ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಐಎಸ್ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಯೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೂನ್ 20ರಂದು ಬೆಳಿಗ್ಗೆ 10 ಗಂಟೆಗೆ ಭದ್ರಾವತಿಯ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ತಾಲ್ಲೂಕು ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಮಿಕ ನಾಯಕ ಕಾಮ್ರೇಡ್ ಡಿಸಿ ಮಾಯಣ್ಣನವರ 92ನೇ ಜನ್ಮದಿನಾಚರಣೆಯ ಅಂಗವಾಗಿ ವಿವಿಧ ಸಮಸ್ಯೆಗಳನ್ನು ಇಟ್ಟುಕೊಂಡು ಈ ಪ್ರತಿಭಟನೆ ಮತ್ತು ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕೇಂದ್ರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ವಿಐಎಸ್ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಶ್ರಮಿಸಲೇ ಇಲ್ಲ, ಎರಡೂ ಸರ್ಕಾರಗಳು ಅಭಿವೃದ್ಧಿ ಮಾಡುವುದಾಗಿ ಹೇಳಿ ಕಾರ್ಮಿಕರಿಗೆ ಅನ್ಯಾಯ ಮಾಡಿದ್ದಾರೆ. ಎಂಪಿಎಂ ಕಾರ್ಖಾನೆಯನ್ನು ಅಭಿವೃದ್ಧಿಪಡಿಸಬೇಕು ಇಲ್ಲವೇ ಕಾರ್ಖಾನೆಗೆ ನೀಡಿದ 72 ಸಾವಿರ ಎಕರೆ ಜಮೀನನ್ನು ಕಾರ್ಮಿಕರಿಗೆ, ಬಡಜನರಿಗೆ ನೀಡಬೇಕು ಎಂದು ಆಗ್ರಹಿಸಿದರು.
Also read: ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ
ರೈತರ, ಕಾರ್ಮಿಕರ ಸಮಸ್ಯೆಗಳೂ ಸೇರಿದಂತೆ ಸುಮಾರು 15 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಬ್ರಹ್ಮಲಿಂಗಯ್ಯ, ಎಂ.ವಿ.ಚಂದ್ರಶೇಖರ್, ಶ್ರೀನಿವಾಸ್, ಏಕಾಂತ್, ಶೇಖರ್ ಮುಂತಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Comments 1