ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲಂಚದ ಆರೋಪ ಹೊತ್ತಿರುವ ಮಾಡಾಳ್ ವಿರೂಪಾಕ್ಷಪ್ಪನವರ ವಿರುದ್ಧ ನಾಳೆ ಕರೆನೀಡಿದ್ದ ಬಂದ್ ಅನ್ನು ಕೆಪಿಸಿಸಿಯ ನಿರ್ದೇಶನದ ಮೇರೆಗೆ ರದ್ದು ಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.
ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರ ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡಲು ಹೊರಟಿದೆ. ಈ ಹಿಂದೆ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಾಗಲೂ ಅದಕ್ಕೆ ಕಾರಣರಾದವರಿಗೆ ಕ್ಲೀನ್ಚಿಟ್ ನೀಡಲಾಗಿತ್ತು. ಈಗ ಬಂಧನದ ಭೀತಿಯಲ್ಲಿದ್ದ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಇದರ ಹಿಂದೆ ಬಿಜೆಪಿ ಸರ್ಕಾರದ ಪ್ರಭಾವವಿದೆ. ಭ್ರಷ್ಟಾಚಾರವನ್ನು ಮುಚ್ಚಿಹಾಕುವ, ರಕ್ಷಿಸುವ ಕೆಲಸವನ್ನು ಮುಖ್ಯಮಂತ್ರಿ ಸೇರಿದಂತೆ ಸರ್ಕಾರ ಮಾಡುತ್ತಿದೆ ಎಂದರು.
ಮಾಡಾಳ್ ವಿರೂಪಾಕ್ಷಪ್ಪನವರನ್ನು ಬಂಧಿಸಲು ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಬಂದ್ಗೆ ಕರೆ ನೀಡಿತ್ತು. ಆದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇರುವುದರಿಂದ ತೊಂದರೆಯಾಗಬಾರದು ಎಂದು ಈ ಬಂದ್ ಕೈಬಿಡಲಾಗಿದೆ. ಆದರೆ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ತನ್ನ ಹೋರಾಟವನ್ನು ಮುಂದುವರಿಸುತ್ತದೆ ಎಂದರು.
ರಣದೀಪ್ ಸಿಂಗ್ ಸುರ್ಜೆವಾಲಾ ಆಗಮನ:
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಾ.10ರಂದು ಶಿವಮೊಗ್ಗಕ್ಕೆ ಬರಲಿದ್ದು, ಅವರು ಬೆಳಿಗ್ಗೆ 10 ಗಂಟೆಗೆ ಲಗಾನ್ ಕಲ್ಯಾಣ ಮಂದಿರದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಕಾಂಗ್ರೆಸ್ ಪಕ್ಷದ ಜನಪ್ರಿಯ ಘೋಷಣೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಹಾಗೂ ಉಚಿತ ಅಕ್ಕಿ ವಿತರಣೆ ಸೇರಿದಂತೆ ಇತರ ಯೋಜನೆಗಳ ಕುರಿತು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸುವರು ಎಂದರು.
ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್, ಡಾ. ಸಿರಿವೆಳ್ಳ ಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಉಪಾಧ್ಯಕ್ಷ ಹೆಚ್.ಎಂ ರೇವಣ್ಣ ಹಾಗೂ ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಪ್ರಚಾರ ಸಮಿತಿಯ ಪ್ರಮುಖರು ಆಕಾಂಕ್ಷಿ ಅಭ್ಯರ್ಥಿಗಳು ಎಲ್ಲಾ ಸೆಲ್ಗಳ ಮಹಿಳಾ ಘಟಕಗಳ ಮುಖ್ಯಸ್ಥರು, ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್. ರಮೇಶ್, ಮಾಜಿ ಶಾಸಕರಾದ ಕೆ.ಬಿ. ಪ್ರಸನ್ನಕುಮಾರ್, ಆರ್. ಪ್ರಸನ್ನಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾಕುಮಾರಿ, ಪ್ರಮುಖರಾದ ಎಲ್. ಸತ್ಯನಾರಾಯಣ ರಾವ್, ಎಸ್.ಕೆ. ಮರಿಯಪ್ಪ, ದೀಪಕ್ ಸಿಂಗ್, ಮೆಹಕ್ ಷರೀಫ್, ಟಿ.ಕೃಷ್ಣಪ್ಪ, ಯು.ಶಿವಾನಂದ, ಸಿ.ಎಸ್. ಚಂದ್ರ ಭೂಪಾಲ್ ಇನ್ನಿತರರು ಉಪಸ್ಥಿತರಿದ್ದರು.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮ ರಾಜಕೀಯ ಗಿಮಿಕ್ : ಮಹೇಶ್ ಹುಲ್ಮಾರ್ ಆರೋಪ
ಶಿಕಾರಿಪುರದಲ್ಲಿ ನಾಳೆ ನಡೆಯುತ್ತಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮ ರಾಜಕೀಯ ಗಿಮಿಕ್ ಆಗಿದ್ದು, ಪಾಪದ ಹಣದಲ್ಲಿ ಪ್ರತಿಮೆ ಪ್ರತಿಷ್ಠಾಪನೆ ಸಲ್ಲದು ಎಂದು ಸಂಗೊಳ್ಳಿ ರಾಯಣ್ಣ ಹೋರಾಟ ಸಮಿತಿಯ ಅಧ್ಯಕ್ಷ ಮಹೇಶ್ ಹುಲ್ಮಾರ್ ಹೇಳಿದ್ದಾರೆ.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎರಡು ವರ್ಷದ ಹಿಂದೆಯೇ ಸಂಗೊಳ್ಳಿ ರಾಯಣ್ಣ ಪ್ರತಿಮೆಯ ಪ್ರತಿಷ್ಠಾಪನೆ ಆಗಬೇಕಿತ್ತು. ಆದರೆ ರಾತ್ರೋ ರಾತ್ರಿ ಅದನ್ನು ತೆರವುಗೊಳಿಸಲಾಗಿತ್ತು. ಇದರ ಹಿಂದೆ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳ ಚಿತಾವಣೆ ಇತ್ತು. ತೆರವುಗೊಳಿಸಿದ್ದನ್ನು ವಿರೋಧಿಸಿ ನಾವು ಪ್ರತಿಭಟನೆ ಮಾಡಿದ್ದೆವು. ನಂತರ ರಾಯಣ್ಣನವರ ಅಭಿಮಾನಿಗಳ ಹೋರಾಟದ ಫಲವಾಗಿ ಪ್ರತಿಮೆ ಸ್ಥಾಪನೆಗೆ ಜಾಗವನ್ನು ಪುರಸಭೆಯಿಂದ ಒದಗಿಸಲಾಗಿತ್ತು ಎಂದರು.
ಆದರೆ ಈಗ ಏಕಾಏಕಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಇದನ್ನು ಒಂದು ಕುಟುಂಬದ ಕಾರ್ಯಕ್ರಮವೆಂಬಂತೆ ಬಿಂಬಿಸಲಾಗಿದೆ. ಆಮಂತ್ರಣ ಪತ್ರಿಕೆಯಲ್ಲೂ ಕೂಡ ಕೇವಲ ಬಿ.ಎಸ್. ಯಡಿಯೂರಪ್ಪ, ಬಿ.ವೈ. ರಾಘವೇಂದ್ರ, ಬಿ.ವೈ,. ವಿಜಯೇಂದ್ರ ಅವರ ಹೆಸರಿದೆ. ಈ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವೆಂಬಂತೆ ಬಿಂಬಿಸಲಾಗುತ್ತಿದೆ. ಆ ಮೂಲಕ ಚುನಾವಣೆಯ ಲಾಭ ಪಡೆಯಲು ಯಡಿಯೂರಪ್ಪ ಕುಟುಂಬ ಹೊರಟಿದೆ ಎಂದು ಆರೋಪಿಸಿದರು.
ಇದರ ಜೊತೆಗೆ ಡಾ. ಅಂಬೇಡ್ಕರ್, ಶರಣೆ ಅಕ್ಕಮಹಾದೇವಿ, ಜಗಜ್ಯೋತಿ ಬಸವೇಶ್ವರ ಅವರ ಪ್ರತಿಮೆಗಳನ್ನು ಕೂಡ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ಮಹಾನ್ ವ್ಯಕ್ತಿಗಳನ್ನು ಕೇವಲ ಜಾತಿಗೆ ಸೀಮಿತಗೊಳಿಸಲು ಈ ಕುಟುಂಬ ಹೊರಟಿದೆ. ಇದನ್ನು ನಾವು ವಿರೋಧಿಸುತ್ತೇವೆ. ಪಕ್ಷಾತೀತವಾಗಿ ನಡೆಯಬೇಕಾಗಿದ್ದ ಒಂದು ಕಾರ್ಯಕ್ರಮ ಕುಟುಂಬದ ಹಾಗೂ ಚುನಾವಣೆಯ ಕಾರ್ಯಕ್ರಮವನ್ನಾಗಿ ಮಾಡಲು ಹೊರಟಿರುವುದನ್ನು ನಮ್ಮ ಹೋರಾಟ ಸಮಿತಿ ಖಂಡಿಸುತ್ತದೆ ಮತ್ತು ಪ್ರತಿಮೆ ಅನಾವರಣಗೊಳಿಸುವ ಸ್ಥಳದಲ್ಲಿ ನಾವು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಬೂದಪ್ಪ, ಗೋಣಿ ಪ್ರಕಾಶ್, ಅಬೂಸಾಲಿ, ಮಾರ್ವಳ್ಳಿ ಉಮೇಶ್, ಮಂಜು ಇದ್ದರು.
ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷರಾಗಿ ಶರತ್ ಮರಿಯಪ್ಪ
ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷರಾಗಿ ಶರತ್ ಮರಿಯಪ್ಪ ನೇಮಕಗೊಂಡಿದ್ದಾರೆ.
ಶರತ್ ಮರಿಯಪ್ಪ ಅವರು ಈ ಹಿಂದೆ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಕಾರ್ಯಕ್ಷಮತೆ ಮೆಚ್ಚಿ ಈಗ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಭಗವಂತರಾಯ ಗೌಡ ನೇಮಕ ಮಾಡಿದ್ದಾರೆ.
ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಚಂದ್ರಪ್ಪ ಗೆಡ್ಡೆ, ನಿರ್ದೇಶಕರಾಗಿ ಕೇಶವ ಸೀಗೇಹಟ್ಟಿ, ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ರಾಖೇಶ್, ಸಹಕಾರ್ಯದರ್ಶಿಗಳಾಗಿ ಪ್ರದೀಪ್ ಹಾಗೂ ಪವನ್ ನೇಮಕಗೊಂಡಿದ್ದಾರೆ.
ತಮಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಸಮಾಜದ ಸಂಘಟನೆಗೆ ಒತ್ತು ಕೊಡುತ್ತೇನೆ ಎಂದು ಈ ಸಂದರ್ಭದಲ್ಲಿ ಶರತ್ ಮರಿಯಪ್ಪ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















