ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೆಂಗಳೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಇಲಾಖೆಯಲ್ಲಿನ ಭ್ರಷ್ಟಾಚಾರ ಪ್ರಸ್ತಾಪಿಸಿ ಡೆತ್ ನೋಟ್ ಬರೆದಿಟ್ಟು ಶಿವಮೊಗ್ಗದ ಅವರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ನಲ್ಲಿ ಸಚಿವರ ಹೆಸರು ಪ್ರಸ್ತಾಪಿಸಿರುವುದರಿಂದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರನ್ನು ಕೂಡಲೇ ಸರ್ಕಾರ ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಒತ್ತಾಯಿಸಿದರು.
ಅವರು ಇಂದು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಂತಹ ಘಟನೆಗಳು ಆಗಾಗ್ಗೆ ನಡೆಯುತ್ತಿರುವುದು ರಾಜ್ಯ ಸರ್ಕಾರದ ಕಾರ್ಯವೈಖರಿ ಭಯ ತರಿಸುವ ವಾತಾವರಣ ನಿರ್ಮಾಣವಾಗಿದೆ ಎಂದು ದೂರಿದರು.
ಅಧಿಕಾರಿಯ ಆತ್ಮಹತ್ಯೆಯು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಸಾಮಾನ್ಯ ಅಧಿಕಾರಿಗಳ ಪರಿಸ್ಥಿತಿ ಈ ರೀತಿ ಆದರೆ ನೌಕರರು ಹೆದರಿಕೆಯಿಂದ ಕೆಲಸ ಮಾಡುವಂತಾಗಿದೆ. ಪರಿಶಿಷ್ಟ ಸಮುದಾಯಕ್ಕೆ ಬಳಕೆಯಾಗಬೇಕಿದ್ದ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಂಡಿರುವುದು ಖಂಡನೀಯ ಎಂದರು.
ಚಂದ್ರಶೇಖರ್ ಅವರು ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ಈ ಅಕ್ರಮಕ್ಕೆ ನಾನು ಹೊಣೆಯಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಆದ್ದರಿಂದ ಅಧಿಕಾರಿಯ ಸಾವಿನ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದರು.
ಎಸ್.ಸಿ., ಎಸ್.ಟಿ. ಹೆಸರಿನಲ್ಲಿ ನಡೆಯುತ್ತಿರುವ ದುರಾಚಾರ ಮತ್ತು ಭ್ರಷ್ಟಾಚಾರದಲ್ಲಿ ಇಲಾಖೆಯ ಸಚಿವರೇ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ನಿಗಮದಲ್ಲಿ ಸುಮಾರು 80 ಕೋಟಿ ರೂ. ದುರುಪಯೋಗ ನಡೆದಿರುವ ಶಂಕೆ ಇದ್ದು, ನಿಗಮದ ಹಿರಿಯ ಅಧಿಕಾರಿಗಳು ಭಾಗಿಯಾಗಿರುವುದು ಕಂಡು ಬರುತ್ತಿದೆ ಎಂದರು.
Also read: ಪರಿಷತ್ ಚುನಾವಣೆ | ಮಡಿಕೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಬಿಡುವಿಲ್ಲದ ಪ್ರಚಾರ
ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡು ಎರಡು ದಿನವಾಗಿದ್ದರೂ ಸರ್ಕಾರ ಏನೂ ನಡೆದಿಲ್ಲ ಎಂಬಂತೆ ತನ್ನ ನಡೆ ತೋರಿಸುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶೇ. 40ರಷ್ಟು ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಾಗ ಕಾಂಗ್ರೆಸ್ ನವರು ಕೆ.ಎಸ್. ಈಶ್ವರಪ್ಪ ಅವರು ರಾಜೀನಾಮೆ ನೀಡುವವರೆಗೂ ಹೋರಾಟ ಮಾಡಿದ್ದರು. ಈಗ ತಮ್ಮದೇ ಸರ್ಕಾರದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಈ ಇಲಾಖೆಗೆ ಸಂಬಂಧಪಟ್ಟ ಸಚಿವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ಜನತೆ ಹಾಗೂ ಸರ್ಕಾರಿ ನೌಕರರಿಗೆ ಧೈರ್ಯ ತರಬೇಕಾದರೆ ಕೂಡಲೇ ಈ ಅವ್ಯವಹಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ರೇವ್ ಪಾರ್ಟಿ, ಇಸ್ಪೀಟ್ ದಂಧೆ, ಗಾಂಜಾ, ಗ್ಯಾಂಗ್ ವಾರ್, ಕೊಲೆ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದರು.
ಶಿವಮೊಗ್ಗದಲ್ಲಿ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ರಕ್ಷಣೆಗಾಗಿ ಚನ್ನಮ್ಮ ಪಡೆಯನ್ನು ರಚಿಸಿರುವುದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಅಭಿನಂದಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಾ. ಕಡಿದಾಳ್ ಗೋಪಾಲ್, ನಗರಾಧ್ಯಕ್ಷ ದೀಪಕ್ ಸಿಂಗ್, ಪ್ರಮುಖರಾದ ಕೆ.ಎನ್. ರಾಮಕೃಷ್ಣ, ನರಸಿಂಹ ಗಂಧದಮನೆ, ತ್ಯಾಗರಾಜ್, ಸಿದ್ದಪ್ಪ, ಹೆಚ್.ಎಂ. ಸಂಗಯ್ಯ, ಬೊಮ್ಮನಕಟ್ಟೆ ಮಂಜುನಾಥ್, ದಯಾನಂದ್, ಗೋಪಿ, ಕೃಷ್ಣ, ರಘು, ವೆಂಕಟೇಶ್ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















