ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಸ್ತೂರಿರಂಗನ್ ವರದಿಯನ್ನು ಜಾರಿಗೆ ತರುವ ಮುನ್ನ ಮಲೆನಾಡು ಭಾಗದಲ್ಲಿ ಸಮಗ್ರ ಭೌತಿಕ ಸಮೀಕ್ಷೆ ನಡೆಸಬೇಕು ಎಂದು (Shivamogga) ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಒತ್ತಾಯಿಸಿದರು.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರೈತರ ಜಮೀನು, ಸರ್ವೇ ನಂಬರ್, ಕೃಷಿ ಪ್ರದೇಶ, ಅರಣ್ಯ ಮತ್ತು ಕಂದಾಯ ಭೂಮಿಯ ವಾಸ್ತವ ಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿ ವೈಜ್ಞಾನಿಕವಾಗಿ ಗಡಿ ಗುರುತಿಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂದರು.
ಕಸ್ತೂರಿರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ಜನರಲ್ಲಿ ಅನಗತ್ಯ ಆತಂಕ ಮೂಡಿಸುವ ಬದಲು ವಾಸ್ತವಾಂಶಗಳ ಆಧಾರದ ಮೇಲೆ ನಿರ್ಧಾರ ಕೈಗೊಳ್ಳುವುದು ಅಗತ್ಯ ಎಂದು ಹೇಳಿದರು.
ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಜಾರಿಗೆ ಸಂಬAಧಿಸಿದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಮಲೆನಾಡು ಭಾಗದಲ್ಲಿ ರೈತರ ಜಮೀನು, ಕೃಷಿ ಪ್ರದೇಶ, ಜನವಸತಿ ಮತ್ತು ಅರಣ್ಯ ಪ್ರದೇಶಗಳ ವಾಸ್ತವ ಸ್ಥಿತಿಯನ್ನು ಗುರುತಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಕೇರಳ ಮಾದರಿಯಲ್ಲಿ ಭೌತಿಕ ಸಮೀಕ್ಷೆ ಅಗತ್ಯ
ಕೇರಳದಲ್ಲಿ ಕೇವಲ ಉಪಗ್ರಹ ಆಧಾರಿತ ಸಮೀಕ್ಷೆಗೆ ಸೀಮಿತವಾಗದೆ ಮಾನವ ಸಂಪನ್ಮೂಲವನ್ನು ಬಳಸಿಕೊಂಡು ಭೌತಿಕ ಸಮೀಕ್ಷೆ ನಡೆಸಲಾಗಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ಸಮೀಕ್ಷೆ ನಡೆಸಬೇಕು ಎಂದರು.
ಮಲೆನಾಡಿನ ಪ್ರತಿಯೊಂದು ಪ್ರದೇಶದ ವಾಸ್ತವ ಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಬೇಕು. ರೈತರ ಕೃಷಿ ಜಮೀನು, ಜನವಸತಿ ಪ್ರದೇಶ, ಅರಣ್ಯ ಭೂಮಿ ಹಾಗೂ ಇತರೆ ಭೂ ಬಳಕೆಯ ಸ್ವರೂಪವನ್ನು ಗುರುತಿಸಿ ದಾಖಲಿಸಬೇಕು. ಈ ಸಂದರ್ಭದಲ್ಲಿ ನೈಸರ್ಗಿಕ ಭೂದೃಶ್ಯ ಮತ್ತು ಸಾಂಸ್ಕೃತಿಕ ಭೂದೃಶ್ಯವನ್ನು ಪ್ರತ್ಯೇಕವಾಗಿ ಗುರುತಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
Also read>> ತಿರುಮಲ ಬ್ರಹ್ಮೋತ್ಸವಕ್ಕೆ ಭರದ ಸಿದ್ಧತೆ: ಫಲ-ಪುಷ್ಪ ಪ್ರದರ್ಶನ, ಮಾಧ್ಯಮ ಕೇಂದ್ರ ಉದ್ಘಾಟನೆ
ಭೌತಿಕ ಸಮೀಕ್ಷೆಯ ಮೂಲಕ ವಾಸ್ತವಾಂಶಗಳನ್ನು ಸಂಗ್ರಹಿಸಿದ ನಂತರವೇ ಪರಿಸರ ಸೂಕ್ಷö್ಮ ಪ್ರದೇಶದ ಗಡಿ ನಿರ್ಧರಿಸುವುದು ಸೂಕ್ತ. ಇದರಿಂದ ಜನವಸತಿ ಮತ್ತು ಕೃಷಿ ಪ್ರದೇಶಗಳಿಗೆ ಅನಗತ್ಯ ತೊಂದರೆ ಉಂಟಾಗುವುದನ್ನು ತಪ್ಪಿಸಬಹುದು ಎಂದು ಹೇಳಿದರು.
ಸಂಸತ್’ನಲ್ಲೂ ವಿಷಯ ಪ್ರಸ್ತಾಪ
ಕಸ್ತೂರಿರಂಗನ್ ವರದಿ ಕುರಿತು ತಾನು ಸಂಸತ್’ನಲ್ಲಿ ಕನಿಷ್ಠ ಎರಡು ಬಾರಿ ಪ್ರಸ್ತಾಪಿಸಿದ್ದೇನೆ ಎಂದು ರಾಘವೇಂದ್ರ ತಿಳಿಸಿದರು.
ಪ್ರಸ್ತುತ ಕಸ್ತೂರಿರಂಗನ್ ವರದಿ ವಿಚಾರವು ಏಳನೇ ಕರಡು ಅಧಿಸೂಚನೆಯ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ತನ್ನ ಅಭಿಪ್ರಾಯವನ್ನು ಕೇಂದ್ರ ಸರ್ಕಾರಕ್ಕೆ ಸ್ಪಷ್ಟವಾಗಿ ಸಲ್ಲಿಸಬೇಕು ಎಂದು ಅವರು ಹೇಳಿದರು.
ಮಲೆನಾಡಿನ ರೈತರು ಹಾಗೂ ಜನವಸತಿ ಪ್ರದೇಶಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ತನ್ನ ನಿಲುವನ್ನು ರೂಪಿಸಬೇಕು. ಅಗತ್ಯವಿದ್ದರೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಕಾಲಾವಕಾಶ ಪಡೆದು ಸಮಗ್ರ ಭೌತಿಕ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.
Shivamogga : ಜನವಸತಿ ಪ್ರದೇಶಗಳಿಗೆ ತೊಂದರೆಯಾಗದಂತೆ ಕ್ರಮ
ಹಿಂದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ಕಸ್ತೂರಿರಂಗನ್ ವರದಿ ಕುರಿತು ರಾಜ್ಯದ ನಿಲುವನ್ನು ಸ್ಪಷ್ಟವಾಗಿ ತಿಳಿಸಲಾಗಿತ್ತು ಎಂದು ರಾಘವೇಂದ್ರ ಹೇಳಿದರು.
ಈಗಲೂ ಜನವಸತಿ ಪ್ರದೇಶಗಳಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದು ತಮ್ಮ ಪಕ್ಷದ ನಿಲುವಾಗಿದೆ ಎಂದು ಅವರು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಸೇರಿದಂತೆ ವಿವಿಧ ಪ್ರದೇಶಗಳ ಕುರಿತು ಜನರಲ್ಲಿ ಅನಗತ್ಯ ಆತಂಕ ಮೂಡಿಸುವ ರೀತಿಯಲ್ಲಿ ಹೇಳಿಕೆ ನೀಡಬಾರದು. ವಾಸ್ತವ ಪರಿಸ್ಥಿತಿಯನ್ನು ಜನರಿಗೆ ಸ್ಪಷ್ಟವಾಗಿ ತಿಳಿಸುವುದು ಮುಖ್ಯ ಎಂದು ಹೇಳಿದರು.
ಶರಾವತಿ ಮುಳುಗಡೆ ಸಂತ್ರಸ್ತರ ವಿಚಾರ ಪ್ರಸ್ತಾಪ
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನೂ ಇದೇ ಸಂದರ್ಭದಲ್ಲಿ ಬಿ.ವೈ. ರಾಘವೇಂದ್ರ ಪ್ರಸ್ತಾಪಿಸಿದರು.
ಹಲವು ವರ್ಷಗಳಿಂದ ಪುನರ್ವಸತಿ ಹಾಗೂ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಸಂತ್ರಸ್ತರಿಗೆ ಮತ್ತಷ್ಟು ಸಂಕಷ್ಟ ಎದುರಾಗಬಾರದು. ಕಸ್ತೂರಿರಂಗನ್ ವರದಿ ಅನುಷ್ಠಾನದ ಪರಿಣಾಮವಾಗಿ ಜನರು ನಿರ್ವಸಿತರಾಗುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಅವರು ಹೇಳಿದರು.
ಮಲೆನಾಡಿನ ಜನರ ಜೀವನೋಪಾಯ, ಕೃಷಿ ಮತ್ತು ಜನವಸತಿ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸೆ.25ರೊಳಗೆ ರಾಜ್ಯದ ನಿಲುವು ಸ್ಪಷ್ಟಪಡಿಸಲಿ
ಕೇಂದ್ರ ಸರ್ಕಾರಕ್ಕೆ ರಾಜ್ಯದ ಅಭಿಪ್ರಾಯ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸೆ.25ರ ಗಡುವಿನೊಳಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟವಾಗಿ ತಿಳಿಸಬೇಕು ಎಂದು ರಾಘವೇಂದ್ರ ಹೇಳಿದರು.
ಅದೇ ವೇಳೆ ಮಲೆನಾಡು ಭಾಗದಲ್ಲಿ ಅಗತ್ಯವಿರುವ ಭೌತಿಕ ಸಮೀಕ್ಷೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಸಮಯವನ್ನು ಕೇಳಬೇಕು. ಸಮೀಕ್ಷೆ ನಡೆಸದೆ ಕೇವಲ ದಾಖಲೆಗಳು ಅಥವಾ ಉಪಗ್ರಹ ಆಧಾರಿತ ಮಾಹಿತಿಯ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಬಾರದು ಎಂದು ಅವರು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







