ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಡಬಲ್ ಇಂಜಿನ್ ಸರ್ಕಾರದಿಂದ ದೇಶ ರಾಜ್ಯ ಇಂದು ಅಭಿವೃದ್ಧಿ ಪಥದತ್ತ ಮುನ್ನುಗ್ಗುತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶಿವಮೊಗ್ಗ ನೂತನ ವಿಮಾನ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವಮೊಗ್ಗದ ನೂತನ ವಿಮಾನ ನಿಲ್ದಾಣ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿದೆ. ವಿಮಾನ ನಿಲ್ದಾಣದಿಂದ ಮುಂದಿನ ದಿನದಲ್ಲಿ ಜಿಲೆಯಲ್ಲಿ ಪ್ರವಾಸೋದ್ಯಮ, ವ್ಯಾಪಾರ ವಹಿವಾಟು, ಕೈಗಾರಿಕೆ ಔದ್ಯೋಗಿಕ ರಂಗ ಸೇರಿದಂತೆ ಎಲ್ಲ ರಂಗದಲ್ಲಿಯೂ ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ. ಜೊತೆಗೆ ಸಾಕಷ್ಟು ಉದ್ಯೋಗ ಅವಕಾಶ ದೊರಕಲಿದೆ ಎಂದರು.

ಶಿವಮೊಗ್ಗ ನಿಲ್ದಾಣ ಆರಂಭಗೊಂಡಿರುವುದರಿಂದ ಕೇವಲ ಬೆಂಗಳೂರು ಮಾತ್ರವಲ್ಲದೆ ಭಾರತದ ಮೂಲೆ ಮೂಲೆಗೂ ಸಂಪರ್ಕ ದೊರಕಲಿದೆ. ಕೆಲವೇ ವರ್ಷದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಅಂತರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.
ದೇಶ ಇಂದು ಸಾಕಷ್ಟು ಅಭಿವೃದ್ಧಿ ಹೊಂದಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಹಲವು ಮೆಡಿಕಲ್ ಕಾಲೇಜುಗಳು ಆರಂಭಗೊಂಡಿದೆ. ಪ್ರತಿ ಮನೆಮನೆಗೂ ಕುಡಿಯುವ ನೀರಿನ ಸಂಪರ್ಕ ಒದಗಿಸಲಾಗುತ್ತಿದೆ. ಪ್ರತಿ ಮನೆಗೂ ಶೌಚಾಲಯ ನೀಡಲಾಗುತ್ತಿದೆ. ಬಡವರಿಗೆ ಸೂರು ಒದಗಿಸಲಾಗುತ್ತಿದೆ. ದೇಶ ಎಂದು ಆರ್ಥಿಕವಾಗಿಯೂ ಸಾಕಷ್ಟು ಸದೃಢವಾಗಿದೆ. ಇದಕ್ಕೆ ಕಾರಣ ನರೇಂದ್ರ ಮೋದಿಯವರ ದೂರ ದೃಷ್ಟಿ ಎಂದರು.

ಕರ್ನಾಟಕ ರಾಜ್ಯ ಕೂಡ ಇಂದು ಸಾಕಷ್ಟು ಅಭಿವೃದ್ಧಿ ಹೊಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯ ದೊಡ್ಡ ಪಟ್ಟಿಗೆ ಇದೆ. ಬಡವರ, ಮಹಿಳೆಯರ, ರೈತರ ಪರವಾಗಿ ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದೆ. ಎಂದರು.
ದೇಶ ಇದು ಆರ್ಥಿಕವಾಗಿ ಸಾಕಷ್ಟು ಬಲಿಷ್ಠವಾಗಿದೆ. ಇಡೀ ಜಗತ್ತು ಇಂದು ನರೇಂದ್ರ ಮೋದಿಯವರ ಆಡಳಿತವನ್ನು ಮೆಚ್ಚಿಕೊಂಡಿದೆ. ಭಾರತಕ್ಕೆ ಎಲ್ಲೆಡೆ ಗೌರವ ದೊರಕುತ್ತಿದೆ ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ. ಅದೇ ರೀತಿ ಕರ್ನಾಟಕಕ್ಕೂ ಸಾಕಷ್ಟು ಬಂಡವಾಳ ಹರಿದು ಬರುತ್ತಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿಯೂ ರಾಜ್ಯಸಾಕಷ್ಟು ಪ್ರಗತಿ ಸಾಧಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಎಲ್ಲ ರಂಗದಲ್ಲಿಯೂ ಅಭಿವೃದ್ಧಿ ಹೊಂದುತ್ತಿದೆ. ಇದಕ್ಕೆ ಕಾರಣ ಡಬಲ್ ಇಂಜಿನ್ ಸರ್ಕಾರ ಎಂದರು.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭಾಷಣದಲ್ಲಿ ಹೊಗಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಅವರು ಹುಟ್ಟು ಹೋರಾಟಗಾರರು. ರೈತರಿಗಾಗಿ ಬಗರ್ ಹುಕುಂ ಸಾಗುವಳಿದಾರರ ಪರವಾಗಿ ಸಾಕಷ್ಟು ಹೋರಾಟ ನಡೆಸಿದ್ದರು. ಮುಖ್ಯಮಂತ್ರಿ ಆಗಿ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರು ಮಾಡಿದ ಕಾರ್ಯ ಶಾಶ್ವತವಾಗಿ ಉಳಿಯುತ್ತದೆ. ಸೂರ್ಯ ಚಂದ್ರ ಇರುವವರೆಗೂ ಯಡಿಯೂರಪ್ಪ ಅವರ ಹೆಸರು ಇತಿಹಾಸದಲ್ಲಿ ಇರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತನಾಡಿ, ಡಬಲ್ ಇಂಜಿನ್ ಸರ್ಕಾರ ಇಂದು ಜನರ ಕಲ್ಯಾಣಕ್ಕಾಗಿ, ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ ಎಂದರು.
ತಾವು ಮುಖ್ಯಮಂತ್ರಿ ಆಗಿದ್ದಾಗ ಸರ್ವರಿಗೂ ಸಮ ಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದ ಅಡಿಯಲ್ಲಿ ಸಾಮಾಜಿಕ ನ್ಯಾಯ ದೊರಕಿಸುವ ಸಲುವಾಗಿ ಕೆಲಸ ಮಾಡಿದ್ದೇನೆ. ಕರ್ನಾಟಕ ರಾಜ್ಯ ಶರಣರ ನಾಡು. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಗೂ ಕರ್ನಾಟಕವೇ ಪ್ರೇರಣೆ ಎಂದರು.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭಗೊಳ್ಳಬೇಕು ಎಂಬುದು ಜಿಲ್ಲೆಯ ಜನತೆಯ ಬಹುದಿನದ ಬೇಡಿಕೆಯಾಗಿತ್ತು. ಇದೀಗ ಶಿವಮೊಗ್ಗದ ವಿಮಾನ ನಿಲ್ದಾಣ ಇಂದು ಪ್ರಧಾನಿ ಮೋದಿ ಅವರಿಂದ ಲೋಕಾರ್ಪಣೆಗೊಂಡಿದ್ದು, ಮುಂದಿನ ದಿನದಲ್ಲಿ ಜಿಲ್ಲೆಯ ಅಭಿವೃದ್ಧಿ ವೇಗ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















