ಈ ಹಿಂದೆ ಜಾರಿಯಲ್ಲಿದ್ದ ಮತಾಂತರ ನಿಷೇಧ ಕಾನೂನನ್ನು ರಾಜ್ಯ ಸರ್ಕಾರ ಹಿಂಪಡೆಯಲು ತೀರ್ಮಾನಿಸಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಶಾಖೆ ವತಿಯಿಂದ ಇಂದು ಗೋಪಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಸಭೆಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜೆ.ಆರ್. ವಾಸುದೇವ್, ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ನಿರ್ಧಾರವನ್ನು ಸರ್ಕಾರ ಕೂಡಲೇ ಕೈ ಬೀಡಬೇಕೆಂದು ಆಗ್ರಹಿಸಿದರು.
ಭಾರತವು ಹಿಂದೂ ರಾಷ್ಟ್ರವಾಗಿದ್ದು ಇಲ್ಲಿ ಹಿಂದುಗಳೊಡನೆ ಅನ್ಯಧರ್ಮೀಯರೂ ಸಹ ಸಹಬಾಳ್ವೆ ಮಾಡಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಅದರಂತೆ ಕರ್ನಾಟಕದಲ್ಲೂ ಸಹ ಹಿಂದೂಗಳೊಡನೆ ಅನ್ಯಧರ್ಮೀಯರೂ ತಮ್ಮ ಧರ್ಮ-ಮತಾಚರಣೆ ಮಾಡಲು ಅವಕಾಶವಿದೆ. ಇದನ್ನು ನಾವು ಒಪ್ಪುತ್ತೇವೆ ಮತ್ತು ಪ್ರಶ್ನಿಸುವುದಿಲ್ಲ. ಆದರೆ ಹಿಂದೂಗಳಿಗೆ ಆಮಿಷ ತೋರಿಸಿ ಅಥವಾ ಹೆದರಿಸಿ ಬಲವಂತವಾಗಿ ಮತಾಂತರಿಸುವುದನ್ನು ಅಥವಾ ಮರುಳು ಮಾಡಿ ಮತಾಂತರಿಸುವುದನ್ನು ನಾವು ಖಂಡಿಸುತ್ತೇವೆ ಎಂದರು.
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, ಮತಾಂತರ ಹಾಗೂ ಗೋ ಹತ್ಯೆಯಂತಹ ಕಾಯ್ದೆಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿರುವುದು ದೇಶಕ್ಕೆ ಮಾಡಿದ ಅಪಮಾನವಾಗಿದೆ. ಭಾರತವು ಹಿಂದೂ ರಾಷ್ಟ್ರವಾಗಿದೆ ಮತ್ತು ಕರ್ನಾಟಕವು ಭಾರತದ್ದೇ ಒಂದು ಭಾಗವಾಗಿದೆ. ಇಲ್ಲಿನ ಹಿಂದೂಗಳನ್ನು ಮತಾಂತರದಿಂದ ರಕ್ಷಿಸಿ ನಮ್ಮ ಧರ್ಮವನ್ನು ಕಾಪಾಡುವುದು ಪ್ರತಿಯೊಬ್ಬ ಹಿಂದುವಿನ ಕರ್ತವ್ಯವಾಗಿದೆ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರಕ್ಕೆ ಅನ್ಯಧರ್ಮೀಯರಲ್ಲದೆ ಅತಿ ಸಂಖ್ಯೆಯಲ್ಲಿ ಹಿಂದೂಗಳೂ ಸಹ ಮತ ಹಾಕಿದ್ದು, ಅವರ ಮತದಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯೇ ಹೊರತು ಕೇವಲ ಅಲ್ಪಸಂಖ್ಯಾತರಿಂದಲ್ಲ. ಇದು ಕಾಂಗ್ರೆಸ್ ತನಗೆ ಮತ ನೀಡಿದ ಸಮಸ್ತ ಹಿಂದೂ ಸಮಾಜಕ್ಕೆ ದ್ರೋಹ ಬಗೆದಂತಾಗಿದೆ. ಕರ್ನಾಟಕದ ಹಿಂದುಗಳು ಇದನ್ನು ಖಂಡಿಸುವುದರೊಂದಿಗೆ ಮಂತ್ರಿಮಂಡಲವು ತಾನು ತೆಗೆದುಕೊಂಡಿರುವ ನಿರ್ಧಾರವನ್ನು ಕೂಡಲೇ ಹಿಂತೆದುಕೊಳ್ಳಬೇಕೆಂದು ಆಗ್ರಹಿಸಿದರು.
Also read: ಸಾಹಿತ್ಯ ಓದುವುದರಿಂದ ಆರೋಗ್ಯಯುತ ವ್ಯಕ್ತಿತ್ವ ವೃದ್ಧಿ: ಗಂಗಾವತಿ ಪ್ರಾಣೇಶ್ ಅಭಿಪ್ರಾಯ
ಈ ಹಿಂದಿನ ಸರ್ಕಾರವು ಶಾಲಾ ಪಠ್ಯದಲ್ಲಿ ರಾಷ್ಟ್ರಪುರುಷರ ಪರಿಚಯವನ್ನು ಸೇರಿಸಿದ್ದನ್ನೂ ಸಹ ಸಂಕುಚಿತ ಭಾವನೆಯಿಂದ ಮತ್ತು ಅಲ್ಪಸಂಖ್ಯಾತರನ್ನು ತುಷ್ಟೀಕರಿಸುವ ಸಲುವಾಗಿ ಸಾವರ್ಕರ್ರವರಂತಹ ಅಪ್ರತಿಮ ದೇಶಭಕ್ತರ ಪರಿಚಯದ ಪಾಠಗಳನ್ನು ತೆಗೆಯಲು ನಿರ್ಧರಿಸುವುದನ್ನೂ ಮನವಿಯಲ್ಲಿ ಖಂಡಿಸಲಾಗಿದೆ.
ರಾಜ್ಯದಲ್ಲಿ ರೈತರ ಸಮಸ್ಯೆ, ಟ್ಯಾಕ್ಸಿ ಚಾಲಕರು, ಆಟೋ ಚಾಲಕರು, ಖಾಸಗಿ ಬಸ್ ಮಾಲೀಕರು ಹಾಗೂ ನಿರ್ವಾಹಕರ ಸಮಸ್ಯೆಗಳು ತಲೆದೋರಿದ್ದು, ಸರ್ಕಾರ ಇಂತಹ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯೋಚಿಸುವ ಬದಲು ಈ ರೀತಿ ಸಮಾಜದಲ್ಲಿ ಶಾಂತಿಯನ್ನು ಕದಡುವ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ, ಉತ್ತಮ ಆಡಳಿತ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಆರ್ಎಸ್ಎಸ್ ಪ್ರಮುಖ ಪಟ್ಟಾಭಿರಾಮ್, ಶಾಸಕ ಎಸ್.ರುದ್ರೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಲಕ್ಷ್ಮೀ ಶಂಕರ ನಾಯಕ್, ಪ್ರಮುಖರಾದ ಆರ್.ಕೆ.ಸಿದ್ದರಾಮಣ್ಣ, ನಟರಾಜ್ ಭಾಗವತ್, ಗಿರೀಶ್ ಕಾರಂತ್, ಜಗದೀಶ್, ಈ.ವಿಶ್ವಾಸ್, ತಮ್ಡಿಹಳ್ಳಿ ನಾಗರಾಜ್, ಗಿರೀಶ್ ಪಟೇಲ್, ರಾಜೇಶ್ ಗೌಡ, ದೀನದಯಾಳ್, ನಾರಾಯಣ ವರ್ಣೇಕರ್, ಬಿ.ವೈ. ರಂಗನಾಥ್, ಲೋಕೇಶ್ವರ್ ಕಾಳೆ, ಬಳ್ಳೆಕೆರೆ ಸಂತೋಷ್ ಇನ್ನಿತರರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post