ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಿನಿಮೊಗೆ-ಶಿವಮೊಗ್ಗ ಚಿತ್ರ ಸಮಾಜವು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ, ರಾಷ್ಟ್ರೀಯ ಶಿಕ್ಷಣ ಸಮಿತಿ, ರಾಷ್ಟ್ರೀಯ ಶಿಕ್ಷಣ ಮಹಾ ವಿದ್ಯಾಲಯ ಸಹಯೋಗದೊಂದಿಗೆ ಗಿರೀಶ್ ಕಾಸರವಳ್ಳಿಯವರ ಎರಡು ಚಿತ್ರಗಳ ಅವಲೋಕನ-ಸಂವಾದ-ಸನ್ಮಾನ ಹಾಗೂ ಬಿಂಬ ಬಿಂಬನ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಸೆ.13 ಮತ್ತು 14ರಂದು ಆಯೋಜಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಿನಿಮೊಗೆ-ಶಿವಮೊಗ್ಗ ಚಿತ್ರ ಸಮಾಜದ ಸಂಚಾಲಕ ವೈದ್ಯನಾಥ್, ಸೆ.13ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ರಾಷ್ಟ್ರೀಯ ಶಿಕ್ಷಣ ಮಹಾ ವಿದ್ಯಾಲಯದ ಎಸ್.ವಿ. ಕೃಷ್ಣಮೂರ್ತಿರಾವ್ ಸಭಾಂಗಣದಲ್ಲಿ 2024-25ನೇ ಸಾಂಸ್ಕೃತಿಕ ಕಾರ್ಯಕ್ರಮಗಳ ಅಡಿಯಲ್ಲಿ ಸಿನಿಮಾ ವಸ್ತು ನೋಡುವ ಬಗೆ ಮತ್ತು ಶಿಕ್ಷಣ ಕಾರ್ಯಾಗಾರ ಅಯೋಜನೆಗೊಂಡಿದ್ದು, ಪ್ರಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿಯವರ ಕೂರ್ಮಾವತಾರ, ಕನಸೆಂಬೋ ಕುದುರೆ ಏರಿ ಚಿತ್ರಗಳ ಪ್ರದರ್ಶನ ನಡೆಯಲಿದೆ ಎಂದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ರಂಗಕರ್ಮಿ ಡಾ.ಎಸ್.ಕೆ. ಚಿದಾನಂದ ಅಧ್ಯಕ್ಷತೆ ವಹಿಸಲಿದ್ದು, ಕೂರ್ವಾವತಾರ ಚಿತ್ರದ ಗಾಂಧಿ ಪಾತ್ರಧಾರಿ ಶಿಕಾರಿಪುರ ಕೃಷ್ಣಮೂರ್ತಿ, ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತಾಧಿಕಾರಿ ಎ.ಎನ್. ರಾಮಚಂದ್ರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
Also read: ಕರ್ತವ್ಯನಿರತ ವೈದ್ಯಾಧಿಕಾರಿ ಮೇಲೆ ಹಲ್ಲೆ: ಡಾ. ಪ್ರದೀಪ್ ಡಿಮೆಲ್ಲೋ ಖಂಡನೆ
ಕಾರ್ಯಕ್ರಮದಲ್ಲಿ ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಶಾಲಿನಿ, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜಿ. ಮಧು, ಅಲ್-ಮೊಹ್ಮದ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸೋಮಶೇಖರ, ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ.ಈ.ಲಾವಣ್ಯ, ವಿಶ್ರಾಂತ ಪ್ರಾಚಾರ್ಯರು ಹಾಗೂ ರಂಗಕರ್ಮಿ ಡಾ.ಎಚ್.ಎಸ್. ನಾಗಭೂಷಣ ಭಾಗವಹಿಸಲಿದ್ದಾರೆ ಎಂದರು.
ಸಂವಾದ: ಸೆ.14ರ ಶನಿವಾರ ಸಂಜೆ 4ಗಂಟೆಗೆ ಆರ್ಟಿಓ ಕಛೇರಿ ರಸ್ತೆಯ ಪತ್ರಿಕಾಭವನದ ಮಹಡಿ ಮೇಲೆ ಗಿರೀಶ್ ಕಾಸರವಳ್ಳಿಯವರ ಚಲನಚಿತ್ರಗಳ ಕುರಿತು ಸಂವಾದ ನಡೆಯಲಿದ್ದು, ಹಿರಿಯ ರಂಗಕರ್ಮಿಗಳು, ಗುಲಾಬಿ ಟಾಕೀಸ್ ಚಿತ್ರದ ಕಲಾವಿದರೂ ಆದ ಕೆ. ಜಿ. ಕೃಷ್ಣಮೂರ್ತಿ ಸಂವಾದಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಆಹ್ವಾನಿತರಾಗಿ ವಿಶ್ರಾಂತ ಪೋಲೀಸ್ ಮಹಾ ನಿರ್ದೇಶಕ ಡಾ. ಡಿ.ವಿ. ಗುರುಪ್ರಸಾದ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್, ಪ್ರಸಿದ್ಧ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಲೇಖಕರು ಹಾಗೂ ಗಿರೀಶ್ ಕಾಸರವಳ್ಳಿಯವರ ಒಡನಾಡಿಗಳೂ ಆದ ಗೋಪಾಲಕೃಷ್ಣ ಪೈ ಪಾಲ್ಗೊಳ್ಳಲಿದ್ದು, ಸಂವಾದವನ್ನು ಪ್ರಾಚಾರ್ಯ ಡಾ.ಕೆ.ಚಿದಾನಂದ ನಡೆಸಿಕೊಡಲಿದ್ದಾರೆ ಎಂದರು.
ಪುಸ್ತಕ ಬಿಡುಗಡೆ: ಸಂವಾದದ ನಂತರ ಸಂಜೆ 6ಗಂಟೆಗೆ ಗಿರೀಶ್ ಕಾಸರವಳ್ಳಿ-ಗೋಪಾಲ ಕೃಷ್ಣ ಪೈರವರ ಬಿಂಬ ಬಿಂಬನ ಕೃತಿಯ ಲೋಕಾರ್ಪಣೆ ನಡೆಯಲಿದ್ದು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ಪುಸ್ತಕವನ್ನು ಕುರಿತು ಮಾನಸ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ರಾಜೇಂದ್ರ ಚೆನ್ನಿ ಮಾತನಾಡಲಿದ್ದಾರೆ. ಅಧ್ಯಕ್ಷತೆಯನ್ನು ವಿಧಾನಪರಿಷತ್ ಸದಸ್ಯರು, ಸಿನಿಮೊಗೆ-ಶಿವಮೊಗ್ಗ ಚಿತ್ರ ಸಮಾಜದ ಅಧ್ಯಕ್ಷ ಡಿ.ಎಸ್.ಅರುಣ್ ವಹಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ಉಪಸ್ಥಿತರಿರುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡಾ.ಹೆಚ್.ಎಸ್.ನಾಗಭೂಷಣ, ಜಿ.ವಿಜಯ್ಕುಮಾರ್, ಸಹನಾ ಚೇತನ್, ಆನಂದ್, ಚೇತನ್ಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















