ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಹೊರವರ್ತುಲ ರಸ್ತೆ, ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ, ಹಳೆ ಜೈಲು ಪ್ರದೇಶದಲ್ಲಿ ಸಾರ್ವಜನಿಕರ ಬಳಕೆಗೆ ಉದ್ಯಾನವನ, ಮೈದಾನ ಸೇರಿದಂತೆ ಮೂಲಸೌಲಭ್ಯಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದ್ದು, ಶಿವಮೊಗ್ಗ ನಗರವನ್ನು ಮಾದರಿ ನಗರವನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಶಿವಮೊಗ್ಗ ನಗರದಲ್ಲಿ 32ಕಿಮಿ ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯಕ್ಕೆ ಆದಷ್ಟು ಬೇಗನೆ ಚಾಲನೆ ನೀಡಲಾಗುವುದು. ಈಗಾಗಲೇ ಸುಮಾರು ಶೇ.30ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನುಳಿದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಈಗಾಗಲೇ ಭೂಸ್ವಾಧೀನ ಪೂರ್ಣಗೊಂಡಿರುವ ಕಡೆಗಳಲ್ಲಿ ಕಾಮಗಾರಿಯನ್ನು ಆರಂಭಿಸಬೇಕು ಎಂದು ಅವರು ಸೂಚನೆ ನೀಡಿದರು.
ಶಿವಮೊಗ್ಗ ಹೊರ ವಲಯದಲ್ಲಿ ನೆನಗುದಿಗೆ ಬಿದ್ದಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ತಕ್ಷಣ ಆರಂಭಿಸಲು 40ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಪ್ರಸ್ತುತ 1500ಮೀಟರ್ವರೆಗೆ ರನ್ವೇ ನಿರ್ಮಾಣಕ್ಕೆ ಯಾವುದೇ ತಾಂತ್ರಿಕ ತೊಡಕು ಇರುವುದಿಲ್ಲ. ಏರ್ಬಸ್ನಂತಹ ವಿಮಾನಗಳ ಹಾರಾಟಕ್ಕೆ 1800 ಮೀಟರ್ ರನ್ವೇ ಅಗತ್ಯವಿದ್ದು, ಇದಕ್ಕೆ ಎದುರಾಗುವ ಎಲ್ಲಾ ತಾಂತ್ರಿಕ ತೊಡಕುಗಳನ್ನು ನಿವಾರಿಸಿ ಆದಷ್ಟು ಬೇಗನೆ ವಿಮಾನ ನಿಲ್ದಾಣ ಕಾಮಗಾರಿಯನ್ನು ಆರಂಭಿಸಬೇಕು ಎಂದು ಹೇಳಿದರು.
ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಹಳೆ ಜೈಲಿನ ಪ್ರದೇಶದಲ್ಲಿ ಸ್ಮಾರಕಗಳನ್ನು ಉಳಿಸಿಕೊಂಡು ಫ್ರೀಡಂ ಪಾರ್ಕ್, ಸುಂದರವಾದ ವಿಶಾಲ ಉದ್ಯಾನವನ, ಸಾರ್ವಜನಿಕರ ಬಳಕೆಗೆ ಮೈದಾನ, ಸಭೆ ಸಮಾರಂಭಗಳನ್ನು ನಡೆಸಲು ಅವಕಾಶ ಸೇರಿದಂತೆ ನಾಗರಿಕರಿಗೆ ಅನುಕೂಲವಾಗುವಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಕುರಿತು ಸಮಗ್ರ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಲು ಸೂಚಿಸಲಾಗಿದೆ. ಪೊಲೀಸ್ ತರಬೇತಿ ಕೇಂದ್ರ ನಿರ್ಮಾಣಕ್ಕೆ ಅಗತ್ಯವಾದ 50ಎಕ್ರೆ ಸ್ಥಳವನ್ನು ಬೇರೆ ಕಡೆ ಗುರುತಿಸಲು ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಮತ್ತಿತರರು ಉಪಸ್ಥಿತರಿದ್ದರು
Ramachandrapura Seer Hails PM Narendra Modi’s Leadership
Kalpa Media House | Honavar/Sagara | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...
Read moreDetails
















