Read - 2 minutes
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಜಾನ್ ವಿಚಾರವಾಗಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಅನೇಕರು ತಮಗಾಗುತ್ತಿರುವ ತೊಂದರೆಯನ್ನು ಬಾಯಿಬಿಟ್ಟಿ ಹೇಳುವುದಿಲ್ಲ. ಆದರೆ ನಾನು ಅದನ್ನು ಹೇಳುತ್ತೇನೆ. ಜೋರಾಗಿ ಆಜಾನ್ ಕೂಗುವುದರಿಂದ ಅನೇಕರಿಗೆ ತೊಂದರೆಯಾಗುತ್ತಿರುವುದಂತೂ ಸತ್ಯ ಎಂದು ಹೇಳಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕೆಂದರೆ ಆಜಾನ್ ಕೂಗುವುದರಿಂದ ವಿದ್ಯಾರ್ಥಿಗಳಿಗೆ ಎಷ್ಟು ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಗೊತ್ತು. ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಗೊತ್ತು. ಹೀಗೆ ಆಗುತ್ತಿರುವ ತೊಂದರೆಯನ್ನು ನಾನು ಬಹಿರಂಗವಾಗಿ ಹೇಳುತ್ತೇನೆ. ಇದಕ್ಕೆ ಹಿಂದೆ ಮುಂದೆ ನೋಡುವುದಿಲ್ಲ ಎಂದರು.

ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ರವರೆಗೆ ಧ್ವನಿವರ್ಧಕ ಬಳಸದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹೇಗಿದ್ದರು ಕೂಡ ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಾರೆ ಎಂದರೆ ಪ್ರತಿಭಟನೆ ನಡೆಸಲಿ ಬಿಡಿ. ಹೀಗೆ ನನ್ನ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆ ನಡೆಸಿದರು ಜನಸಾಮಾನ್ಯರ ಭಾವನೆಗಳನ್ನು ನಾನು ಬಹಿರಂಗವಾಗಿ ಹೇಳುವವನೇ ಎಂದರು.
Also read: ಮಾ.19ರಂದು ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನ
ಮೂಡಿಗೆರೆ ಶಾಸಕ ಕುಮಾರಸ್ವಾಮಿ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ಇದೆ. ಪ್ರತಿಭಟನೆ ನಡೆಸಲು ಅವಕಾಶ ಇಲ್ಲ ಎಂದರೆ ಅದನ್ನು ಪ್ರಜಾಪ್ರಭುತ್ವ ವ್ಯವಸ್ಥೆ ಎನ್ನಲು ಸಾಧ್ಯವಿಲ್ಲ. ಆದರೆ ಪ್ರತಿಭಟನೆ ನಡೆಸುವವರು ತಾವು ಯಾರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ, ಪ್ರತಿಭಟನೆ ನಡೆಸುತ್ತಿರುವುದು ಸರಿಯೋ ತಪ್ಪು ಎಂಬುದನ್ನು ತಿಳಿದುಕೊಳ್ಳಬೇಕು. ಸರಿ ಇಲ್ಲ ಎಂದರೆ ತಿದ್ದಿಕೊಳ್ಳಬೇಕು ಎಂದರು.

ಜನಪ್ರತಿನಿಧಿಗಳು ಕೂಡ ಕಾರ್ಯಕರ್ತರುಗಳ ಹಾಗೂ ಜನರ ವಿಶ್ವಾಸ ಗಳಿಸಬೇಕು. ಸಣ್ಣಪುಟ್ಟ ವ್ಯತ್ಯಾಸಗಳಿದ್ದಲ್ಲಿ ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಚಿವ ವಿ. ಸೋಮಣ್ಣ ಕುರಿತು ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಬಿಜೆಪಿಯೊಂದಿಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸಚಿವರೆ ಸ್ಪಷ್ಟಪಡಿಸಿದ್ದಾರೆ ಹೀಗಿರುವಾಗ ಪದೇ ಪದೇ ಅದೇ ಪ್ರಶ್ನೆಯನ್ನು ಕೇಳುವುದು ಏಕೆ ಎಂದು ಖಾರವಾಗಿ ಉತ್ತರಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Discussion about this post