ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯಲ್ಲಿ Lok Sabha Election ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಹಿಂದುಳಿದ ವರ್ಗಗಳ ನಾಯಕ, ಬಿಜೆಪಿಯ ಹಿರಿಯ ಮುಖಂಡ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪರವರಿಗೆ K S Eshwarappa ಎಲ್ಲಾ ಹಿಂದುಳಿದ ವರ್ಗದವರು ಬೆಂಬಲಿಸುವಂತೆ ಜಿಲ್ಲಾ ಸಂಗೊಳ್ಳಿ ರಾಯಣ್ಣ, ಕುರುಬರ ವೇದಿಕೆ ಮನವಿ ಮಾಡಿಕೊಂಡಿದೆ.
ಇಂದು ಮೀಡಿಯಾ ಹೌಸ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ರಾಮಕೃಷ್ಣ ಮೂಡಲಿ ಮಾತನಾಡಿ, ಬಿಜೆಪಿ ಪಕ್ಷವು ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಅಧಿಕಾರಕ್ಕೆ ಬಂದಿದೆ. ಆ ಪಕ್ಷದ ರಾಷ್ಟ್ರೀಯ ನಾಯಕರು ಸಹ ಕುಟುಂಬ ರಾಜಕಾರಣವನ್ನು ಮಾಡುವುದಿಲ್ಲ ಎಂದು ಹೇಳುತ್ತಲೇ ಬಂದಿದ್ದಾರೆ. ಆದರೆ, ರಾಜ್ಯದಲ್ಲಿ ಮಾತ್ರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಕುಟುಂಬ ರಾಜಕಾರಣವನ್ನು ಮಾಡುತ್ತಲೇ ರಾಜ್ಯ ಬಿಜೆಪಿಯನ್ನು ತಮ್ಮ ಇಚ್ಛೆಗೆ ತಕ್ಕಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಕೆ.ಎಸ್.ಈಶ್ವರಪ್ಪ ಬಿಜೆಪಿಯ ಅತ್ಯಂತ ನಿಷ್ಟವಂತ ಕಾರ್ಯಕರ್ತರಾಗಿದ್ದು, ಪಕ್ಷ ಕೇಳಿದ ಕೆಲಸವನ್ನು ಚಾಚು ತಪ್ಪದೆ ಮಾಡುತ್ತಲೇ ಬಂದಿದ್ದಾರೆ. ಪಕ್ಷದ ವರಿಷ್ಠರು ಸೂಚನೆ ಕೊಟ್ಟ ಸಂದರ್ಭದಲ್ಲಿ ತಮ್ಮಗಿದ್ದ ಅಧಿಕಾರವನ್ನು ಬಿಟ್ಟು ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಂಡವರು. 2001ರಲ್ಲಿ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಡೆದ ಕನಕಪುರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಅಭ್ಯರ್ಥಿಗಳೇ ಇರಲಿಲ್ಲ. ಆ ಸಮಯದಲ್ಲಿ ಪಕ್ಷದ ವರಿಷ್ಟರ ಮಾತಿಗೆ ಬೆಲೆ ಕೊಟ್ಟು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧಿಸಿದ್ದರು. ಸ್ಪರ್ಧಿಸಿ 2 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ಪಕ್ಷದ ಮರ್ಯಾದೆ ಉಳಿಸಿದ್ದರು ಎಂದರು.
Also read: ಬಿಗಿ ಭದ್ರತೆಯಲ್ಲಿ ಕೋರ್ಟ್’ಗೆ ಕೇಜ್ರಿವಾಲ್ ಹಾಜರು | ಇಡಿ ಹೇಳಿದ ಕಿಂಗ್ ಪಿನ್ ಯಾರು ನೋಡಿ?
2010ರಲ್ಲಿ ಸಚಿವರಾಗಿದ್ದ ಅವರು ಪಕ್ಷದ ವರಿಷ್ಟರ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಬಿ.ಎಸ್.ಯಡಿಯೂರಪ್ಪ ಕೇಂದ್ರದ ನಾಯಕರೊಂದಿಗೆ ಮುನಿಸಿಕೊಂಡು ಬಿಜೆಪಿ ತೊರೆದು ಕೆಜೆಪಿ ಕಟ್ಟಿದ ಸಂದರ್ಭದಲ್ಲಿಯೂ ಪಕ್ಷವನ್ನು ತೊರೆಯದೇ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡವರು. 2015ರಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸುತ್ತಿರುವಾಗ ತಮ್ಮ ಮೇಲೆ ಭ್ರಷ್ಟಚಾರ ಆರೋಪ ಬಂದಾಗ ಹಿಂದು ಮುಂದು ನೋಡದೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿದವರು. ಭ್ರಷ್ಟಚಾರದ ಆರೋಪ ಸುಳ್ಳು ಎಂದು ನ್ಯಾಯಾಲಯದಲ್ಲಿ ಸಾಭೀತರಾದರು ಮತ್ತೆ ಸಚಿವ ಸ್ಥಾನ ನೀಡುವಂತೆ ಕೇಳಲಿಲ್ಲ ಎಂದರು.
ಒಂದು ಕುಟುಂಬಕ್ಕೆ ಒಂದು ಸ್ಥಾನ ಎಂಬ ನಿಯಮಕ್ಕೆ ಬದ್ಧರಾಗಿ ಅವರು ರಾಜಕೀಯ ನಿವೃತ್ತಿ ಘೋಷಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರಿಷ್ಟರು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸೂಚಿಸಿದ್ದರಿಂದ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಎಸ್.ಎನ್. ಚೆನ್ನಬಸಪ್ಪನವರನ್ನು ಕಣಕ್ಕಿಳಿಸಿದಾಗಲು ಪಕ್ಷದ ಸಿದ್ದಾಂತಗಳಿಗೆ ಬದ್ಧರಾಗಿ ಚೆನ್ನಬಸಪ್ಪರವರನ್ನು ಅತ್ಯಂತ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಲು ಕಾರಣಕರ್ತರಾಗಿದ್ದಾರೆ. ಅವರ ಮಗ ಕೆ.ಇ.ಕಾಂತೇಶ್ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎನ್ನುವುದು ಒಂದು ವರ್ಷದ ಹಿಂದೆಯೇ ನಿಗಧಿಯಾಗಿತ್ತು. ಬಿ.ಎಸ್.ಯಡಿಯೂರಪ್ಪ ಕೆ.ಎಸ್.ಈಶ್ವರಪ್ಪರವರ ಕುಟುಂಬದ ಏಳಿಗೆ ಸಹಿಸದೇ ಕಾಂತೇಶ್ಗೆ ಟಿಕೇಟ್ ತಪ್ಪಿಸಿದ್ದಾರೆ. ಯಡಿಯೂರಪ್ಪನವರ ಕುಟುಂಬದ ಹಿಡಿತದಲ್ಲಿ ಬಿಜೆಪಿ ಸಿಕ್ಕಿ ನರಳುತ್ತಿದೆ. ಈ ಬಾರಿ ರಾಜ್ಯದ 28 ಕ್ಷೇತ್ರಗಳಲ್ಲಿ ಒಬ್ಬ ಕುರುಬ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕಿಳಿಸಿದರಿವುದನ್ನು ವೇದಿಕೆ ಖಂಡಿಸುತ್ತದೆ ಎಂದರು.
ಈಶ್ವರಪ್ಪನವರು ಹಿಂಧುತ್ವದ ಪರ ಗಟ್ಟಿಯಾಗಿ ಮಾತನಾಡುವ ಏಕೈಕ ನಾಯಕರಾಗಿದ್ದಾರೆ. ಈಶ್ವರಪ್ಪನವರು ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತಿದ್ದು ಅವರಿಗೆ ವೇದಿಕೆ ಸಂಪೂರ್ಣ ಬೆಂಬಲ ನೀಡಲಿದೆ. ಕ್ಷೇತ್ರದ ಎಲ್ಲಾ ಹಿಂದುಳಿದ ವರ್ಗದವರು ಅವರನ್ನು ಬೆಂಬಲಿಸಿ ಯಡಿಯೂರಪ್ಪ ಕುಟುಂಬದ ಸರ್ವಾಧಿಕಾರಿ ರಾಜಕಾರಣಕ್ಕೆ ತಿಲಾಂಜಲಿ ಇಡಬೇಕೆಂದು ಮನವಿ ಮಾಡಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಪ್ರಮುಖರಾದ ಸೀತಾರಾಮ್, ಚಂದ್ರಶೇಖರ್, ಮಧು, ರಾಜು, ಕುಶಾಲ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post