ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ ನವೆಂಬರ್ 12 ರ ಶನಿವಾರದಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ.
ಈ ಲೋಕ ಅದಾಲತ್ನಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್ಬೌನ್ಸ್, ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಕಲಂ 6 ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದಂತೆ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ವಿನೀತ ಶರ್ಮ ವಿರುದ್ದ ರಾಕೇಶ್ ಶರ್ಮ ಮತ್ತು ಇತರರು ಪ್ರಕರಣದಲ್ಲಿ ದಿ: 11.08.2020 ರಂದು ನೀಡಿರುವ ತೀರ್ಪಿನನ್ವಯ ಹೆಣ್ಣು ಮಕ್ಕಳಿಗೂ ಸಹ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಪಾಲು ಕುರಿತು, ವಿಭಜನಾ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳನ್ನು ಗುರುತಿಸಿ, ಸದರಿ ಪ್ರಕರಣಗಳ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ಅವರ ಒಪ್ಪಿಗೆ ಪ್ರಕಾರ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು.
ಇದೂ ಅಲ್ಲದೇ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಚಕ್ತಿ, ಜಲಮಂಡಳಿ ಹಾಗೂ ನ್ಯಾಯಾಲಯಕ್ಕೆ ಬರಬಹುದಾದಂತಹ ಇತರೆ ಯಾವುದೇ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ, ಅವುಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜೀ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ಅವಾರ್ಡ್ ಪಾಸು ಮಾಡಲಾಗುವುದು.
Also read: ಶಿವಮೊಗ್ಗ ಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್: ಯಾವ ಕೆಟಗರಿಗೆ ಮೀಸಲು? ಇಲ್ಲಿದೆ ಮಾಹಿತಿ
ಈ ಅವಾರ್ಡ್ ನ್ಯಾಯಾಲಯದಲ್ಲಿ ಮಾಡಬಹುದಾದ ಡಿಕ್ರಿ ಇದ್ದಂತೆ ಆಗುತ್ತಿದ್ದು, ಅಂತಹ ಅವಾರ್ಡ್ಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶ ಇದೆ. ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಅವರ ಅಮೂಲ್ಯ ಸಮಯ ಉಳಿತಾಯವಾಗುತ್ತದೆ. ಅಲ್ಲದೇ ಶೀಘ್ರವಾಗಿ ನ್ಯಾಯದಾನವಾಗುತ್ತದೆ. ಆದ್ದರಿಂದ ಜನತೆ ಇಂತಹ ಪ್ರಕ್ರಿಯೆ ಉಪಯೋಗವನ್ನು ಪಡೆಯಬೇಕು. ಪ್ರಕರಣಗಳನ್ನು ರಾಜೀ ಸಂಧಾನಕ್ಕಾಗಿ ಗುರುತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಲ್ಲಿಕಾರ್ಜುನಗೌಡ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post