ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದ ಕಾಂಗ್ರೆಸ್ ಸರ್ಕಾರ ಸಚಿವ ಸ್ಥಾನಗಳ ಕಿತ್ತಾಟದಲ್ಲಿ ತೊಡಗಿದ್ದು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಆದ್ಯತೆ ನೀಡುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಆರೋಪಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ ತಿಂಗಳು ಶಿಕ್ಷಣ ಕ್ಷೇತ್ರಕ್ಕೆ ಅತ್ಯಂತ ಮಹತ್ವದ್ದಾಗಿದ್ದರೂ ಸರ್ಕಾರ ಈ ಬಗ್ಗೆ ಕಾಳಜಿ ತೋರಿಸುತ್ತಿಲ್ಲ ಎಂದು ಟೀಕಿಸಿದರು. ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ನೇಮಕಾತಿ ಮಾಡುವುದಾಗಿ ಘೋಷಿಸಿ ಇನ್ನೂ ಜಾರಿಗೆ ತರದೇ ಕಾಲಹರಣ ಮಾಡಲಾಗಿದೆ ಎಂದು ಹೇಳಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಕೆಪಿಸಿ ಶಾಲೆ ಆರಂಭಿಸುವುದಾಗಿ ಹೇಳಿ ಭೂಮಿ ಪೂಜೆಗೂ ಸಿದ್ಧತೆ ಮಾಡಿಕೊಂಡು ನಂತರ ಯೋಜನೆಯನ್ನು ಕೈಬಿಟ್ಟಿರುವುದನ್ನು ಅವರು ಖಂಡಿಸಿದರು. ಮಳೆಗಾಲದಲ್ಲಿ ಜಿಲ್ಲೆಯ ಹಲವಾರು ಸರ್ಕಾರಿ ಶಾಲೆಗಳು ಸೋರಿಕೆಯಿಂದ ಬಳಲುತ್ತಿದ್ದರೂ ದುರಸ್ತಿ ಕಾರ್ಯ ಕೈಗೊಳ್ಳದಿರುವುದು ದುರಂತಕರ ಎಂದು ಅಭಿಪ್ರಾಯಪಟ್ಟರು.
Also read: ವಿಳಂಬವಿಲ್ಲದೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಚನ್ನಬಸಪ್ಪ
ಸರ್ಕಾರಿ ಸಿ.ಎ ಸೈಟ್ಗಳನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕಡಿಮೆ ದರದಲ್ಲಿ ನೀಡಿರುವ ವಿಚಾರವನ್ನು ಉಲ್ಲೇಖಿಸಿದ ಅವರು, ಈ ವಿಷಯ ನ್ಯಾಯಾಲಯದಲ್ಲೂ ಪ್ರಶ್ನೆಯಾಗಿದ್ದರೂ ಸರ್ಕಾರ ಅದನ್ನು ಮುಂದುವರಿಸುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಉಲ್ಲೇಖಿಸಿದ ಅವರು, ಗ್ಯಾರಂಟಿ ಯೋಜನೆಗಳಿಗೆ ನಿಗಮ ಮಂಡಳಿಗಳ ನಿಧಿಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದರು. ಜೊತೆಗೆ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುವ ಯತ್ನ ನಡೆಯುತ್ತಿದೆ ಎಂದು ಎಚ್ಚರಿಸಿದರು.
ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ಕುರಿತು ಮಾತನಾಡಿದ ಅವರು, ಕೆಲ ಶಾಸಕರು ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜಕೀಯದಲ್ಲಿ ಪಕ್ಷಗಳು ಸ್ಥಿರವಾಗಿರುವುದಿಲ್ಲ. ಬಿಜೆಪಿ ಹಲವು ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದು, ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನವಿರುವವರು ಪಕ್ಷ ತೊರೆಯಬಹುದು, ಆದರೆ ಕಾರ್ಯಕರ್ತರಿಗೆ ಹಾನಿ ಮಾಡಬಾರದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಿ. ಮಲತೇಶ, ಚಂದ್ರಶೇಖರ, ಮಂಜುನಾಥ್, ಶರತ್ ಕಲ್ಯಾಣಿ, ಶ್ರೀ ನಾಗ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















