ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯಮಟ್ಟದ ಅಂತರ್ ಜಿಲ್ಲಾ ಫುಟ್ಬಾಲ್ ಲೀಗ್-2026ರ ಪಂದ್ಯಾವಳಿಯನ್ನು ಮೇ16ರಿಂದ 24ರ ವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಫುಟ್ಬಾಲ್ ಸಂಸ್ಥೆ ಪೋಷಕ, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1975ರಲ್ಲಿ ಪ್ರಾರಂಭವಾದ ಶಿವಮೊಗ್ಗ ಜಿಲ್ಲಾ ಫುಟ್ಬಾಲ್ ಸಂಸ್ಥೆಯು 50 ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿದೆ ಅಲ್ಲದೆ, ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಶಿವಮೊಗ್ಗದ ಕ್ರೀಡಾಪಟುಗಳು ಪ್ರತಿನಿಧಿಸಿ, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಜಿಲ್ಲೆಯಲ್ಲಿ 18 ಪುಟ್ಬಾಲ್ ಕ್ಲಬ್ಗಳು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದ ಅವರು, ಈ ಪಂದ್ಯಾವಳಿಯನ್ನು ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆ, ಶಿವಮೊಗ್ಗ ಜಿಲ್ಲಾ ಫುಟ್ಬಾಲ್ ಸಂಸ್ಥೆ ಹಾಗೂ ಯುವ ಬಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿರುವುದು ನಮ್ಮೆಲ್ಲರ ಹೆಮ್ಮೆಯ ವಿಷಯವಾಗಿದೆ ಎಂದರು.

ಪ್ರಪಂಚದಲ್ಲಿ ಅತೀ ಹೆಚ್ಚು ಇಷ್ಟಪಡುವವರ ಕ್ರೀಡೆ ಫುಟ್ಬಾಲ್ ಆಗಿದ್ದು, 500 ಕೋಟಿಗೂ ಹೆಚ್ಚು ಜನ ಇದನ್ನು ವೀಕ್ಷಣೆ ಮಾಡುತ್ತಾರೆ. 30 ವರ್ಷಗಳ ನಂತರ ಈ ಪಂದ್ಯಾವಳಿ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಇನ್ನೂ ಈ ಕ್ರೀಡೆಗೆ ಪ್ರತ್ಯೇಕ ಮೈದಾನವಿಲ್ಲ. ಸಾಗರ ರಸ್ತೆಯ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿರುವ ಹಾಕಿ ಗ್ರೌಂಡಿನ ಪಕ್ಕೆ ಫುಟ್ಬಾಲ್ ಆಟಕ್ಕೆ ಜಾಗ ಗುರುತಿಸಲಾಗಿದೆ. ಆದಷ್ಟು ಬೇಗ ಈ ಜಾಗವನ್ನು ಫುಟ್ಬಾಲ್ಗೆ ಉಪಯೋಗಿಸುವ ಪ್ರಯತ್ನ ನಡೆದಿದೆ. ಸಂಸದ ಬಿ.ವೈ.ರಾಘವೇಂದ್ರ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದಾರೆ.
-ಡಾ. ಧನಂಜಯ ಸರ್ಜಿ, ಶಾಸಕ
ಈ ಪಂದ್ಯಾವಳಿಯು ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯಲಿದ್ದು, ಒಂದು ದಿನಕ್ಕೆ ಮೂರು ಪಂದ್ಯಗಳನ್ನು ಆಡಿಸಲಾಗುತ್ತದೆ. ಪ್ರತಿನಿತ್ಯ ಬೆಳಿಗ್ಗೆ 7.30ಕ್ಕೆ ಪಂದ್ಯಾವಳಿ ಆರಂಭವಾಗುತ್ತದೆ. ವಿಜಯಪುರ, ಬೆಳಗಾವಿ, ಹಾವೇರಿ, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಈ ಆರು ಜಿಲ್ಲೆಗಳಿಂದ ಕ್ರೀಡಾಪಟುಗಳು ಆಗಮಿಸಿ, ಪರಸ್ಪರ ಮುಖಾಮುಖಿಯಾಗಲಿದ್ದಾರೆ. ಇದೇ ಸಂದರ್ಭದಲ್ಲಿ ಫುಟ್ಬಾಲ್ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಮತ್ತು ಜೀವಮಾನ ಸಾಧನೆಯನ್ನು ಗೈದ ಮೊಹಮ್ಮದ್ ದಾದಾಪೀರ್ ಹಾಗೂ ವಿಕ್ಟರ್ ಡಿಸೋಜಾ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಮೇ16ರಂದು ಸಂಜೆ 4ಗಂಟೆಗೆ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಹಾಗೂ ಬೆಂಗಳೂರು ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರೀಸ್, ಅರಗ ಜ್ಞಾನೇಂದ್ರ, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಬಲ್ಕೀಶ್ ಬಾನು, ಗೋಪಾಲಕೃಷ್ಣ ಬೇಳೂರು, ಎಂ.ಎ.ಡಿ.ಬಿ. ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಪ್ರಮುಖರಾದ ಆಯನೂರು ಮಂಜುನಾಥ್, ಕೆ.ಬಿ.ಪ್ರಸನ್ನಕುಮಾರ್, ಎಂ.ಶ್ರೀಕಾಂತ್ ಮೊದಲಾದವರು ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ವಹಿಸಲಿದ್ದಾರೆ ಎಂದರು.
Also read: PCCF Kumar Pushkar Warns Human Intolerance Fueling Biodiversity Crisis
ವಿವಿಧ ದಿನಗಳಲ್ಲಿ ನಡೆಯುವ ಪಂದ್ಯಾವಳಿಗಳಲ್ಲಿ ಶಿವಮೊಗ್ಗ ಜಿಲ್ಲಾ ಫುಟ್ಬಾಲ್ ಸಂಸ್ಥೆ ಅಧ್ಯಕ್ಷ ಶ್ರೀನಾಥ್ ಎಸ್.ಆರ್., ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ಅಧ್ಯಕ್ಷ ಕೆ.ರಂಗನಾಥ್, ರಾಜ್ಯ ಜವಳಿ ನಿಗಮದ ಅಧ್ಯಕ್ಷ ಕೆ.ಚೇತನ್ಗೌಡ, ಪ್ರಮುಖರಾದ ಎಸ್.ರುದ್ರೇಗೌಡ, ಹೆಚ್.ಎಸ್.ಸುಂದರೇಶ್, ಉಪವಿಭಾಗಾಧಿಕಾರಿ ಜಿ.ಹೆಚ್.ಸತ್ಯನಾರಾಯಣ, ತಹಶೀಲ್ದಾರ್ ರಾಜೀವ್ ವಿ.ಎಸ್., ಪೌರಾಯುಕ್ತ ಮಾಯಣ್ಣಗೌಡ ಮೊದಲಾದವರು ಭಾಗವಹಿಸಲಿದ್ದಾರೆ.
ಮೇ24ರಂದು ಮಧ್ಯಾಹ್ನ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕಿ ಶಾರದಾಪೂರ್ಯಾನಾಯ್ಕ್, ಡಿಸಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ., ಅಪರ ಜಿಲ್ಲಾಧಿಕಾರಿ ಅಭಿಷೇಕ್, ಮಾಜಿ ಶಾಸಕ ಆರ್.ಕೆ.ಸಿದ್ದರಾಮಣ್ಣ, ಪ್ರಮುಖರಾದ ಹೆಚ್.ಸಿ.ಯೋಗೀಶ್, ಕೆ.ಈ. ಕಾಂತೇಶ್, ಖಲೀಂಪಾಷಾ ಮೊದಲಾದವರು ಉಪಸ್ಥಿತರಿರುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಎಸ್.ಆರ್. ಶ್ರೀನಾಥ್, ವಿನ್ಸೆಂಟ್ ರೋಡ್ರಿಗಸ್, ಶಿವರಾಜು, ಹರ್ಷಾಭೋವಿ, ಸೂಲಯ್ಯ, ವಿಜಯ್, ಕ್ಲಮೆಂಟ್ ರಾಯನ್, ಆರೀಫ್, ಕಿರಣ್ ಫರ್ನಾಂಡೀಸ್, ರಾಮ್ರಾವ್ ಪವಾರ್, ಮೈಕಲ್ ಕಿರಣ್ ಮೊದಲಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















