ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣವನ್ನು Sameeksha Reddy’s death Case ಉನ್ನತ ತನಿಖೆಗೆ ವಹಿಸಬೇಕು, ಇವರ ಸಾವಿಗೆ ಕಾರಣರಾದವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆದು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ತಾವರೆಕೊಪ್ಪದಲ್ಲಿರುವ ಸಿಂಹಧಾಮ Tyavarekoppa Lion Safari ಪ್ರಾಣಿ ಸಂಗ್ರಹಾಲಯದಲ್ಲಿ ರಾತ್ರಿ 11.30ರ ಸಮಯದಲ್ಲಿ ಗರ್ಭಧರಿಸಿದ ನೀರಾನೆಗೆ ನೀರಾನೆ Hippopotamus ಚಿಕಿತ್ಸೆ ನೀಡಲು ಹೋಗಿ ನೀರಾನೆಯು ಏಕಾಏಕಿ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಸಿಂಹಧಾಮದ ಹಿರಿಯ ಕಾರ್ಯನಿರ್ವಹಣಾಧಿಕಾರಿ ಡಾ.ಅಮರಾಕ್ಷರ ತಿಳಿಸಿದ್ದಾರೆ.
ಆದರೆ, ಸಾವಿಗೆ ಅಸಲಿ ಕಾರಣವೇನು? ಸಾಮಾನ್ಯವಾಗಿ ಚಿಕಿತ್ಸೆ ನೀಡುವಾಗ ಸಾಕಷ್ಟು ಮುಂಜಾಗ್ರತೆ ವಹಿಸಬೇಕು, ಎಸ್ಒಪಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆದರೆ ಇದ್ಯಾವುದೂ ನಡೆದಿಲ್ಲ. ಎಸ್ಒಪಿ ನಿಯಮಗಳೆಂದರೆ ರಾತ್ರಿ ವೇಳೆಯಲ್ಲಿ ಯಾವುದೇ ಕಾರಣಕ್ಕೂ ಚಿಕಿತ್ಸೆ ನೀಡಬಾರದು, ಒಂದು ವೇಳೆ ನೀಡಿದರೂ ಅರವಳಿಕೆ ಚುಚ್ಚುಮದ್ದು ನೀಡಬೇಕು, ಜೊತೆಗೊಂದಿಷ್ಟು ಸಿಬ್ಬಂದಿ ಬೇಕು, ಇದ್ಯಾವುದೂ ಇಲ್ಲಿ ಪಾಲಿಸದೇ ತರಬೇತಿ ಹಂತದಲ್ಲಿದ್ದ ಡಾ.ಸಮೀಕ್ಷಾ ರೆಡ್ಡಿ ಅವರನ್ನು ಚಿಕಿತ್ಸೆಗೆ ಕಳುಹಿಸಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.
ರಾತ್ರಿ ವೇಳೆ ಯಾವುದೇ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇರುವುದಿಲ್ಲ. ಆದಾಗ್ಯೂ ಡಾ. ಸಮೀಕ್ಷಾ ರೆಡ್ಡಿ ಯಾರ ಅನುಮತಿ ಪಡೆದು ಚಿಕಿತ್ಸೆ ನೀಡಲು ಬಂದಿದ್ದಾರೆ ಎಂಬ ಬಗ್ಗೆ ಸೂಕ್ತ ತನಿಖೆಯಾಗಬೇಕು. ಈ ಘಟನೆಗೆ ಡಾ. ಅಮರಾಕ್ಷರ ಅವರೇ ನೇರ ಹೊಣೆಗಾರರಾಗಿದ್ದಾರೆ. ಅವರನ್ನು ಸೇವೆಯಿಂದ ವಜಾಗೊಳಿಸಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಬಾಗಿಲಲ್ಲೇ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
ಪ್ರತಿಭಟನೆಯಲ್ಲಿ ವೇದಿಕೆಯ ಅಧ್ಯಕ್ಷ ವಾಟಾಳ್ ಮಂಜುನಾಥ್, ಪ್ರಮುಖರಾದ ಪ್ರವೀಣ್, ಸತೀಶ್ ಗೌಡ, ಸಂಜು, ಲೋಕೇಶ್, ಅಕ್ಬರ್ ಪಾಷಾ, ರವಿಕುಮಾರ್, ರಾಘವೇಂದ್ರ ಇನ್ನಿತರರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















