ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸಲು ಆಗ್ರಹಿಸಿ ಎನ್ಎಸ್ಯುಐ (ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ) ಕಾರ್ಯಕರ್ತರು ಇಂದು ಬೆಳಿಗ್ಗೆ ವೀರಭದ್ರೇಶ್ವರ ಟಾಕೀಸ್ ರಸ್ತೆಯ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.
ಆಧುನಿಕ ಮೈಸೂರು ನಿರ್ಮಾತೃಗಳಲ್ಲೊಬ್ಬರಾದ ಸರ್.ಎಂ. ವಿಶ್ವೇಶ್ವರಯ್ಯನವರ ದೂರದೃಷ್ಟಿಯಿಂದ ಸ್ಥಾಪನೆಯಾಗಿದ್ದ ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಚ್ಚಲು ಹುನ್ನಾರ ನಡೆಸಿರುವುದನ್ನು ಜಿಲ್ಲಾ ಎನ್.ಎಸ್.ಯು.ಐ. ಖಂಡಿಸುತ್ತದೆ ಎಂದು ಪ್ರತಿಭಟನಕಾರರು ತಿಳಿಸಿದರು.
ವಿಐಎಸ್ಎಲ್ ಕಾರ್ಖಾನೆಯು ಏಷ್ಯಾದಲ್ಲಿಯೇ ಉತ್ಕೃಷ್ಟ ಕಬ್ಬಿಣ ಮತ್ತು ಉಕ್ಕು ತಯಾರಿಕೆಗೆ ಪ್ರಸಿದ್ಧಿ ಪಡೆದಿದ್ದು, ಕಾರ್ಖಾನೆಯ ಉತ್ಪನ್ನಗಳಿಗೆ ಬೇಡಿಕೆ ಮತ್ತು ಮಾರುಕಟ್ಟೆಯಿತ್ತು. ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದ ವಿಐಎಸ್ಎಲ್ ಅನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ಉದ್ದೇಶಕ್ಕೆ ಯಾವುದೇ ಷರತ್ತು ಇಲ್ಲದೇ ಕೇಂದ್ರ ಸರ್ಕಾರದ ಸೈಲ್ಗೆ ವಹಿಸಿಕೊಡಲಾಗಿತ್ತು. ಸೈಲ್ ಕಾರ್ಖಾನೆ ಅಭಿವೃದ್ಧಿಪಡಿಸುವ ಬದಲಿಗೆ ಕಾರ್ಖಾನೆಗೆ ಬೇಕಾದ ಅವಶ್ಯಕತೆಗಳನ್ನು ಪೂರೈಸದೇ ಇರುವುದರಿಂದ ಇಂದು ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚಲು ಮುಂದಾಗಿದೆ ಎಂದು ಆರೋಪಿಸಿದರು.
Also read: ಬಡವರಿಗೆ ಮನೆಗಳನ್ನು ಹಂಚುವುದು ತನ್ನ ಪಾಲಿಗೆ ಅತ್ಯಂತ ಸಂತೋಷದ ದಿನ: ಎಮ್ಎಲ್ಎ ಈಶ್ವರಪ್ಪ
ವಿಐಎಸ್ಎಲ್ ಕಾರ್ಖಾನೆ ಸಾವಿರಾರು ಕಾರ್ಮಿಕರಿಗೆ ಉದ್ಯೋಗ ನೀಡುವ ಮೂಲಕ ಈ ಭಾಗದ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತಲೇ ಬಂದಿದೆ. ಆದರೆ, ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗೆ ಗಣಿ ಒದಗಿಸುವಲ್ಲಿ, ಅಗತ್ಯ ಯಂತ್ರೋಪಕರಣಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದು, ಕಾರ್ಖಾನೆ ನಷ್ಟದ ಹಾದಿ ಹಿಡಿಯಲು ಕಾರಣವಾಗಿದೆ. ಇದೀಗ ಕಾರ್ಖಾನೆಯನ್ನು ಮುಚ್ಚುವ ಪ್ರಯತ್ನ ನಡೆಸುತ್ತಿದ್ದು, ಇದರಿಂದ ಸಾವಿರಾರು ಕಾರ್ಮಿಕರು ಬೀದಿಗೆ ಬೀಳುತ್ತಿದ್ದಾರೆ. ಜಿಲ್ಲೆಯ ಆರ್ಥಿಕ ಚಟುವಟಿಕೆಯೂ ಕುಸಿಯುತ್ತಿದೆ. ಇದಕ್ಕೆಲ್ಲ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ದೂರಿದರು.
ಇದರೊಂದಿಗೆ ಜಿಲ್ಲೆಯ ಮತ್ತೊಂದು ಕೈಗಾರಿಕೆ ಎಂಪಿಎಂ ಸಹ ಬಿಜೆಪಿ ಸರ್ಕಾರದ ಹೊಣೆಗೇಡಿತನದಿಂದಾಗಿ ಮುಚ್ಚಲಾಗಿದೆ. ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿಕೊಳ್ಳುತ್ತಲೇ ಅಧಿಕಾರಕ್ಕೆ ಬಂದ ಬಿಜೆಪಿ ಉದ್ಯೋಗ ಸೃಜಿಸುವ ಬದಲು, ಸರ್ಕಾರಿ ಸ್ವಾಮ್ಯದ ಒಂದೊಂದೇ ಉದ್ಯಮಗಳನ್ನು ಮುಚ್ಚುತ್ತಾ ಮತ್ತಷ್ಟು ನಿರುದ್ಯೋಗ ಸೃಷ್ಟಿಗೆ ಕಾರಣವಾಗಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು. ಹಾಗೆಯೇ ಎಂಪಿಎಂ ಕಾರ್ಖಾನೆ ಪುನಶ್ಚೇತನಕ್ಕೂ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಪ್ರಮುಖರಾದ ಕೆ.ಬಿ. ಪ್ರಸನ್ನಕುಮಾರ್, ಎಸ್.ಪಿ. ದಿನೇಶ್ ರಮೇಶ ಹೆಗಡೆ, ರವಿಕುಮಾರ್, ದೀಪಕ್ ಸಿಂಗ್ ಹಾಗೂ ಕಲೀಮ್ ಪಾಷ, ಮಹಮದ್ ನಿಹಾಲ್, ಆರಿಫ್, ಪ್ರಮೋದ್, ಅಕ್ಬರ್, ರಘು, ಚಂದನ್, ವಿಜಯಕುಮಾರ್, ರವಿ ಕಾಟಿಕೆರೆ, ಚರಣ್, ಹರ್ಷಿತ್, ವಿಕ್ರಂ, ರವಿ, ಚಂದ್ರು ಜಿ. ರಾವ್, ತೌಫಿಕ್, ಹೇಮಂತ್, ಚರಣ್, ದೀಕ್ಷಿತ್ ಪ್ರದೀಪ್, ವರುಣ್ ವಿ ಪಂಡಿತ್, ನಾಗೇಂದ್ರ, ಸಾಗರ್, ಬಸವರಾಜ್, ಮಲಗಪ್ಪ ಶಿವು, ಅಬ್ದುಲ್, ಗಿರೀಶ್, ಆಕಾಶ್, ಗೌತಮ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post