ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ, ಶಿಕಾರಿಪುರ, ಸೊರಬ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕುಗಳನ್ನು ಕೈಗೊಳ್ಳಲಾಗುತ್ತಿರುವ ಸುಮಾರು 1700ಕೋಟಿ ರೂ. ಮೊತ್ತದ ಯೋಜನೆಗಳಿಗೆ ಜುಲೈ 24ರಂದು ಮಾನ್ಯ ಮುಖ್ಯಮಂತ್ರಿಗಳು ವರ್ಚ್ಯುವಲ್ ಮೀಡಿಯಾ ಮುಖಾಂತರ ಚಾಲನೆ ನೀಡುವರು ಎಂದು ಗ್ರಾಮೀಣಾಭಿವೃಧ್ಧಿ, ಪಂಚಾಯತ್ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿ ಮಾತನಾಡುತ್ತಿದ್ದರು. ನಗರದ ಕುವೆಂಪು ರಂಗಮಂದಿರದಲ್ಲಿ ಆಯಾ ತಾಲೂಕುಗಳಲ್ಲಿ ಏಕಕಾಲದಲ್ಲಿ ಈ ಕಾರ್ಯಕ್ರಮ ವರ್ಚುವಲ್ ಮಾಧ್ಯಮದ ಮೂಲಕ ನಡೆಯಲಿದೆ. ಬೆಂಗಳೂರಿನಿಂದಲೇ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಜುಲೈ 24ರಂದು ಬೆಳಿಗ್ಗೆ 10.30ಕ್ಕೆ ನಗರದ ಕುವೆಂಪು ರಂಗಮಂದಿರಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಪರಿಷತ್, ವಿಧಾನಸಭಾ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.
ಈ ಯೋಜನೆಗಳಲ್ಲಿ ಬಹುಪ್ರಮುಖವಾಗಿ 185ಕೋಟಿ ರೂ.ಗಳ ವೆಚ್ಚದಲ್ಲಿ ಅಗತ್ಯ ಪ್ರವಾಸಿ ಸೌಲಭ್ಯಗಳ ಅಭಿವೃದ್ಧಿ, 100ಕೋಟಿ ರೂ.ಗಳ ವೆಚ್ಚದಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 200 ಹಾಸಿಗೆಗಳ ಕಿದ್ವಾಯಿ ಮಾದರಿಯ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ, 120ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ಜಿಲ್ಲಾಡಳಿತ ಭವನ, 15 ಕೋಟಿ ರೂ.ಗಳ ವೆಚ್ಚದಲ್ಲಿ ಎನ್.ಜಿ.ಒ. ಕ್ವಾಟ್ರಸ್ ಕಟ್ಟಡ ಕಾಮಗಾರಿ, 107.89ಕೋಟಿ ರೂ.ಗಳ ವೆಚ್ಚದಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್ ಕಾಮಗಾರಿ, 6ಕೋಟಿ ರೂ.ಗಳ ವೆಚ್ಚದಲ್ಲಿ ಕೆ.ಇ.ಬಿ. ವೃತ್ತದಲ್ಲಿರುವ ನೌಕರರ ಸಮುದಾಯ ಭವನ ನಿರ್ಮಾಣ, 1.50ಕೋಟಿ ವೆಚ್ಚದಲ್ಲಿ ಸಾಗರ ತಾಲೂಕು ನೀರುಕೋಡು ಗ್ರಾಮದಲ್ಲಿ ಸಾರ್ವಜನಿಕ ಸಮುದಾಯ ಭವನ, 10ಕೋಟಿ ರೂ.ಗಳ ವೆಚ್ಚದಲ್ಲಿ ಸ್ಮಾರ್ಟ್ರಸ್ತೆಗಳು, 20.89ಕೋಟಿ ರೂ.ಗಳ ವೆಚ್ಚದಲ್ಲಿ ಸಕ್ರೆಬೈಲಿನಲ್ಲಿ ಜೈವಿಕ ಉದ್ಯಾನವನ ಅಭಿವೃದ್ಧಿ ಕಾಮಗಾರಿ, 32ಕೋಟಿ ರೂ.ಗಳ ವೆಚ್ಚದಲ್ಲಿ ಊರಗಡೂರು ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಾಣ, 55ಕೋಟಿ ರೂ.ಗಳ ವೆಚ್ಚದಲ್ಲಿ ರಾ.ಹೆ.169ರ (ತೀರ್ಥಹಳ್ಳಿ ಪಟ್ಟಣದಲ್ಲಿ ದ್ವಿಪಥದ ಬೃಹತ್ ಸೇತುವೆ ಮತ್ತು ಬೈಪಾಸ್ ರಸ್ತೆ), ರಾ.ಹೆ.206ರಲ್ಲಿ ಸಾಗರ ನಗರ ವ್ಯಾಪ್ತಿಯಲ್ಲಿ 4ಪಥದ ರಸ್ತೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಯಲಿದೆ.
155ಕೋಟಿ ರೂ.ಗಳ ವೆಚ್ಚದಲ್ಲಿ ಇರುವಕ್ಕಿಯಲ್ಲಿ ನಿರ್ಮಾಣಗೊಂಡಿರುವ ಕೃಷಿ ವಿಶ್ವವಿದ್ಯಾಲಯದ ಕಟ್ಟಡ ಉದ್ಘಾಟನೆ, 850 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಡಗಣಿ-ತಾಳಗುಂದ-ಹೊಸೂರು ಹೋಬಳಿಗಳ ಸುಮಾರು 255ಕೆರೆಗಳಿಗೆ ನೀರು ತುಂಬುವ ಏತ ನೀರಾವರಿ ಯೋಜನೆಯ ಲೋಕಾರ್ಪಣೆ, 100ಕೋಟಿ ರೂ.ಗಳ ವೆಚ್ಚದಲ್ಲಿ ೫೦ಹಾಸಿಗೆ ವ್ಯವಸ್ಥೆ ಹೊಂದಿರುವ ಹೃದಯರೋಗ ವಾರ್ಡ್ ಕ್ಯಾಥ್ಲ್ಯಾಬ್ ಉದ್ಘಾಟನೆಗೊಳ್ಳಲಿವೆ.
ಅಲ್ಲದೆ 9.19ಕೋಟಿ ವೆಚ್ಚದಲ್ಲಿ ಮುಖ್ಯ ಇಂಜಿನಿಯರ್ ಕಟ್ಟಡ ನಿರ್ಮಾಣ ಕಾಮಗಾರಿ, 41.39ಕೋಟಿ ವೆಚ್ಚದಲ್ಲಿ ನವುಲೆಯಲ್ಲಿ ಮೆಸ್ಕಾಂ ಶಾಖಾಧಿಕಾರಿಗಳ ಕಚೇರಿ ಕಟ್ಟಡ, 4.81ಕೋಟಿ ರೂ.ಗಳ ವೆಚ್ಚದ ಭದ್ರಾವತಿ ನಗರದ ಮೆಸ್ಕಾಂ ವಿಭಾಗೀಯ ಕಚೇರಿ ಹಾಗೂ ಶಿವಮೊಗ್ಗದಲ್ಲಿ 1.10ಕೋಟಿ ರೂ.ಗಳ ವೆಚ್ಚದಲ್ಲಿ ಶಿವಮೊಗ್ಗ ನಗರದಲ್ಲಿ ನಿರ್ಮಿಸಿರುವ ಮೆಸ್ಕಾಂ ಅತಿಥಿಗೃಹ ಕಟ್ಟಡಗಳು ಲೋಕಾರ್ಪಣೆಗೊಳ್ಳಲಿವೆ ಎಂದರು.
ಬಸವೇಶ್ವರರ ಪುತ್ಥಳಿ ಅನಾವರಣ:
ನಗರದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದಲ್ಲಿ ಹಾಗೂ ಗಾಂಧಿ ಪಾರ್ಕ್ನ ಪ್ರವೇಶ ದ್ವಾರದಲ್ಲಿ ಮೂರು ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಾಗುವುದು ಎಂದು ಪಂಚಾಯತ್ರಾಜ್, ಗ್ರಾಮೀಣಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ಸದರಿ ಪುತ್ಥಳಿ ಅನಾವರಣಗೊಳಿಸಲು ಇರಬಹುದಾದ ಎಲ್ಲಾ ತೊಡಕುಗಳನ್ನು ನಿವಾರಿಸಲಾಗಿದೆ. ಈ ಪುತ್ಥಳಿ ಅನಾವರಣಗೊಳಿಸುವ ಸಂಬಂಧ ಇತ್ತೀಚೆಗೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ಜುಲೈ 24ರಂದು ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿಗಳು ವರ್ಚ್ಯುವಲ್ ಮೀಡಿಯಾ ಮುಖಾಂತರ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಲಿದ್ದಾರೆ. ಅಂದು ನಡೆಯುವ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಗಣ್ಯರು, ವಿವಿಧ ಧರ್ಮಗಳ ಮುಖಂಡರುಗಳನ್ನು ಆಹ್ವಾನಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಮೇಯರ್ ಸುನಿತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಚನ್ನಬಸಪ್ಪ, ಜ್ಞಾನೇಶ್ವರ್ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post