ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಜನರಿಗೆ ನೇರವಾಗಿ ಸೌಲಭ್ಯಗಳನ್ನು ಒದಗಿಸುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸವಿ ಫಲಾನುಭವಿಗಳ ಆಯ್ಕೆ ಸೇರಿದಂತೆ ಯೋಜನೆಗಳ ಅನುಷ್ಟಾನ ಸಂದರ್ಭದಲ್ಲಿ ಸ್ಥಳೀಯವಾಗಿ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯಾವುದೇ ಯೋಜನೆ ಅನುಷ್ಟಾನದಲ್ಲಿ ಸಮಸ್ಯೆಗಳು ಉಂಟಾದರೆ ತಕ್ಷಣ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು ಎಂದರು.
ಗ್ರಾಮ ಜ್ಯೋತಿ ಯೋಜನೆ
ದೀನ ದಯಾಳ್ ಉಪಾಧ್ಯಾಯ್ ಗ್ರಾಮ ಜ್ಯೋತಿ ಯೋಜನೆಯಡಿ ಗ್ರಾಮೀಣ ವಿದ್ಯುದ್ದೀಕರಣ, ಫೀಡರ್ ಬೇರ್ಪಡಿಸುವಿಕೆ ಮತ್ತು ಹೊಸ ಮೀಟರ್ ಅಳವಡಿಸುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಮೀಟರ್ ಅಳವಡಿಸಲು ಹಣಕ್ಕೆ ಬೇಡಿಕೆ ಇಡುವಂತಹ ದೂರುಗಳು ಬರಬಾರದು. ಯೋಜನೆ ಅನುಷ್ಟಾನ ಪರಿಶೀಲಿಸಲು ಸಮಿತಿಯ ಸದಸ್ಯರು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಂಸದರು ಸೂಚಿಸಿದರು. ಮೆಸ್ಕಾಂ ಕುರಿತಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮೆಸ್ಕಾಂ ಎಂಡಿಯವರನ್ನು ಜಿಲ್ಲೆಗೆ ಕರೆಯಿಸಿ ಸಭೆ ನಡೆಸಲಾಗುವುದು ಎಂದರು.
ಪಿಎಅಜಿಎಸ್ವೈ
ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆಯಡಿ ನಿರ್ಮಿಸಿರುವ ರಸ್ತೆಗಳ ನಿರ್ವಹಣೆಯನ್ನು 5 ವರ್ಷಗಳ ಕಾಲ ಗುತ್ತಿಗೆದಾರರು ನಿರ್ವಹಿಸಬೇಕಾಗಿದೆ. ಮರು ಡಾಂಬರೀಕರಣ ಸೇರಿದಂತೆ ನಿರ್ವಹಣೆಯನ್ನು ಸಮರ್ಪಕವಾಗಿ ನಡೆಸುವಂತೆ ಸೂಚಿಸಬೇಕು ಎಂದು ಹೇಳಿದರು.
ಉದ್ಯೋಗ ಖಾತ್ರಿ ಯೋಜನೆ
ಜಿಲ್ಲೆಯಲ್ಲಿ ಎನ್ಆರ್ಇಜಿ ಅಡಿ ಪ್ರಸ್ತುತ ವರ್ಷ 45 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 32ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ಯೋಜನೆಯಡಿ ಈಗಾಗಲೇ ಅಡಿಕೆ, ಬಾಳೆ, ಕರಿಮೆಣಸು, ನುಗ್ಗೆ, ಹಣ್ಣಿನ ಬೆಳೆಗಳ ಕೃಷಿಯನ್ನು ಸೇರಿಸಲಾಗಿದೆ. ಭತ್ತ ನಾಟಿ ಮಾಡುವಿಕೆ ಸೇರಿದಂತೆ ಮಲೆನಾಡಿನ ಕೃಷಿ ಚಟುವಟಿಕೆಗಳನ್ನು ಈ ಯೋಜನೆಯಡಿ ಸೇರಿಸುವ ಬಗ್ಗೆ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಅವರು ತಿಳಿಸಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರ ಭಾಗದಲ್ಲಿ 5085 ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, 4624 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಗ್ರಾಮೀಣ ಭಾಗದಲ್ಲಿ 1612 ಮನೆಗಳಿಗೆ ಅನುಮೋದನೆ ದೊರೆತಿದ್ದು 658 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಗ್ರಾಮೀಣ ಭಾಗದಲ್ಲಿ ಮನೆಗಳ ನಿರ್ಮಾಣಕ್ಕಾಗಿ 2.48 ಕೋಟ ರೂ. ಬಿಡುಗಡೆಯಾಗಿದೆ. ಮನೆಗಳ ನಿರ್ಮಾಣ ಕಾರ್ಯ ಸಮರ್ಪಕವಾಗಿ ಅನುಷ್ಟಾನಗೊಳ್ಳುವಂತೆ ಖಾತ್ರಿಪಡಿಸಬೇಕು ಎಂದವರು ಹೇಳಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ತಾಲೂಕು ಪಂಚಾಯತ್ ಅಧ್ಯಕ್ಷರು, ದಿಶಾ ಸಮಿತಿ ನಾಮನಿರ್ದೇಶಿತ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post