ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ನೀರನ್ನು ಇಂಗಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಅವರು ಸೋಮವಾರ ಜಲಾಮೃತ ಹಾಗೂ ನೀರಿನ ಸಂರಕ್ಷಣೆ ಕುರಿತು ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಈ ಯೋಜನೆಯಡಿ ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳನ್ನು ಪ್ರಾಯೋಗಿಕ ಮಾದರಿಯಲ್ಲಿ ಆಯ್ಕೆ ಮಾಡಲಾಗಿದೆ. ದೇಶದಾದ್ಯಂತ ನವೆಂಬರ್ ತಿಂಗಳಿನವರೆಗೆ ಯೋಜನೆ ಅನುಷ್ಟಾನಗೊಳ್ಳಲಿದೆ. ಆದರೆ ನಮ್ಮ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಒಳಗಾಗಿ ಮಳೆ ನೀರನ್ನು ಬಿದ್ದಲ್ಲಿಯೇ ಇಂಗಿಸಲು ಯೋಜನೆ ರೂಪಿಸಲಾಗಿದ್ದು, ತಕ್ಷಣದಿಂದ ಅನುಷ್ಟಾನಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಮಳೆಗಾಲಕ್ಕಿಂತ ಪೂರ್ವದಲ್ಲಿಯೇ ಪ್ರತಿ ಗ್ರಾಮಗಳಲ್ಲಿ ಕೆರೆಗಳ ರಿಪೇರಿ, ಪ್ರತಿ ದೇವಸ್ತಾನದ ಕಲ್ಯಾಣಿಗಳ ಸ್ವಚ್ಛತಾ ಕಾರ್ಯ, ಬೋರ್ವೆಲ್ ರಿಚಾರ್ಜ್ ಮೊದಲಾದ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು. ಪ್ರತಿಯೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ಗುರುತಿಸಿ ಅನುಷ್ಟಾನಗೊಳಿಸಬೇಕು. ನೆಲಕ್ಕೆ ಬಿದ್ದ ನೀರು ಸುಮ್ಮನೆ ಹರಿದು ಹೋಗಲು ಬಿಡದೆ ಆದಷ್ಟು ನೆಲದಲ್ಲಿ ಇಂಗಿಸುವುದು ಈ ಯೋಜನೆಯ ಗುರಿಯಾಗಿದೆ ಎಂದು ಹೇಳಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯ ದಾಖಲೆ ಪ್ರಮಾಣದಲ್ಲಿ ಕಳೆದ ಸಾಲಿನಲ್ಲಿ ಉದ್ಯೋಗ ಕಲ್ಪಿಸಿದೆ. ಕಳೆದ ಸಾಲಿನಲ್ಲಿ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ 13ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿ ಗುರಿಯನ್ನು ನಿಗದಿಪಡಿಸಿತ್ತು. ಆದರೆ ನಮ್ಮ ರಾಜ್ಯ ಮಾರ್ಚ್ ಅಂತ್ಯದ ವೇಳೆಗೆ 15ಕೋಟಿ ಮಾನವ ದಿನಗಳನ್ನು ಸೃಷ್ಟಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 42ಲಕ್ಷ ಮಾನವ ದಿನಗಳನ್ನು ಸೃಷ್ಟಿಸಿದ್ದು ದಾಖಲೆಯಾಗಿದ್ದು, ಇದುವರೆಗೆ ಗರಿಷ್ಟ ಅಂದರೆ 28ಲಕ್ಷ ಮಾನವ ದಿನಗಳನ್ನು ಜಿಲ್ಲೆಯಲ್ಲಿ ಸೃಷ್ಟಿಸಲಾಗಿತ್ತು ಎಂದು ಹೇಳಿದರು.
ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಅಂತರ್ಜಲ ಸಂರಕ್ಷಣೆಗೆ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದೆ. ಇರುವ ನೀರನ್ನು ಸದ್ಭಳಕೆ ಮಾಡಿ ಮುಂದಿನ ತಲೆಮಾರಿಗೆ ನೀರಿನ ಮೂಲಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಯೋಜನೆಯ ಹಿರಿಯ ಅಧಿಕಾರಿ ಅಮರ್ ಸಕ್ಸೇನಾ ಮೊದಲಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















