ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗವು ಸೇರಿದಂತೆ ಜಿಲ್ಲಾದಾದ್ಯಂತ ರೈತರು ಸಡಗರ ಸಂಭ್ರಮದಿಂದ ಭೂಮಿ ಹುಣ್ಣಿಮೆ #Bhoomi Hunnime ಹಬ್ಬವನ್ನು ಇಂದು ಆಚರಿಸಿದರು.
ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಬೆಳೆಗಳ ನಡುವೆ ಭೂಮಿ ತಾಯಿಗೆ ಗುರುವಾರ ಜಿಲ್ಲಾದ್ಯಂತ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಿದವು. ರೈತಾಪಿ ವರ್ಗದವರು ಬೆಳೆದು ನಿಂತ ಪೈರುಗಳಿಗೆ ಉಡಿ ತುಂಬುವ ಮೂಲಕ ಭೂಮಿ ಹುಣ್ಣಿಮೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು.

Also read: ಅ.19ರಂದು ಏಕಾಕೀ ದಶಗ್ರಂಥ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ
ಭೂತಾಯಿ ಈ ಸಮಯದಲ್ಲಿ ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುತ್ತಾಳೆ ಎಂಬ ಪ್ರತೀತಿ ಇದೆ. ಹಾಗಾಗಿ ಭೂಮಿ ತಾಯಿಯನ್ನು ಗರ್ಭಿಣಿಯ ಸ್ಥಾನದಲ್ಲಿಟ್ಟು ಸೀಮಂತದ ಸಂಭ್ರಮದಂತೆ ರೈತರು ಪೂಜೆ ಸಲ್ಲಿಸುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿಯಾಗಿದೆ.

ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಮಳೆ ಅಬ್ಬರ ಜೋರಾಗಿದೆ. ಇದರ ನಡುವೆಯೂ ಗ್ರಾಮೀಣ ಭಾಗದಲ್ಲಿ ಹಬ್ಬದ ಸಂಭ್ರಮ ಜೋರಾಗಿದೆ. ಬೆಳಗಿನಜಾವವೇ ಬೆಳಗಿನ ಜಾವವೇ ಜಮೀನುಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
ಭತ್ತದ ಗದ್ದೆ ಹೊಂದಿರುವವರು ಸಸಿಯನ್ನು ಮುತ್ತೈದೆಯಂತೆ ಸಿಂಗರಿಸಿ ನೈವೇದ್ಯ ನೀಡಿದರೆ, ಕೆಲವರು ಅಡಕೆ ಮರಗಳಿಗೆ ವಿಶೇಷ ಪೂಜೆ ಸಲ್ಲಿಸಿ ನೈವೇದ್ಯ ಮಾಡಿದರು. ಹಸೆ ಚಿತ್ತಾರದಿಂದ ಅಲಂಕೃತಗೊಂಡಿರುವ ಎರಡು ಬುಟ್ಟಿಯಲ್ಲಿ ವಿವಿಧ ಬಗೆಯ ಅಡುಗೆ ಪದಾರ್ಥಗಳನ್ನು ತಮ್ಮ ಹೊಲಕ್ಕೆ ಒಯ್ದು, ಭೂಮಿಗೆ ನೈವೇದ್ಯ ಮಾಡಿ, ನಂತರ ಅಲ್ಲಿಯೇ ಊಟ ಮಾಡಲಾಗುತ್ತದೆ. ಬಳಿಕ ಚರಗವನ್ನು ಭೂಮಿತಾಯಿಗೆ ಹಾಕಿದರು.
ಹೊಡೆಗೆ ಬಂದ ಸಸಿಗಳನ್ನು ಗರ್ಭವತಿಯಾದ ಹೆಣ್ಣೆಂದು ಕಲ್ಪಿಸಿಕೊಂಡು ಆಕೆಗೆ ಬಯಕೆ ತೀರಿಸುವುದೇ ಈ ಹಬ್ಬದ ವಿಶಿಷ್ಟತೆ. ಭೂಮಾತೆಗೆ ಪೂಜೆ ಮಾಡಿ ಒಳ್ಳೆಯ ಫಸಲನ್ನು ನೀಡು ಎಂದು ಬೇಡಿಕೊಳ್ಳಲಾಗುತ್ತದೆ. ಇಷ್ಟು ವರ್ಷಗಳ ಕಾಲ ಅನ್ನವನ್ನು ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಲಾಗುತ್ತದೆ. ಪೂಜೆ ನಂತರ ಕುಟುಂಬದವರೆಲ್ಲರೂ ಒಟ್ಟಿಗೆ ಸೇರಿ ತಮ್ಮ ಜಾಗದಲ್ಲಿ ಕುಳಿತು ಭೋಜನ ಮಾಡುವುದು ಎಲ್ಲೆಡೆ ನಡೆದುಕೊಂಡು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







Discussion about this post