ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ.
ಒಂದು ಪ್ರಕರಣದಲ್ಲಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದ ಪರಿಣಾಮ ತೀವ್ರ ಗಾಯವಾಗಿ ವ್ಯಕ್ತಿ ಸಾವನ್ನಪ್ಪಿದರೆ, ಇನ್ನೊಬ್ಬರು ನಡೆದುಕೊಂಡು ಹೋಗುವಾಗ ಎದುರುಗಡೆಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆಸಿದ ಪರಿಣಾಮ ಸಾವನ್ನಪ್ಪಿದ್ದಾರೆ.

ಶಿವಾನಂದಯ್ಯ (64) ಸೊರಬ ತಾಲೂಕಿನ ಆನವಟ್ಟಿಯಿಂದ ನೇರಲಗಿಗೆ ನಡೆದುಕೊಂಡು ಹೋಗುವಾಗ ಎದುರಿನಿಂದ ದ್ವಿಚಕ್ರವಾಹನ ಚಲಾಯಿಸಿಕೊಂಡು ಬಂದ ಸವಾರ ಡಿಕ್ಕಿ ಹೊಡೆದಿದ್ದಾನೆ. ತಕ್ಷಣವೇ ಅವರನ್ನು ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಿವಾನಂದಯ್ಯ ಮೃತಪಟ್ಟಿದ್ದಾರೆ.

ಅಪಘಾತ ಮಾಡಿರುವ ಬೈಕ್ ಸವಾರ ಇಮ್ರಾನ್ ಅಹ್ಮದ್ ವಿರುದ್ಧ ಅನವಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಶಿವಮೊಗ್ಗ ಬಿಹೆಚ್ ರಸ್ತೆಯ ತುಂಗಾ ಸ್ಟ್ಯಾಂಡ್ನ ಎದುರಿನ ಮಳಿಗೆಯಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದ ರವಿ (54) ತಮ್ಮ ಮಗನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ನಿಧಿಗೆ ಜೈನ್ ಪಬ್ಲಿಕ್ ಶಾಲೆಯ ಎದುರು ಚಲಿಸುತ್ತಿದ್ದ ವಾಹನದಿಂದ ಕೆಳಗೆ ಬಿದ್ದಿದ್ದಾರೆ. ಸಚಿನ್ ಅವರ ಅಜಾಗರೂಕತೆ ಹಾಗೂ ನಿರ್ಲಕ್ಷದ ಕಾರಣ ಈ ಅಪಘಾತ ನಡೆದಿದ್ದು ನಿನ್ನೆ ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ. ಸಚಿನ್ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















