ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಕಲುಷಿತ ಕುಡಿಯುವ ನೀರು #Contaminated Water ಬರುತ್ತಿದ್ದು, ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ನೂರಾರು ಜನ ಬಲಿಯಾಗುವ ಮುನ್ನ ಕೂಡಲೇ ಅಧಿಕಾರಿಗಳು ಎಚ್ಚೆತ್ತು ಶುದ್ಧ ಕುಡಿಯುವ ನೀರು ಕೊಡುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಒತ್ತಾಯಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಾ ಪಾನ ಗಂಗಾ ಸ್ನಾನ ಎಂಬ ನಾಣ್ಣುಡಿ ಸುಳ್ಳು ಮಾಡಲು ನೀರು ಸರಬರಾಜು ಮಂಡಳಿ ಅಧಿಕಾರಿಗಳು ನಿರ್ಧರಿಸಿದಂತಿದೆ. ತೀವ್ರ ಮಳೆಯಿಂದ ಕೆಸರುಗದ್ದೆಯ ಮಣ್ಣು ನೀರಿನೊಂದಿಗೆ ಬೆರೆತು ಈ ರೀತಿ ಆಗುತ್ತಿದೆ ಎಂದು ಸಾರ್ವಜನಿಕರು ಬಿಸಿ ಮಾಡಿ ನೀರು ಕುಡಿಯುವಂತೆ ಅಧಿಕಾರಿಗಳು ಕುಂಟುನೆಪ ಹೇಳುತ್ತಿದ್ದಾರೆ. ಶಿವಮೊಗ್ಗ ನಗರಕ್ಕೆ ಮಳೆಯೇನು ಹೊಸದಲ್ಲ, ಇದಕ್ಕಿಂತ ನೂರು ಪಟ್ಟು ಜಾಸ್ತಿ ಮಳೆ ಬಂದಿದೆ ಎಂದರು.

Also read: ಮೂಡಾ ಪ್ರಕರಣದಲ್ಲಿ ಅನಿತಾ ಕುಮಾರಿ ಹೋರಾಡಿ, ಸಿಎಂ ರಾಜೀನಾಮೆ ಕೊಡಿಸಲಿ | ಗಾಯತ್ರಿ ದೇವಿ ಮಲ್ಲಪ್ಪ
2016ರಲ್ಲೇ ಶುದ್ಧ ಕುಡಿಯುವ ನೀರು 24×7 ನೀಡುತ್ತೇವೆ ಎಂದು ಹೇಳಿ ಪಾಲಿಕೆಯಿಂದ ಜಲಮಂಡಳಿ ವಹಿಸಿಕೊಂಡು 8 ವರ್ಷ ಕಳೆದರೂ ಇನ್ನೂ ಶೇ. 50 ರಷ್ಟು ಕಾಮಗಾರಿ ಮುಗಿಸಿಲ್ಲ. ಶುದ್ಧ ಕುಡಿಯುವ ನೀರೂ ಇಲ್ಲ. 24×7 ಕೂಡ ನೀರಿಲ್ಲ. ಜನ ಅನಿವಾರ್ಯವಾಗಿ ಬಾಟಲಿ ನೀರಿನ ಮೊರೆ ಹೋಗಿದ್ದು, ಜನರ ತಾಳ್ಮೆ ಜೊತೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದು, ಜನ ರೊಚ್ಚಿಗೆದ್ದರೆ ಅಧಿಕಾರಿಗಳ ಪರಿಸ್ಥಿತಿ ಹೀನಾಯವಾಗಲಿದೆ ಎಂದರು.

ಈ ಸಂದರ್ಭದಲ್ಲಿ ದೀಪಕ್ ಸಿಂಗ್, ಸಿದ್ದಪ್ಪ, ಸಂಗಯ್ಯ, ಮಧು, ಗೋಪಿ, ಗೋವಿಂದರಾಜ್, ಮಂಜುನಾಥ್, ಲೋಹಿತ್, ಚಂದ್ರಶೇಖರ್ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post