆ ಮಂಜೂರಾತಿ ಸಿಕ್ಕಿದೆ. ತುಂಗಾನದಿಗೆ ಇನ್ನೊಂದು ಸೇತುವೆ ನಿರ್ಮಾಣಕ್ಕೂ ಮಂಜೂರಾತಿ ಸಿಕ್ಕಿದೆ ಎಂದು ಹೇಳಿದರು.
ಭದ್ರಾವತಿಗೆ ಸಂಬಂಧಪಟ್ಟಂತೆ ವಿಐಎಸ್ಎಲ್ ಹಾಗೂ ಎಂಪಿಎಂ ಪುನಶ್ಚೇತನಕ್ಕೆ ಖಾಸಗಿ ಸಹಭಾಗಿತ್ವದಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ತಿಂಗಳ ಅಂತ್ಯಕ್ಕೆ ಒಂದು ಲಕ್ಷ ಕೊವ್ಯಾಕ್ಸಿನ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಹಾಗೂ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಎಲ್ಲ ವ್ಯವಸ್ಥೆಗಳನ್ನು ಮಾಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್. ಎಸ್. ಜ್ಯೋತಿಪ್ರಕಾಶ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಪ್ರಮುಖರಾದ ವೀರಭದ್ರಪ್ಪ ಪೂಜಾರ್, ಬಳ್ಳೆಕೆರೆ ಸಂತೋಷ್, ದಿವಾಕರ ಶೆಟ್ಟಿ, ಬಾಭಿ ಮತ್ತು ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post