ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಊರುಗಡೂರಿನ ವಸತಿ ಬಡಾವಣೆಯಲ್ಲಿ 4 ಎಕರೆ ಪ್ರದೇಶದಲ್ಲಿ ಮತ್ತು ಸೋಮಿನಕೊಪ್ಪದಲ್ಲಿ 1ಎಕರೆ 9 ಗುಂಟೆ ಪ್ರದೇಶದಲ್ಲಿ ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ಅಪಾರ್ಟ್ಮೆಂಟ್ಗಳನ್ನು 10,000 ಲಕ್ಷ ರೂ. ಅಂದಾಜು ಮೊತ್ತದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಊರುಗಡೂರಿನಲ್ಲಿ ಸೂಡಾದಿಂದ #SUDA ನಿರ್ಮಿಸಿರುವ ನಿವೇಶನಗಳ ಹಂಚಿಕೆಯನ್ನು ಎರಡು ತಿಂಗಳ ಒಳಗಾಗಿ ವಿತರಿಸಲಾಗುವುದು. ಪ್ರಾಧಿಕಾರದ ವ್ಯಾಪ್ತಿಯಲ್ಲಿ ಯೋಜನೆ ಪರಿಷ್ಕøತ-11ರ ಕಾರ್ಯವ್ಯಾಪ್ತಿಯಲ್ಲಿದ್ದು, ಹಾಲಿ ಭೂಉಪಯೋಗ ನಕ್ಷೆಗಳನ್ನು ತಯಾರಿಸಿ, ಪ್ರಾಧಿಕಾರದಿಂದ ಅನುಮೋದಿಸಲಾಗಿದೆ. ಪ್ರಾಸ್ತಾವಿಕ ಭೂಉಪಯೋಗ ನಕ್ಷೆ, ರಸ್ತೆ ಪರಿಶೀಲನಾ ನಕ್ಷೆಗಳನ್ನು ಸಿದ್ಧಪಡಿಸಿ, ತಾತ್ಕಾಲಿಕ ಅನುಮೋದನೆ ಪಡೆಯಲು ಸರ್ಕಾರಕ್ಕೆ ಸಲ್ಲಿಸಲು ಪ್ರಾಸ್ತಾವನೆಯನ್ನು ಸಿದ್ಧಪಡಿಸಲಾಗಿದೆ ಎಂದರು.
ಪ್ರಾಧಿಕಾರದ ಅಟಲ್ ಬಿಹಾರಿ ವಾಜಪೇಯಿ ವಸತಿ ಬಡಾವಣೆಯಲ್ಲಿ ಹೊಸ ಕಛೇರಿ ಕಟ್ಟಡವನ್ನು 1000 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು, ಸ್ವಾಮಿ ವಿವೇಕಾನಂದ ಬಡಾವಣೆಯ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಪಕ್ಕದಲ್ಲಿ 1000 ಲಕ್ಷ ರೂ. ವೆಚ್ಚದಲ್ಲಿ ಮಾಲ್ ನಿರ್ಮಿಸಲು ಹಾಗೂ ಜೆ.ಹೆಚ್. ಪಟೇಲ್ ಬಡಾವಣೆಯ ಸೋಮಿನಕೊಪ್ಪ ಮುಖ್ಯರಸ್ತೆಯಲ್ಲಿ 1000 ಲಕ್ಷ ರೂ. ವೆಚ್ಚದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
ಪ್ರಾಧಿಕಾರದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ 60 ಮೀ. ಅಗಲದ ಹೊರವರ್ತುಲ ರಸ್ತೆಯನ್ನು 500 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಹಾಗೂ ಜೆ.ಹೆಚ್. ಪಟೇಲ್ ಬಡಾವಣೆ, ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ಮತ್ತು ನಿಧಿಗೆ-ಮಾಚೇನಹಳ್ಳಿ ಬಡಾವಣೆಯಲ್ಲಿ 3 ಉದ್ಯಾನವನಗಳ ಅಭಿವೃದ್ಧಿಪಡಿಸಲು 295 ಲಕ್ಷ ರೂ. ಅಂದಾಜು ಮೊತ್ತದಲ್ಲಿ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದರು.
ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಒಟ್ಟು 57 ಉದ್ಯಾನವನ ಹಾಗೂ 25 ಆಟೋ ಶೆಟ್ಲರ್ಗಳನ್ನು ನಿರ್ಮಿಸಲು ಹಾಗೂ ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಸ್ವಾಗತ ಕಮಾನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
ಶಿವಮೊಗ್ಗ ನಗರದ ಹೊರವರ್ತುಲ ರಸ್ತೆ ಅಭಿವೃದ್ಧಿಪಡಿಸಲು ಮತ್ತು ಶಿವಮೊಗ್ಗ ನಗರದ 3 ಹಾಗೂ ಭದ್ರಾವತಿ ನಗರದ 3 ವೃತ್ತಗಳನ್ನು ಒಟ್ಟು 4000 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 4 ಕೆರೆಗಳನ್ನು 320 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಹಾಗೂ ಭದ್ರಾವತಿ ನಗರದಲ್ಲಿ 22 ಕೆರೆಗಳನ್ನು 5ಸಾವಿರ ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಡಿಪಿಆರ್ ತಯಾರಿಸಲಾಗುತ್ತಿದೆ ಎಂದರು.
ಪ್ರಾಧಿಕಾರದ ಗೋಪಿಶೆಟ್ಟಿಕೊಪ್ಪ ಗ್ರಾಮದ ವಿವಿಧ ಸರ್ವೇ ನಂಬರ್ಗಳ 104 ಎಕರೆ 39 ಗುಂಟೆ ಪ್ರದೇಶದಲ್ಲಿ ಶೇ.50:50ರ ಅನುಪಾತದಲ್ಲಿ ಒಪ್ಪಿಗೆ ಸೂಚಿಸಿರುವವ 30 ಎಕರೆ 10 ಗುಂಟೆ ಜಮೀನನ್ನು ಮೊದಲ ಹಂತದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ ಪೂರ್ವಾನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಾಧಿಕಾರದ ಸದಸ್ಯರಾದ ಹೆಚ್. ರವಿಕುಮಾರ್, ಎಂ.ಎಸ್. ಸಿದ್ಧಪ್ಪ, ಚಿನ್ನಪ್ಪ, ಆಯುಕ್ತ ವಿಶ್ವನಾಥ್ ಪಿ. ಮುದಜ್ಜಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















