ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತಾಪಿ ವರ್ಗದ ಮೇಲೆ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಗಧಾಪ್ರಹಾರಕ್ಕೆ ಮುಂದಾಗಿದೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೃಷಿ ಕ್ಷೇತ್ರಗಳನ್ನೇ ನಂಬಿ ಬದುಕುತ್ತಿರುವ ರೈತಾಪಿ ವರ್ಗದ ಮೇಲೆ ಗದಾಪ್ರಹಾರ ಮಾಡಲು ಮುಂದಾಗಿದೆ. ತನ್ಮೂಲಕ ಉದ್ಯಮಿಗಳು ಮತ್ತು ಬಹುರಾಷ್ಟ್ರೀಯ ಕಂಪೆನಿಗಳು, ರಿಯಲ್ ಎಸ್ಟೇಟ್ ವ್ಯಾಪಾರಿಗಳ ಹಿತರಕ್ಷಣೆ ಮಾಡುತ್ತಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಹೊರಗಿನ ವರ್ತಕರ ಮೇಲೆ ಸರ್ಕಾರಕ್ಕೆ ಯಾವುದೇ ನಿಯಂತ್ರಣವಿರುವುದಿಲ್ಲ. ಆರಂಭದಲ್ಲಿ ರೈತರಿಗೆ ಒಳ್ಳೆಯ ಬೆಲೆ ನೀಡಿ ಕೃಷಿ ಉತ್ಪನ್ನ ಖರೀದಿಸುವ ಖಾಸಗಿ ಕಂಪನಿಗಳು ನಂತರದ ದಿನಗಳಲ್ಲಿ ಎಪಿಎಂಸಿ ಮುಚ್ಚುವಂತೆ ಮಾಡಿ ಅನಿವಾರ್ಯವಾಗಿ ರೈತ ಕೊನೆಗೆ ಖಾಸಗಿಯವರನ್ನೇ ಅವಲಂಬಿಸಬೇಕಾಗುತ್ತದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷ ಈ ಮಸೂದೆಯನ್ನು ರಾಜಕೀಯಕ್ಕಾಗಿ ವಿರೋಧಿಸುತ್ತಿದೆ ಎನ್ನುವುದಾದರೇ? ಕೇಂದ್ರ ಮಂತ್ರಿ ಪದವಿ ತ್ಯಜಿಸಿದ ಶಿರೋಮಣಿ ಅಕಾಲಿದಳ ಯಾಕೆ ವಿರೋಧ ಮಾಡುತ್ತಿದೆ? ಎಂದು ಪ್ರಶ್ನಿಸಿದ ಅವರು, ದೇಶದಲ್ಲಿನ ರೈತ ಸಂಘಟನೆಗಳು ಅಷ್ಟೇ ಏಕೆ, ಬಿಜೆಪಿ ಅಂಗ ಎನಿಸಿಕೊಂಡಿರುವ ಭಾರತೀಯ ಕಿಸಾನ್ ಮಂಚ್ ಏಕೆ ಪ್ರತಿಭಟಿಸುತ್ತಿದೆ? ಸ್ವಾಮಿನಾಥನ್ ವರದಿ ಜಾರಿಗೊಳಿಸಲು ಬಿಜೆಪಿ ಗೆ ಏಕೆ ಆಸಕ್ತಿ ಇಲ್ಲ. ಅಂದರೆ ಅಂಬಾನಿ-ಅದಾನಿಯಂತರ ದೊಡ್ಡಕಂಪನಿಗಳು ಹಾಗೂ ವಿದೇಶಿ ಕಂಪನಿಗಳಿಗೆ ಈ ಕೃಷಿ ಕ್ಷೇತ್ರದ ಮೇಲೆ ಲಗ್ಗೆ ಇಡಲು ಅವಕಾಶ ನೀಡುವುದೇ ಇದರ ಮುಖ್ಯ ಉದ್ದೇಶವಾಗಿದೆ ಎಂದು ದೂರಿದರು.
ಮೋದಿ ಸರ್ಕಾರ ಮೂರು ಮರಣ ಶಾಸನವನ್ನು ಜಾರಿ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಇದಲ್ಲಿ ಮೊದಲನೆಯದು ಎಪಿಎಂಸಿಯನ್ನು ಮೂಲೆಗುಂಪು ಮಾಡುವ ಮಸೂದೆ ಇದಾಗಿದೆ. ಮೋದಿ ಸರಕಾರ ತರುತ್ತಿರುವ ಎರಡನೇ ಮರಣ ಶಾಸನವಾದ ಕಾಂಟ್ರಾಕ್ಟ್ ಫಾಮಿರ್ಂಗ್ ಶಾಸನದ ಮೂಲಕ ಸರಕಾರವು ರೈತರ ಹಿಡುವಳಿಗಳನ್ನು ಬೃಹತ್ ಬಹುರಾಷ್ಟ್ರೀಯ ಕಂಪೆನಿಗಳಿಗೆ ಒಪ್ಪಂದದ ಆಧಾರದಲ್ಲಿ ಗುತ್ತಿಗೆಗೆ ಕೊಡಲು ಅನುವು ಮಾಡಿಕೊಡುತ್ತದೆ. ಮೂರನೆಯದಾಗಿ ಬೃಹತ್ ಕೃಷಿ ಕಂಪೆನಿಗಳಿಗೆ ನಮ್ಮ ದೇಶದ ಆಹಾರ ಸರಕುಗಳನ್ನು ದಾಸ್ತಾನು ಮಾಡಿಟ್ಟುಕೊಳ್ಳಲು ಅವಕಾಶ ಕೊಡುವ ಕಾಯ್ದೆ ಅರ್ಥಾತ್ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಯಾಗಿದೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ ಮತ್ತು 80ನೇ ಕಲಂಗಳನ್ನು ರದ್ದುಗೊಳಿಸಿ, ಕಲಂ 63ರಲ್ಲಿ ನಿಗದಿಪಡಿಸಿದ ಭೂ ಒಡೆತನದ ಮಿತಿಯನ್ನು ದ್ವಿಗುಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕೃಷಿ ಕ್ಷೇತ್ರದ ಶವಪೆಟ್ಟಿಗೆಗೆ ಹೊಡೆದಿರುವ ಕೊನೆಯ ಮೊಳೆಯಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















