ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಬಳಿಕ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅವರಿಗೆ ನೆರವು ನೀಡುವ ಉದ್ದೇಶದಿಂದ ರಾಷ್ಟ್ರ ಭಕ್ತರ ಬಳಗದ ವತಿಯಿಂದ ನಗರದ ಎಲ್ಲ 288 ಬೂತ್ಗಳ ಬೂತ್ ಮಟ್ಟದ ಏಜೆಂಟ್ಗಳ (ಬಿಎಲ್ಎ) ಸಭೆಯನ್ನು ಆಗಸ್ಟ್ 30ರಂದು ಆಯೋಜಿಸಲಾಗಿದೆ ಎಂದು ರಾಷ್ಟ್ರ ಭಕ್ತರ ಬಳಗದ ಮುಖ್ಯಸ್ಥ ಕೆ.ಈ. ಕಾಂತೇಶ್ ತಿಳಿಸಿದ್ದಾರೆ.
ನಗರದ ಪೇಸ್ ಕಾಲೇಜಿನ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಎಸ್ಐಆರ್ ಪ್ರಕ್ರಿಯೆ ಕುರಿತು ಕಾರ್ಯಕರ್ತರಿಗೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಗುವುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಮನೆ-ಮನೆಗೆ ಭೇಟಿ
ಎಸ್ಐಆರ್ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಕರಡು ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರುಗಳು ಕೈಬಿಟ್ಟಿರುವುದು ಕಂಡುಬಂದಲ್ಲಿ ಅಂತಹವರನ್ನು ಗುರುತಿಸಿ, ನಿಯಮಾನುಸಾರ ಮರುಸೇರ್ಪಡೆಗೊಳಿಸುವ ಕಾರ್ಯ ನಡೆಸಬೇಕಾಗಿದೆ ಎಂದು ಕಾಂತೇಶ್ ಹೇಳಿದರು.
Also read>> ಶಿವಮೊಗ್ಗದಲ್ಲಿ 20ನೇ ಸಿಟಿ ಇಂಟರ್ ಸ್ಕೂಲ್ ಚೆಸ್ ಟೂರ್ನಿಮೆಂಟ್ ಯಶಸ್ವಿ
ಈ ಹಿನ್ನೆಲೆಯಲ್ಲಿ ರಾಷ್ಟ್ರ ಭಕ್ತರ ಬಳಗವು ಶಿವಮೊಗ್ಗ ನಗರದ 288 ಬೂತ್ಗಳಲ್ಲೂ ಕಾರ್ಯಕರ್ತರನ್ನು ಗುರುತಿಸಿದೆ. ಪ್ರತಿ ಬೂತ್ಗೆ ಇಬ್ಬರು ಮಹಿಳಾ ಕಾರ್ಯಕರ್ತರು ಹಾಗೂ ಇಬ್ಬರು ಪುರುಷ ಕಾರ್ಯಕರ್ತರನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ಎಸ್ಐಆರ್ ಪ್ರಕ್ರಿಯೆ, ಮತದಾರರ ಮರುಸೇರ್ಪಡೆ ಹಾಗೂ ಅಗತ್ಯ ದಾಖಲೆಗಳ ಕುರಿತು ಸೂಕ್ತ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕರಡು ಮತದಾರರ ಪಟ್ಟಿ ಲಭ್ಯವಾದ ತಕ್ಷಣ ಪ್ರತಿ ಬೂತ್ನ ಕಾರ್ಯಕರ್ತರು ಬೂತ್ ಮಟ್ಟದ ಅಧಿಕಾರಿಗಳೊಂದಿಗೆ (ಬಿಎಲ್ಒ) ಸಮನ್ವಯ ಸಾಧಿಸಿ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಯಾರ ಹೆಸರು ಕೈಬಿಟ್ಟಿದೆ ಎಂಬುದನ್ನು ಪರಿಶೀಲಿಸಿ, ಮರುಸೇರ್ಪಡೆಗೆ ಅಗತ್ಯವಿರುವ ದಾಖಲೆಗಳು ಮತ್ತು ಅನುಸರಿಸಬೇಕಾದ ನಿಯಮಗಳ ಕುರಿತು ಜನರಿಗೆ ಮಾಹಿತಿ ನೀಡಲಾಗುವುದು ಎಂದರು.
ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ
ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅರ್ಹ ನಾಗರಿಕರಿಗೆ ಸೂಕ್ತ ದಾಖಲೆಗಳನ್ನು ಒದಗಿಸಿ ಮರುಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಕಾರ್ಯಕರ್ತರು ನೆರವು ನೀಡಲಿದ್ದಾರೆ. ಈ ಮೂಲಕ ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಉದ್ದೇಶವಾಗಿದೆ ಎಂದು ಕಾಂತೇಶ್ ವಿವರಿಸಿದರು.
ರಾಜ್ಯದಲ್ಲಿ ಒಟ್ಟು 5,54,32,314 ಮತದಾರರ ಪೈಕಿ 1,08,75,304 ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅವರು ಹೇಳಿದರು. ಶಿವಮೊಗ್ಗ ನಗರದಲ್ಲಿಯೂ ಒಟ್ಟು 2,77,098 ಮತದಾರರಿದ್ದು, ಈ ಪೈಕಿ 56,463 ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಮಾಹಿತಿ ನೀಡಿದರು.
ಮೃತಪಟ್ಟವರು, ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರ ಹೆಸರುಗಳನ್ನು ಪರಿಶೀಲನಾ ಪ್ರಕ್ರಿಯೆಯಲ್ಲಿ ತೆಗೆದುಹಾಕಲಾಗಿದೆ. ಆದರೆ ಈ ಪ್ರಕ್ರಿಯೆಯಲ್ಲಿಯೂ ಕೆಲವು ಅರ್ಹ ಮತದಾರರ ಹೆಸರುಗಳು ಕೈಬಿಟ್ಟಿರುವ ಸಾಧ್ಯತೆಯಿದ್ದು, ಅಂತಹವರನ್ನು ಗುರುತಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯಕ್ಕೆ ರಾಷ್ಟ್ರ ಭಕ್ತರ ಬಳಗ ಮುಂದಾಗಿದೆ ಎಂದು ಕಾಂತೇಶ್ ತಿಳಿಸಿದರು.
ಕಾರ್ಯಕರ್ತರಿಗೆ ತರಬೇತಿ
ಆಗಸ್ಟ್ 30ರಂದು ನಡೆಯಲಿರುವ ಬಿಎಲ್ಎ ಸಭೆಯಲ್ಲಿ ನಗರದ 288 ಬೂತ್ಗಳ ಕಾರ್ಯಕರ್ತರಿಗೆ ಎಸ್ಐಆರ್ ನಂತರದ ಪ್ರಕ್ರಿಯೆ ಕುರಿತು ವಿವರವಾದ ಮಾಹಿತಿ ನೀಡಲಾಗುತ್ತದೆ. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸುವುದು, ಹೆಸರು ಕೈಬಿಟ್ಟಿದ್ದರೆ ಕೈಗೊಳ್ಳಬೇಕಾದ ಕ್ರಮ, ಅಗತ್ಯ ದಾಖಲೆಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಕುರಿತು ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು.
ಅರ್ಹ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಲ್ಲಿ ಖಚಿತವಾಗಿ ಉಳಿಯುವಂತೆ ಜನರಿಗೆ ನೆರವಾಗುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ಕೆ.ಈ. ಕಾಂತೇಶ್ ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

