ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಿಜೆಪಿಗೆ ನನ್ನ ಹೆಣವೂ ಹೋಗುವುದಿಲ್ಲ ಎಂಬ ಸಿಎಂ ಸಿದ್ದರಾಮಯ್ಯ CM Siddaramaiah ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಸಂಸದ ಬಿ.ವೈ. ರಾಘವೇಂದ್ರ, MP Raghavendra ಹೆಣ ಇಟ್ಟುಕೊಳ್ಳುವ ವ್ಯವಸ್ಥೆ ನಮ್ಮ ಪಕ್ಷದಲ್ಲಿ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಯಾವಾಗಲೂ ಜೀವ ಉಳಿಸಿಕೊಳ್ಳುವ ಕೆಲಸ ಮಾಡುತ್ತದೆ. ಇನ್ನೊಬ್ಬರ ಜೀವ ತೆಗೆಯುವ ಕೆಲಸವನ್ನು ಎಂದಿಗೂ ಮಾಡುವುದಿಲ್ಲ ಎಂದರು.
ಬಿಜೆಪಿ ಜೆಡಿಎಸ್ ಹೊಂದಾಣಿಕೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ಜೆಡಿಎಸ್ ಹೊಂದಾಣಿಕೆ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರದ ನಾಯಕರಿಂದ ನಮಗೆ ಯಾವುದೇ ಮಾಹಿತಿ ಇಲ್ಲ. ಮೈತ್ರಿಯಾದರೆ ಅನುಕೂಲ ಆಗುತ್ತದೆ ಎಂದರು.
ರಾಜ್ಯದಲ್ಲಿ ಈ ಬಾರಿ ಮಳೆ ಕಡಿಮೆ ಇದೆ. ಬರಗಾಲದಲ್ಲೂ ಕೂಡ ಸರ್ಕಾರ ಸ್ಪಂದನೆ ಮಾಡುತ್ತೊಲ್ಲ. ಬಿಜೆಪಿ ಸರ್ಕಾರದ ಯೋಜನೆ ಕೈಬಿಟ್ಟಿದ್ದಾರೆ. ಈ ಬಾರಿ ಸರಾಸರಿ ಮಳೆ ಕಡಿಮೆಯಾಗಿದೆ. ಬರಗಾಲ ಘೋಷಣೆ ಮಾಡಿ ಅಂದರೆ ವಿಳಂಬ ಮಾಡ್ತಿದ್ದಾರೆ. ರೈತರ ಸಮಸ್ಯೆ ಇದ್ದರೂ ಸ್ಪಂದಿಸುತ್ತಿಲ್ಲ. ಸಚಿವರು ರೈತರ ಆತ್ಮಹತ್ಯೆಯ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಬರಗಾಲ ಘೋಷಣೆ ಮಾಡಬೇಕು, ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ರೈತರಿಗೆ ಬೆಳೆ ವಿಮೆ ಕೊಡಬೇಕು ಎಂದು ಒತ್ತಾಯಿಸಿದರು.
ರೈತರ ಆತ್ಮಹತ್ಯೆಯ ಬಗ್ಗೆ ವರದಿಯಾಗಿಲ್ಲ. ಆತ್ಮಹತ್ಯೆಯ ರೈತರಿಗೆ ಪರಿಹಾರ ಸಿಕ್ಕಿಲ್ಲ. ರೈತರ ಆತ್ಮಹತ್ಯೆ ವರದಿ ಪಡೆದು ಶೀಘ್ರವಾಗಿ ಪರಿಹಾರ ಕೊಡಬೇಕು. ಬೇರೆ ಬೇರೆ ಕಾರಣಕ್ಕೆ ಆತ್ಮಹತ್ಯೆ ಆಗಿದ್ದರೆ ಪರಿಶೀಲನೆ ನಡೆಸಲಿ. ರೈತರ ಆತ್ಮಹತ್ಯೆ ಪರಿಹಾರ ವಿಷಯದಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ. ಈ ರೀತಿ ರೈತರ ವಿಚಾರದಲ್ಲಿ ಚೆಲ್ಲಾಟ ಮಾಡಬಾರದು ಎಂದರು.
ರಾಜ್ಯದಲ್ಲಿ ಸರ್ಕಾರ ಇದೆ ಅಂತಾ ಅನಿಸುತ್ತಿಲ್ಲ. ಸಚಿವರಿಗೆ ಹೊಸ ಕಾರು ಖರೀದಿಗೆ ಮುಂದಾಗಿದ್ದಾರೆ. ಗ್ಯಾರಂಟಿ ಯೋಜನೆಗೆ ಬೇರೆ ಬೇರೆ ಯೋಜನೆ ಹಣ ಬಳಸಿಕೊಳ್ಳುತ್ತಿದ್ದಾರೆ ಎಂಸು ದೂರಿದರು.
ಬಿಜೆಪಿ ಸಂಘಟನೆ ಗಟ್ಟಿಯಾಗಿದೆ. ರಾಜ್ಯದಲ್ಲಿ 28 ಲೋಕಸಭಾ ಸ್ಥಾನದಲ್ಲಿ 28 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















