ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗ್ರಾಮೀಣಾಭಿವೃದ್ಧಿ ಇಲಾಖೆಯ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ ಕೊನೆಯ ವಾರದಲ್ಲಿ ಶಿವಮೊಗ್ಗಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ತಾಲೂಕಿನ ಕೊಮ್ಮನಾಳ್ ಅಥವಾ ಹೊಳಲೂರು ಗ್ರಾಮ ಪಂಚಾಯಿತಿಗೆ ಪ್ರಧಾನಿ ಮೋದಿ ಅವರು ಭೇಟಿ ನೀಡುವ ಬಗ್ಗೆ ಜಿಲ್ಲಾಡಳಿತ ಸ್ಪಷ್ಟನೆ ನೀಡಲಿದೆ.
ಶಿವಮೊಗ್ಗ ಹೆಲಿಪ್ಯಾಡ್ಗೆ ಆಗಮಿಸುವ ಪ್ರಧಾನಿ ಮೋದಿ ಸವಳಂಗ ರಸ್ತೆಯಲ್ಲಿ ಸಾಗಲು ರೈಲ್ವೆ ಮೇಲ್ಸೇತುವೆ ಕಾಮಗಾರಿ ಅಡ್ಡಿಯಾಗಲಿದ್ದು, ಕೊಮ್ಮನಾಳ್ ಗ್ರಾಪಂ ಭೇಟಿ ನೀಡುವುದು ಕಷ್ಟ ಸಾಧ್ಯ. ಈ ಹಿನ್ನೆಲೆಯಲ್ಲಿ ಹೊನ್ನಾಳಿ ರಸ್ತೆಯಲ್ಲಿರುವ ಹೊಳಲೂರು ಗ್ರಾಮ ಪಂಚಾಯ್ತಿಯನ್ನು ಮಾದರಿಯಾಗಿ ಗುರುತಿಸಿಕೊಂಡಿದೆ ಎನ್ನಲಾಗಿದೆ.
ಸುಮಾರು ಎರಡು ವರ್ಷಗಳ ಹಿಂದೆಯೇ ಇಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಆರಂಭವಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರಧಾನಿ ಭೇಟಿಗೆ ಯಾವುದೇ ತೊಡಕು ಎದುರಾಗುವುದಿಲ್ಲ. ಹೀಗಾಗಿ ಅಂತಿಮ ಹಂತದಲ್ಲಿ ಪ್ರಧಾನಿ ಭೇಟಿಗೆ ಹೊಳಲೂರು ಆಯ್ಕೆಯಾಗುವ ಸಂಭವ ಹೆಚ್ಚಿದೆ.
ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರು, ನೈರ್ಮಲ್ಯ, ಶಿಕ್ಷಣ, ಆರೋಗ್ಯ ಮುಂತಾದ ಮೂಲ ಸೌಕರ್ಯಗಳು ಪರಿಪೂರ್ಣವಾಗಿರುವಂತೆ ನೋಡಿಕೊಳ್ಳುವುದು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು, ಆಯುಷ್ಮಾನ್ ಕಾರ್ಡ್, ಕೃಷಿ ಸಮ್ಮಾನ್ ಮುಂತಾದ ಯೋಜನೆಗಳಲ್ಲಿ ಶೇ.100 ಪ್ರಗತಿ ಸಾಧಿಸುವಂತೆ ನೋಡಿಕೊಳ್ಳುವುದು ಜಿಲ್ಲಾಡಳಿತಕ್ಕೆ ಸವಾಲುಗಳಾಗಿವೆ.
ಕಳೆದ ವಾರದ ಅಂತ್ಯದವರೆಗೂ ಕೊಮ್ಮನಾಳ್ ಗ್ರಾಪಂ ಮೇಲೆ ಹೆಚ್ಚಿನ ಗಮನಹರಿಸಲಾಗಿತ್ತು. ಆದರೆ ಇದೀಗ ಹೊಳಲೂರು ಗ್ರಾಪಂನ್ನು ಆಯ್ಕೆ ಮಾಡುವುದು ಸೂಕ್ತ ಎಂಬ ಅಭಿಪ್ರಾವನ್ನು ಜಿಲ್ಲಾಡಳಿತ ಹೊಂದಿದೆ ಎಂದು ತಿಳಿದು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post