ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತ ಚುನಾವಣಾ ಆಯೋಗದ Election Commission of India ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) SIR ಕಾರ್ಯವು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ-111ರಲ್ಲಿ ಜೂ.20ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ ಎಂದು ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಬಿ.ಆರ್. ಮಂಜುನಾಥ ಹೇಳಿದರು.
ಶುಕ್ರವಾರ ಶಿವಮೊಗ್ಗ ತಾಲೂಕು ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಐಆರ್ ಎಂಬುದು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆಗಿದ್ದು, ಭಾರತೀಯ ಚುನಾವಣಾ ಆಯೋಗವು ನಡೆಸುತ್ತಿದೆ. ಮತದಾರರ ಪಟ್ಟುಯನ್ನು ನಿಖರ ಮತ್ತು ನವೀಕೃತವಾಗಿಡುವುದು. ಮತದಾರನ ಅರ್ಹತೆಯನ್ನು ಪರಿಶೀಲಿಸಿ ದೃಢೀಕರಿಸಲಾಗುವುದು ಇದರ ಉದ್ದೇಶವಾಗಿದ್ದು, ಗ್ರಾಮಾಂತರ ಕ್ಷೇತ್ರದಲ್ಲಿ ಶೇ.91.32ರಷ್ಟು ಮತದಾರರ ಮ್ಯಾಪಿಂಗ್ ಮಾಡಲಾಗಿದೆ. 19,180 ಮತದಾರರ ಮ್ಯಾಪಿಂಗ್ ಬಾಕಿ ಇದೆ. 11 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಬಿಎಲ್ಒಗಳಿಗೆ ನೀಡಿ ಮ್ಯಾಪಿಂಗ್ ಮಾಡಿಕೊಳ್ಳಬಹುದು ಎಂದು ಹೇಳಿದರು.
Also read: ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ
ರಾಜಕೀಯ ಪಕ್ಷಗಳ ಸಹಭಾಗಿತ್ವ: ಕ್ಷೇತ್ರದಲ್ಲಿ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ ನೇಮಕಗೊಂಡಿರುವ 996 ಬೂತ್ಮಟ್ಟದ ಏಜೆಂಟರು(ಬಿಎಲ್ಎ) ಈ ಪ್ರಕ್ರಿಯೆಯಲ್ಲಿ ಭಾಗವಹಿಸುವರು. ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆ ಕಾಪಾಡಲು ಇವರ ಸಹಕಾರ ಪಡೆಯಲಾಗುತ್ತಿದೆ ಎಂದರು.
ಹೊಸ ಮತದಾರರ ಸೇರ್ಪಡೆಗೆ ಫಾರಂ ೬, ಬೇರೆ ರಾಜ್ಯದಿಂದ ಬಂದವರು ತಮ್ಮ ನಿವಾಸವನ್ನು ವರ್ಗಾಯಿಸಲು ಬಯಸುವವರು ಫಾರಂ 8ರ ಜತೆಗೆ ಒಂದು ಘೋಷಣಾ ನಮೂನೆಯನ್ನು ಸಲ್ಲಿಸುವಂತೆ ಹಾಗೂ ಹೆಸರು ತೆಗೆದುಹಾಕಲು ಆಕ್ಷೇಪಣೆ ಫಾರ್ಮ್ 7 ಮತ್ತು ತಿದ್ದುಪಡಿಗಾಗಿ ಫಾರಂ 8ರ ಅರ್ಜಿಗಳನ್ನು ಸಲ್ಲಿಸಲು ಮಾರ್ಗದರ್ಶನ ನೀಡುವರು. ಜತೆಗೆ ದಿನಕ್ಕೆ 50 ನಮೂನೆಗಳನ್ನು ಮಾತ್ರ ಬಿಎಲ್ಒಗೆ ಸಲ್ಲಿಸಬಹುದು. ಕರಡು ಪ್ರಕಟಣೆ ನಂತರ ದಿನಕ್ಕೆ 10 ನಮೂನೆ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.
ಜೂ.20ರಿಂದ 29ರವರೆಗೆ ಎಸ್ಐಆರ್ಗೆ ಸಿದ್ಧತೆ, ತರಬೇತಿ ಹಾಗೂ ಮುದ್ರಣ ಕಾರ್ಯ ನಡೆಯಲಿದೆ. ಜೂ.30ರಿಂದ ಜು.29ರವರೆಗೆ ಎರಡು ಹಂತದಲ್ಲಿ ಬೂತ್ ಮಟ್ಟದ ಅಧಿಕಾರಿ(ಬಿಎಲ್ಒ)ಗಳು ಮನೆ ಮನೆಗೆ ಭೇಟಿ ನೀಡುವರು. ಜು.29ರೊಳಗೆ ಮತಗಟ್ಟೆಗಳ ಮರುಹೊಂದಾಣಿಕೆ ಮಾಡಿಕೊಳ್ಳಲಾಗುವುದು. ಆಗಸ್ಟ್ 5ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಣೆ ಹೊರಡಿಸಲಾಗುವುದು. ಆಗಸ್ಟ್ 5ರಿಂದ ಸೆಪ್ಟಂಬರ್ 4ವರೆಗೆ ಆಕ್ಷೇಪಣೆ ಹಾಗೂ ಅರ್ಜಿಗಳ ಸಲ್ಲಿಕೆಗೆ ಅವಕಾಶವಿರಲಿದೆ. ಅಕ್ಟೋಬರ್ 3ರವರೆಗೆ ಅರ್ಜಿಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ ಮಾಡಲಿದ್ದು, ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಹೊರಬೀಳಲಿದೆ ಎಂದು ಶಿವಮೊಗ್ಗ ತಹಸೀಲ್ದಾರ್ ವಿ.ಎಸ್.ರಾಜೀವ್ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
