ಕಲ್ಪ ಮೀಡಿಯಾ ಹೌಸ್ | ಸೊರಬ |
ಪಟ್ಟಣದಲ್ಲಿ ಸುಮಾರು 2 ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಅಗಲೀಕರಣ ಕಾಮಗಾರಿಗೆ ಭಾನುವಾರ ಪುನಾಃ ಚಾಲನೆ ದೊರೆಕಿದ್ದು, ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಹಾಗೂ ಸಾಗರ ರಸ್ತೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಿಂದ ಮುಖ್ಯರಸ್ತೆಯ ಆಂಜನೇಯ ದೇವಸ್ಥಾನದ ವರೆಗೆ ದ್ವಿಪಥ ರಸ್ತೆ ನಿರ್ಮಾಣವಾಗಿ ದಶಕಗಳೇ ಕಳೆದಿದೆ. ಆದರೆ, ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಿಂದ ದಂಡಾವತಿ ನದಿಯ ವರೆಗೆ ರಸ್ತೆ ನಿರ್ಮಾಣ ಕಾಮಗಾರಿ ನೆನೆಗುದಿಗೆ ಬಿದ್ದು, ಹಲವು ವರ್ಷಗಳೇ ಕಳೆದಿತ್ತು. ಮುಖ್ಯ ರಸ್ತೆಯ ಕೆಲ ನಿವಾಸಿಗಳು ನ್ಯಾಯಾಲಯದ ಮೆಟ್ಟಿಲೇರಿದ ಪರಿಣಾಮ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ರಸ್ತೆ ಅಗಲೀಕರಣಕ್ಕೆ ಇದ್ದ ತಾಂತ್ರಿಕ ಸಮಸ್ಯೆಗಳು ಬಗೆಹರಿದಿರುವುದರಿಂದ ಕಾಮಗಾರಿಯನ್ನು ಪುನಾಃ ಕೈಗೆತ್ತಿಕೊಳ್ಳಲಾಗಿದೆ.
ಬೆಳ್ಳಬೆಳಗ್ಗೆ ಘರ್ಜಿಸಿದ ಜೆಸಿಬಿ ಸದ್ದು: ಭಾನುವಾರ ಬೆಳಗ್ಗೆ ಶ್ರೀ ರಂಗನಾಥ ದೇವಸ್ಥಾನದ ಸಮೀಪದಿಂದ ಆರಂಭವಾದ ತೆರವು ಕಾರ್ಯಾಚರಣೆಯ ವೇಳೆಯಲ್ಲಿ ಸ್ವಯಂ ಪ್ರೇರಿತವಾಗಿ ತೆರವು ಮಾಡಿಕೊಳ್ಳದ ಅಂಗಡಿ ಮತ್ತು ಮನೆಗಳನ್ನು ತಾಲೂಕು ಆಡಳಿತದ ನೇತೃತ್ವದಲ್ಲಿ ಜೆಸಿಬಿ ಸಹಾಯದಿಂದ ತೆರವು ಮಾಡಲಾಯಿತು. ಇನ್ನು ಅಂಗಡಿಗಳಲ್ಲಿನ ವಸ್ತುಗಳನ್ನು ತಾಲೂಕು ಆಡಳಿತದಿಂದ ವಶಕ್ಕೆ ಪಡೆಯಲಾಯಿತು. ಪೌರ ಕಾರ್ಮಿಕರು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಯನ್ನು ತೆರವು ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post