ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದು, ಕೋವಿಡ್ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಜನರ ಓಡಾಟ ಕಡಮೆಯಾಗದ ಹಿನ್ನೆಲೆಯಲ್ಲಿ ಮೇ 31ರಿಂದ ಜೂನ್ 7ರವರೆಗೆ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಜನರ ಓಡಾಟ ಸಂಪೂರ್ಣ ಕಡಿಮೆಯಾಗದೆ ಸೋಂಕು ನಿಯಂತ್ರಣ ಸಾಧ್ಯವಿಲ್ಲ. ಹೀಗಾಗಿ ಮೇ 31ರ ಸೋಮವಾರ ಬೆಳಿಗ್ಗೆ 10ಗಂಟೆಯಿಂದ ಜೂನ್ 7ರ ಭಾನುವಾರದವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗುತ್ತಿದೆ ಎಂದರು.
ಸಂಸದರು ಹಾಗೂ ಜಿಲ್ಲೆಯ ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಈ ನಿರ್ಧಾರಕ್ಕೆ ಬರಲಾಗಿದ್ದು, ಈ ಅವಧಿಯಲ್ಲಿ ಬೆಳಗ್ಗೆ 6ರಿಂದ 8ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಇರುತ್ತದೆ ಎಂದರು.
ಈ ವೇಳೆ ಜನರ ಓಡಾಟ ಸಂಪೂರ್ಣ ನಿಯಂತ್ರಿಸಲು ಪೊಲೀಸರಿಗೆ ಪೂರ್ಣ ಸ್ವತಂತ್ರ ನೀಡಲಾಗಿದ್ದು, ಅನಗತ್ಯ ಕಾರಣಕ್ಕೆ ರಸ್ತೆಗಿಳಿದರೆ ವಾಹನಗಳನ್ನು ಮುಲಾಜಿಲ್ಲದೆ ಸೀಜ್ ಮಾಡಲಾಗುತ್ತದೆ ಎಂದರು.
ಏನಿರುತ್ತೆ, ಏನಿರುವುದಿಲ್ಲ:
ಮೇ 31ರಿಂದ ಜೂನ್ 7ರವರೆಗೆ ಸಂಪುರ್ಣ ಲಾಕ್ಡೌನ್ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಯಾವುದೇ ರೀತಿಯ ಅಂಗಡಿಮುಂಗಟ್ಟು ವ್ಯವಹಾರಗಳಿಗೆ ಅವಕಾಶ ಇರುವುದಿಲ್ಲ. ಪ್ರಮುಖವಾಗಿ ಬ್ಯಾಂಕ್ಗಳು ತೆರೆಯುವುದಿಲ್ಲ. ಹೊಟೇಲ್ಗಳಲ್ಲಿ ಪಾರ್ಸಲ್ಗೆ ಮಾತ್ರ ಅವಕಾಶ. ಹಾಲು, ಮೆಡಿಕಲ್ ಶಾಪ್, ಆಸ್ಪತ್ರೆ ಸೇರಿದಂತೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.
ಈ ಅವಧಿಯಲ್ಲಿ ವಿನಾಕಾರಣ ರಸ್ತೆಗಿಳಿದರೆ ವಾಹನಗಳು ಜೊತೆಯಲ್ಲಿ ಸವಾರರನ್ನು ಬಂಧಿಸುವಂತೆ ಸಚಿವರು ಆದೇಶಿಸಿದ್ದಾರೆ. ಈವರೆಗೂ ಅನಗತ್ಯವಾಗಿ ತಿರುಗಾಡುತ್ತಿದ್ದ ವಾಹನಗಳನ್ನು ಮಾತ್ರ ಸೀಝ್ ಮಾಡಲಾಗುತ್ತಿತ್ತು. ಆದರೆ ಫುಲ್ ಲಾಕ್ಡೌನ್ ಅವಧಿಯಲ್ಲಿ ವಾಹನದ ಜೊತೆಗೆ ಸವಾರರನ್ನು ಸಹ ಬಂಧಿಸಲಾಗುತ್ತದೆ.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಕಳೆದ 7 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿವೆ. ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳನ್ನು ತಗ್ಗಿಸುವ ಉದ್ದೇಶದಿಂದ ಒಂದು ವಾರ ಕಾಲ ಕಠಿಣ ಲಾಕ್ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 26 ಸಕ್ರಿಯ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನೀರನ್ನು ಸರಿಯಾಗಿ ಕುದಿಸಿ ಆರಿಸಿ ಕುಡಿಯುವುದು ಸೇರಿದಂತೆ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಜನರು ಅನುಸರಿಸಬೇಕು ಎಂದು ಸಚಿವರು ತಿಳಿಸಿದರು.
ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post