ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮುಖ್ಯಮಂತ್ರಿ ಬಸವರಾಜ್ ಮೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಕೈಗಾರಿಕೋದ್ಯಮಿ, ವಿಧಾನ ಪರಿಷತ್ ಶಾಸಕ ಹಾಗೂ ಅಭಿವೃದ್ಧಿಯ ಬಗ್ಗೆ ಪರಿಕಲ್ಪನೆ ಹೊಂದಿರುವ ಎಸ್. ರುದ್ರೇಗೌಡರನ್ನು ಸಚಿವರನ್ನಾಗಿ ಮಾಡಬೇಕೆಂದು ಜಿಲ್ಲಾ ಕೈಗಾರಿಕಾ ಸಂಘ ಒತ್ತಾಯಿಸಿದೆ.
ಇಂದು ಮಾಚೇನಹಳ್ಳಿ ಇಂಡಸ್ಟ್ರಿ ಅಸೋಸಿಯೇಷನ್, ಶಿವಮೊಗ್ಗ ಜಿಲ್ಲಾ ಕೈಗಾರಿಕೊದ್ಯಮಿಗಳ ಸಂಘ ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಕೈಗಾರಿಕಾ ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಬಹುತೇಕ ಕೈಗಾರಿಕೋದ್ಯಮಿಗಳು ಯಾವುದೇ ಅಧಿಕಾರವಿಲ್ಲದೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಎಸ್. ರುದ್ರೇಗೌಡರು ಕೈಗೊಂಡಿದ್ದಾರೆ. ಇಂತಹ ವ್ಯಕ್ತಿಗೆ ಸಚಿವ ಸ್ಥಾನ ಸಿಕ್ಕರೆ ಮತ್ತಷ್ಟು ಅಭಿವೃದ್ಧಿ ಕೆಲಸಗಳಿಗೆ ಪೂರಕವಾಗಲಿದೆ. ಈ ಹಿನ್ನಲೆಯಲ್ಲಿ ಹಿರಿಯರಾದ ಹಾಗೂ ಅನುಭವಿ ಕೈಗಾರಿಕೋದ್ಯಮಿ ಹಾಗೂ ಶಾಸಕರಾಗಿರುವ ಇವರಿಗೆ ಸಚಿವ ಸ್ಥಾನವನ್ನು ನೀಡುವುದು ಸೂಕ್ತ ಎಂದು ಪ್ರಮುಖರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿರುವ ಹಿರಿಮೆಯನ್ನು ಹೊಂದಿದ್ದಾರೆ. ಅಲ್ಲದೇ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿ, ಬಿಜೆಪಿ ಜಿಲ್ಲಾಧ್ಯಕ್ಷರಾಗಿ, ಕೈಗಾರಿಕೋದ್ಯಮಿಯಾಗಿ, ವಿಧಾನ ಪರಿಷತ್ ಶಾಸಕರಾಗಿ ಕಾರ್ಯನಿರ್ವಹಿಸಿರುವ ಇವರು ಸಾಕಷ್ಟು ಅನುಭವವನ್ನು ಹೊಂದಿದ್ದಾರೆ. ಶಿವಮೊಗ್ಗ ನಗರದ ಅಭಿವೃದ್ಧಿ ಕಾರ್ಯಗಳಿಗೆ ಸೂಕ್ತ ಸಲಹೆ – ಸೂಚನೆಗಳನ್ನು ಸರ್ಕಾರಕ್ಕೂ ಕೊಟ್ಟಿದ್ದಾರೆ ಎಂದರು.
ಕೈಗಾರಿಕೆಗಳು ಸ್ಥಾಪನೆಯಾಗಬೆಕಾದರೆ ಮೂಲಭೂತ ಸೌಕರ್ಯಗಳು ಅಗತ್ಯವಾಗಿದೆ. ಕೈಗಾರಿಕೋದ್ಯಮಿಯಾಗಿರುವ ರುದ್ರೇಗೌಡರಿಗೆ ಕೈಗಾರಿಕೆಯ ಬಗ್ಗೆ ಅಪಾರ ಅನುಭವವಿದೆ. ಈ ಕ್ಷೇತ್ರದಲ್ಲಿ ಸಾಕಷ್ಟು ಪ್ರಶಸ್ತಿಗಳನ್ನು ಕೂಡಾ ಪಡೆದಿದ್ದಾರೆ. ಇವರಿಗೆ ಸಚಿವ ಸ್ಥಾನ ದೊರಕಿದ್ದೇ ಆದರೆ ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಸಾಕಷ್ಟು ಉತ್ತೇಜನ ದೊರೆಯಲಿದೆ ಎಂದು ಹೇಳಿದರು.

ಸಮಾಜದ ಏಳಿಗೆಗಾಗಿ ಅನೇಕ ಕಾರ್ಯಕ್ರಮಗಳನ್ನು ಈಗಾಗಲೇ ನೀಡಿದ್ದಾರೆ. ಅಲ್ಲದೇ ಕೊಡುಗೈ ದಾನಿ ಎಂದೇ ಹೆಸರಾಗಿದ್ದಾರೆ. ಅನೇಕ ಸಂಘ-ಸಂಸ್ಥೆಗಳಲ್ಲೂ ಕೂಡಾ ಕಾರ್ಯನಿರ್ವಹಿಸುವ ಮೂಲಕ ತಮ್ಮ ಕಾರ್ಯವೈಖರಿಯ ಛಾಪನ್ನು ಮೂಡಿಸಿದ್ದಾರೆ. ಸಾಧು ಸ್ವಾಭಾವದ ಇವರಿಗೆ ಸಚಿವ ಸ್ಥಾನ ಎಂಬ ಹುದ್ದೆ ದೊರಕಿದ್ದೇ ಆದರೆ ಇವರ ಅಭಿವೃದ್ಧಿ ಚಿಂತನೆಗಳಿಗೆ ಮತ್ತಷ್ಟು ಉತ್ತೇಜನ ನೀಡದಿಂತಾಗುತ್ತದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಸ್. ರುದ್ರೇಗೌಡರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಜಿಲ್ಲೆಯ ಹಾಗೂ ರಾಜ್ಯದ ಅಭಿವೃದ್ಧಿಗೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಎಸ್ ರುದ್ರೇಗೌಡರ ಕಾರ್ಯವೈಖರಿಯನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಆದ್ದರಿಂದ ಯಡಿಯೂರಪ್ಪನವರು ಸಹ ರುದ್ರೇಗೌಡರು ಸಚಿವರಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿಗೆ ಶಿಫಾರಸ್ಸು ಮಾಡಬೇಕೆಂದು ಸಭೆಯಲ್ಲಿ ಮಾತನಾಡಿದ ಬಹುತೇಕ ಗಣ್ಯರು ಮನವಿ ಮಾಡಿದರು.
ಸಭೆಯಲ್ಲಿ ಐಐಎಫ್ ಚೇರ್ರ್ಮನ್ ಶ್ರೀನಾಥ್ ಗಿರಿಮಾಜಿ, ಐಐಎಫ್ ಉಪಾಧ್ಯಕ್ಷ ಮಧುಕರ್ ಜೋಯಿಸ್, ಫೌಂಡ್ರಿ ಕ್ಲಸ್ಟರ್ನ ಕಾರ್ಯದರ್ಶಿ ಬೆನಕಪ್ಪ, ಎಂಐಎ ಕಿರಣ್ ಕುಮಾರ್, ಶಾಂತಲಾ ಸ್ಪೇರೋ ಕಾಸ್ಟ್ನ ಡಿ.ಎಸ್. ಚಂದ್ರಶೇಖರ್, ಕೈಗಾರಿಕೋದ್ಯಮಿಗಳಾದ ಮಹೇಂದ್ರಪ್ಪ, ನಾರಾಯಣ್ ಮುಂತಾದವರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















