ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರದಲ್ಲಿ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಇಂದೂ ಸಹ ಮೂರು ಠಾಣೆ ವ್ಯಾಪ್ತಿಯಲ್ಲಿ ಇಡೀ ದಿನ ಕರ್ಫ್ಯೂ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಇಂದು ಕೂಡ 3 ಠಾಣಾ ವ್ಯಾಪ್ತಿ ಪ್ರದೇಶಗಳಲ್ಲಿ ಇಡೀ ದಿನ ಕರ್ಫ್ಯೂ ಮುಂದುವರೆಯಲಿದೆ. ನಾಳೆ ಶನಿವಾರ ಬೆಳಿಗ್ಗೆ 10 ಗಂಟೆವರೆಗೂ ನಗರದ 3 ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಮುಂದುವರೆಯಲಿದೆ ಎಂದರು.
ಕೋಟೆ ಠಾಣೆ, ದೊಡ್ಡಪೇಟೆ ಮತ್ತು ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶಗಳಲ್ಲಿ ನಾಳೆಯವರೆಗೂ ಕರ್ಫ್ಯೂ ಮುಂದುವರೆಯಲಿದೆ. ನಿನ್ನೆ ನಡೆದಿರುವ ಅಹಿತಕರ ಘಟನೆ ಸಂಬಂಧ ಎಲ್ಲಾ ಮಾಹಿತಿಗಳನ್ನು ಕಲೆ ಹಾಕಲಾಗಿದೆ. ಮೊದಲು ನಗರವನ್ನು ಶಾಂತಿಯುತವಾಗಿರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಘಟನೆ ಆದ ನಂತರ ಯೋಚನೆ ಮಾಡುವುದಕ್ಕಿಂತ, ಘಟನೆಗೂ ಮುನ್ನ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ನಗರದೆಲ್ಲೆಡೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಯಾವುದೇ ಸಮಸ್ಯೆ ಇಲ್ಲ ಎಂದರು.
ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಎಲ್ಲಾ ಬಿಗಿ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಂಜಾಗರೂಕತಾ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ 144ನಿಷೇಧಾಜ್ಞೆ ವಿಧಿಸಲಾಗಿದೆ. ದೊಡ್ಡಪೇಟೆ, ಕೋಟೆ ಮತ್ತು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಫ್ರ್ಯೂ ಮುಂದುವರೆಸಲಾಗಿದೆ. ಹಾಲು, ಔಷಧಿ ಮತ್ತಿತರ ಅಗತ್ಯ ಸಾಮಾಗ್ರಿಗಳ ಪೂರೈಕೆಗೆ ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ. ಜನರು ವದಂತಿಗಳಿಗೆ ಕಿವಿಗೊಡದೆ ಶಾಂತಿಯನ್ನು ಕಾಪಾಡಬೇಕೆಂದು ಅವರು ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post