ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
‘ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ #Bangarappa ಅವರ ಸೋಲಿಗೆ ನ್ಯಾಯ ಕಂಡುಕೊಳ್ಳಬೇಕಿದೆ. ಅದೇ, ಕಾರಣಕ್ಕೆ ಗೀತಾ ಶಿವರಾಜಕುಮಾರ್ #Geetha Shivarajkumar ಅವರಿಗೆ ಮತ ನೀಡಿ ಆಶೀರ್ವದಿಸಬೇಕು’ ಎಂದು ಅರಣ್ಯ ಮತ್ತು ಕೈಗಾರಿಕಾ ನಿಗಮ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹೊಸನಗರ ತಾಲ್ಲೂಕು ಬೆಳ್ಳೂರು ಗ್ರಾಮದಲ್ಲಿ ಆಯೋಜಿಸಿದ್ದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಇಲ್ಲಿ ಸಂಸದ ಬಿ.ವೈ.ರಾಘವೇಂದ್ರ #B Y Raghavendra ಹಾಗೂ ಮಾಜಿ ಶಾಸಕ ಹಾಲಪ್ಪ ಅವರು ಮುಳುಗಡೆ ರೈತರ ಕತ್ತು ಹಿಸುಕುತ್ತಿದ್ದಾರೆ. ಜಿಲ್ಲೆಯಲ್ಲಿ 15 ವರ್ಷ ಆಡಳಿತ ನಡೆಸಿದ್ದಾರೆ. ಆದರೆ, ಕೇಂದ್ರ ಸರ್ಕಾರದ ಹಂತದಲ್ಲಿ ನೊಂದ ರೈತರಿಗೆ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದರು.
ಹಿಂದೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ರೈತರಿಗೆ ಹಕ್ಕು ಪತ್ರ ನೀಡಿದ್ದರು. ಆದರೆ, ಪ್ರಸ್ತುತ ಸಂಸದ ರಾಘವೇಂದ್ರ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು, ತಮ್ಮ ಆಸ್ತಿ ಇರುವ ಕಡೆ ಮಾತ್ರ ಅಭಿವೃದ್ಧಿ ಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ನೆಟ್ವರ್ಕ್ ಹುಡುಕಬೇಕು ಎಂದರೆ, ಬೆಟ್ಟ- ಗುಡ್ಡ ಏರಬೇಕು. ಇದು ಬಿಜೆಪಿಯ ಸಾಧನೆ ಎಂದರು.
ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ಸ್ವಯಂ ಉದ್ಯೋಗ ಸೃಷ್ಟಿಗೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಹಕಾರಿ ಆಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮತದಾರರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದಾರೆ. ಅದೇ ರೀತಿ, ನಾನೂ ಕೂಡ ಜಿಲ್ಲೆಯ ಎಲ್ಲಾ ವರ್ಗದವರ ಪರವಾಗಿ ಧ್ವನಿಯಾಗಿ ನಿಲ್ಲುತ್ತೇನೆ. ಆದ್ದರಿಂದ ಚುನಾವಣೆಯಲ್ಲಿ ಮತ ನೀಡಿ ಹರಸಿ ಎಂದು ಕೋರಿದರು.
Also read: ವಿಜಯೇಂದ್ರಗೆ ಬೇರೆಯದೇ ಭಾಷೆಯಲ್ಲಿ ಉತ್ತರಿಸಬೇಕು | ಈಶ್ವರಪ್ಪ ಹೀಗೆ ಹೇಳಿದ್ದೇಕೆ?
ನಟ ಶಿವಕುಮಾರ್ ಮಾತನಾಡಿ, ಹಳ್ಳಿಗಳಲ್ಲಿ ಬಾಂಧವ್ಯ ಹೆಚ್ಚು. ಗೀತಾ ಅವರು ಶಿವಮೊಗ್ಗದ ಮಗಳು. ಆದ್ದರಿಂದ ಜಿಲ್ಲೆಯ ಋಣ ತೀರಿಸಲು ಒಂದು ಅವಕಾಶ ಮಾಡಿಕೊಡಿ, ಗೀತಾ ಅವರಿಂದ ಕೆಲಸ ಮಾಡಿಸುವುದು ನನ್ನ ಜವಬ್ದಾರಿ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಮಾತನಾಡಿ, ಬಡತನ ಮತ್ತು ಭಾವನೆಗಳ ಮಧ್ಯ ನಡೆಯುತ್ತಿರುವ ಚುನಾವಣೆ ಇದು. ಬಿಜೆಪಿ ಬಡವರ ಬದುಕಿನ ಬಗ್ಗೆ ಮಾತನಾಡುತ್ತಿಲ್ಲ. ಕೇವಲ ರಾಮ ಮಂದಿರ ಬಗ್ಗೆ ಹೆಚ್ಚು ಚರ್ಚಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆ ಉಚಿತವಾಗಿ ನೀಡಿದರೆ, ಸರ್ಕಾರದ ಖಜಾನೆ ಖಾಲಿ ಆಗಲಿದೆ ಎಂದು ಬಿಜೆಪಿಗರು ಟೀಕಿಸುತ್ತಿದ್ದಾರೆ. ಆದರೆ, ಬಿಜೆಪಿ ಆಡಲಿತದಲ್ಲಿ ಶೇ 40 ಕಮಿಷನ್ ಲೂಟಿ ಹೊಡೆದಾಗ ಸರ್ಕಾರದ ಖಜಾನೆ ಕಾಲಿ ಆಗಿಲ್ಲವ ಎಂದು ಪ್ರಶ್ನಿಸಿದರು.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಆಡಳಿತಾವಧಿಯಲ್ಲಿ ನೂರಾರು ದೇವಾಲಯಗಳನ್ನು ನಿರ್ಮಿಸಿದ್ದಾರೆ. ಆದರೆ, ಎಲ್ಲಿಯೂ ಪ್ರಚಾರ ಪಡೆಯಲಿಲ್ಲ. ಬಿಜೆಪಿಯವರು ಪ್ರಚಾರಕ್ಕಾಗಿಯೇ, ದೇವರ ಹೆಸರಿನಲ್ಲಿ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ. ಆದ್ದರಿಂದ, ಈ ಬಾರಿ ಲೋಕ ಸಭಾ ಚುನಾವಣೆಯಲ್ಲಿ ಗೀತಾ ಶಿವರಾಜಕುಮಾರ್ ಅವರಿಗೆ ಬೆಂಬಲಿಸಬೇಕು ಎಂದರು.
ತಾಲ್ಲೂಕಿನ ಹಾರೋಹಿತ್ಲು, ಕೆಂಚನಾಳ, ಅರಸಾಳು, ಕೋಡೂರು, ಮಾರುತಿಪುರ, ಬಾಳೂರು, ಮುಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ಆಯೋಜಿಸಲಾಗಿತ್ತು.
ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಶ್ವೇತ ಬಂಡಿ, ಅನಿತಾ ಕುಮಾರಿ, ಬಂಡಿ ರಾಮಚಂದ್ರಪ್ಪ, ಬಿ.ಪಿ.ರಾಮಚಂದ್ರಪ್ಪ, ಸಾಕಮ್ಮ, ಧನಲಕ್ಷ್ಮೀ, ವೈ.ಚ್.ನಾಗರಾಜ, ಸುಮಾ ಸುಬ್ರಹ್ಮಣ್ಯ, ಪ್ರವೀಣ್ ಲಕ್ಷ್ಮೀಕಾಂತ್, ಮಹೇಂದ್ರ ಬುಕ್ಕೆಹೊರೆ, ಸೂಡೂರು ಶಿವಣ್ಣ, ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















